Bidar | ಪತ್ರಕರ್ತರ ಮೇಲೆ ಪೊಲೀಸ್ ಹಲ್ಲೆ ಆರೋಪ: ತನಿಖೆಗೆ ಆಗ್ರಹ
ಬೀದರ್: ನವದೆಹಲಿಯ ಸಾಕೇತ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಾಧ್ಯಮ ಪ್ರತಿನಿಧಿಗಳಾದ ಶಾಹೀನ್ ಖಾನ್ ಹಾಗೂ ನಫೀಸಾ ಖಾನ್ ಅವರ ಮೇಲೆ ಪೊಲೀಸ್ ಸಿಬ್ಬಂದಿ ದೈಹಿಕ ಹಲ್ಲೆ ನಡೆಸಿ, ಬಲವಂತವಾಗಿ ಠಾಣೆಗೆ ಕರೆದೊಯ್ದು ಕಾನೂನುಬಾಹಿರವಾಗಿ ಬಂಧಿಸಿ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಹಾಗೂ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ವರ್ಕಿಂಗ್ ಜರ್ನಲಿಸ್ಟ್ಸ್ ಯೂನಿಯನ್ ಸೋಶಿಯಲ್ ಅಂಡ್ ವೆಲ್ಫೇರ್ ಅಸೋಸಿಯೇಷನ್ ಜಿಲ್ಲಾ ಘಟಕ ಆಗ್ರಹಿಸಿದೆ.
ಈ ಕುರಿತು ಜಿಲ್ಲಾಧಿಕಾರಿ ಮೂಲಕ ಪ್ರಧಾನಮಂತ್ರಿಗೆ ಸಲ್ಲಿಸಿದ ಮನವಿಯಲ್ಲಿ, 4ಪಿಎಂ ನ್ಯೂಸ್ ನೆಟ್ವರ್ಕ್ನ ಪತ್ರಕರ್ತರಾದ ಶಾಹೀನ್ ಖಾನ್ ಹಾಗೂ ನಫೀಸಾ ಖಾನ್ ಅವರು ನವದೆಹಲಿಯಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದನ್ನು ವರದಿ ಮಾಡುತ್ತಿದ್ದ ಸಂದರ್ಭದಲ್ಲಿ ಸಾಕೇತ್ ಪೊಲೀಸ್ ಠಾಣೆಯ ಸಿಬ್ಬಂದಿ ಅವರೊಂದಿಗೆ ಅನುಚಿತವಾಗಿ ವರ್ತಿಸಿ, ಬಲವಂತವಾಗಿ ಠಾಣೆಗೆ ಕರೆದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ.
ಈ ವೇಳೆ ಪೊಲೀಸ್ ಸಿಬ್ಬಂದಿ ಲಾಠಿಯಿಂದ ಹೊಡೆದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಾಗೂ ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಪತ್ರಕರ್ತರು ಆರೋಪಿಸಿದ್ದಾರೆ. ಈ ಘಟನೆ ಪತ್ರಕರ್ತರ ವೃತ್ತಿಪರ ಕರ್ತವ್ಯ ನಿರ್ವಹಿಸುವ ಹಕ್ಕು ಹಾಗೂ ಮಾಧ್ಯಮ ಸ್ವಾತಂತ್ರ್ಯದ ದೃಷ್ಟಿಯಿಂದ ಗಂಭೀರವಾಗಿದ್ದು, ಈ ಕುರಿತು ನಿಷ್ಪಕ್ಷಪಾತ ಹಾಗೂ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಸಂಬಂಧಪಟ್ಟ ಪೊಲೀಸ್ ಸಿಬ್ಬಂದಿ ಹಾಗೂ ಸಾಕೇತ್ ಪೊಲೀಸ್ ಠಾಣೆಯ ಠಾಣಾಧಿಕಾರಿಯನ್ನು ತನಿಖೆ ಪೂರ್ಣಗೊಳ್ಳುವವರೆಗೆ ಅಮಾನತುಗೊಳಿಸಬೇಕು. ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಕಾನೂನುಗಳ ಅಡಿಯಲ್ಲಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.
ತನಿಖೆಯನ್ನು ಜಂಟಿ ಪೊಲೀಸ್ ಆಯುಕ್ತರ ಹುದ್ದೆಗಿಂತ ಕಡಿಮೆಯಲ್ಲದ ಅಧಿಕಾರಿಯ ನೇತೃತ್ವದಲ್ಲಿ ಕಾಲಮಿತಿಯೊಳಗೆ ನಡೆಸಿ, ಘಟನೆಯ ಸಂಪೂರ್ಣ ಸತ್ಯಾಂಶವನ್ನು ಬಹಿರಂಗಪಡಿಸಬೇಕು. ದೇಶಾದ್ಯಂತ ಪತ್ರಕರ್ತರು ವೃತ್ತಿಪರ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಅವರ ಸುರಕ್ಷತೆ, ಸ್ವಾತಂತ್ರ್ಯ ಹಾಗೂ ಸಂವಿಧಾನಾತ್ಮಕ ಹಕ್ಕುಗಳನ್ನು ರಕ್ಷಿಸಲು ಪೊಲೀಸ್ ಇಲಾಖೆಗೆ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿವ ವರ್ಕಿಂಗ್ ಜರ್ನಲಿಸ್ಟ್ಸ್ ಯೂನಿಯನ್ ಸೋಶಿಯಲ್ ಅಂಡ್ ವೆಲ್ಫೇರ್ ಅಸೋಸಿಯೇಷನ್ ಜಿಲ್ಲಾ ಘಟಕದ ಅಧ್ಯಕ್ಷ ನರ್ಸಿಂಗ್ ಎಂ. ಸಮ್ರಾಟ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಮ್ಜದ್ ಪಾಷಾ, ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಬ್ದುಲ್ ಖಾಲೆದ್, ಕರ್ನಾಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಡಿ. ಅನ್ವರ್ ಶಾ, ಕಲ್ಯಾಣ ಕರ್ನಾಟಕ ಸಂಯೋಜಕ ಎಸ್. ಮುಬಾಶಿರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಶ್ವ ಗಾಯಕವಾಡ್, ಜಿಲ್ಲಾ ಉಪಾಧ್ಯಕ್ಷ ಬಾಬುರಾವ್ ಜ್ಯೋತಿ, ಕರ್ನಾಟಕ ರಾಜ್ಯ ಸದಸ್ಯ ಜೈ ಭೀಮ್ ಶರ್ಮಾ ಹಾಗೂ ಬೀದರ್ ನಗರ ಉಪಾಧ್ಯಕ್ಷ ಖಾನ್ ಬಹದ್ದೂರ್ ಉಪಸ್ಥಿತರಿದ್ದರು.