ಬೀದರ್: ಸಶಕ್ತ ಹಾಗೂ ಸದೃಢ ಭಾರತ ನಿರ್ಮಾಣದಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಶಿಕ್ಷಣದ ಜೊತೆಗೆ ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ. ಚಂದ್ರಕಾಂತ್ ಗಂಗಶಟ್ಟಿ ಹೇಳಿದರು.

ಬಸವಕಲ್ಯಾಣದ ಐಡಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ 2026-27ನೇ ಸಾಲಿನ ತಾಲೂಕು ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರ “ಸದೃಢ ಶರೀರದಲ್ಲಿ ಸದೃಢ ಮನಸ್ಸು” ಎಂಬ ಸಂದೇಶವನ್ನು ಉಲ್ಲೇಖಿಸಿ, ಆರೋಗ್ಯ ಮತ್ತು ಚಾರಿತ್ರ್ಯ ಎರಡೂ ಜೀವನದಲ್ಲಿ ಅತ್ಯಂತ ಮುಖ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಐಡಿಯಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮುಜಾಹಿದ್ ಪಾಶಾ ಖುರೇಶಿ ಮಾತನಾಡಿ, ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರು ಭಾಗವಹಿಸಿರುವುದು ಸಂತಸದ ಸಂಗತಿ. ತಾಲೂಕು ಮಟ್ಟದಿಂದ ಜಿಲ್ಲಾ, ರಾಜ್ಯ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಸವಕಲ್ಯಾಣ ಹಾಗೂ ದೇಶಕ್ಕೆ ಕೀರ್ತಿ ತರುವಂತೆ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವ ಮನೋಭಾವ ಮುಖ್ಯ. ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ನಿರಂತರ ಪರಿಶ್ರಮದಿಂದ ಸಾಧನೆಯತ್ತ ಸಾಗಬೇಕು ಎಂದು ಅವರು ಹೇಳಿದರು.

2026ರ ಫೀಫಾ ವಿಶ್ವಕಪ್‌ನಲ್ಲಿ ಲಮೀನ್ ಯಮಾಲ್ ಅವರಂತಹ ಯುವ ಪ್ರತಿಭೆಗಳು ವಿಶ್ವದ ಗಮನ ಸೆಳೆದಿರುವುದನ್ನು ಉದಾಹರಿಸಿ, ವಿದ್ಯಾರ್ಥಿಗಳೂ ತಮ್ಮ ಪ್ರತಿಭೆಯನ್ನು ಬೆಳೆಸಿಕೊಂಡು ಉನ್ನತ ಮಟ್ಟದ ಕ್ರೀಡಾಪಟುಗಳಾಗಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ನಿವೃತ್ತ ಉಪನೀರ್ದೆಶಕ ಚಂದ್ರಕಾಂತ್ ಶಾಬಾದಕರ್, ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಓಂಪ್ರಕಾಶ್ ಧಡ್ಡೆ, ಸಂಘದ ರಾಜ್ಯ ಪ್ರತಿನೀಧಿಗಳಾದ ಬಾಲಾಜಿ ವಾಡೇಕರ್, ಪ್ರಧಾನ ಕಾರ್ಯದರ್ಶಿ ಶಿವರಾಜ್ ಬೀರಾದಾರ್, ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಶಿವಕುಮಾರ್ ಕೋಸಂ, ಕಾರ್ಯಧ್ಯಕ್ಷ ಶ್ರೀಕಾಂತ್ ದಾಡಗೆ, ಜಿಲ್ಲಾ ಕ್ರೀಡಾ ಸಂಯೋಜಕ ಶರಣಪ್ಪ ನಾಟೀಕರ್, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಮುಜತಹಿದ್ ಉಮರ್, ಮುಕ್ತದಿರ್ ಉಮರ್ ಖುರೇಶಿ, ಪ್ರಾಚಾರ್ಯ ವಿ.ವೇಂಕಟರಾವ್, ಕ್ರೀಡಾ ನಿರ್ದೇಶಕ ರಹೀಮ್ ಕಾರಿಗಾರ್, ಕರೀಮ್, ಶಿವಕುಮಾರ್, ಸತೀಶ್ ಹಾಗೂ ಸತೀಶ್ ಧನಗಾವೆ ಸೇರಿದಂತೆ ತಾಲ್ಲೂಕಿನ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ದೈಹಿಕ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ರಾಜಕುಮಾರ್ ರಾಠೊಡ್ ಸ್ವಾಗತಿಸಿದರು. ಉಪಪ್ರಾಚಾರ್ಯ ಶಾಂತಲಿಂಗ್ ಮಠಪತಿ ನಿರೂಪಿಸಿ, ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor