×
Ad

ಬೀದರ್‌| ಗಡಿನಾಡು, ಹೊರನಾಡು ಕನ್ನಡಿಗರ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಮನವಿ

Update: 2026-05-19 21:06 IST

ಬೀದರ್ : ಗಡಿನಾಡು ಹಾಗೂ ಹೊರನಾಡು ಕನ್ನಡಿಗರ ಜ್ವಲಂತ ಸಮಸ್ಯೆಗಳಿಗೆ ಸರ್ಕಾರ ಶಾಶ್ವತ ಪರಿಹಾರ ಕಲ್ಪಿಸಬೇಕು ಮತ್ತು ಗಡಿನಾಡು ಕನ್ನಡ ವಿದ್ಯಾರ್ಥಿಗಳ ಕನ್ನಡ ಮಾಧ್ಯಮ ಪ್ರಶಸ್ತಿ ಹಾಗೂ ಶಿಷ್ಯವೇತನ ಯೋಜನೆಯನ್ನು ತಕ್ಷಣವೇ ಮರುಜಾರಿಗೆ ತರಬೇಕು ಎಂದು ಹೊರನಾಡು ಕನ್ನಡಿಗರ ಹೋರಾಟ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಅವರಿಗೆ ಮಂಗಳವಾರ ಸಲ್ಲಿಸಿದ ಮನವಿ ಪತ್ರದಲ್ಲಿ, 2011-12ರಲ್ಲಿ ಆರಂಭವಾಗಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಗಡಿನಾಡು ಕನ್ನಡ ವಿದ್ಯಾರ್ಥಿಗಳ ಕನ್ನಡ ಮಾಧ್ಯಮ ಪ್ರಶಸ್ತಿ ಹಾಗೂ ಶಿಷ್ಯವೇತನ ಯೋಜನೆಯನ್ನು 2022-23ರಿಂದ ಸ್ಥಗಿತಗೊಳಿಸಲಾಗಿದೆ. ಈ ಯೋಜನೆ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ನೆರವಾಗುತ್ತಿತ್ತು. ಗಡಿಭಾಗಗಳಲ್ಲಿ ಕನ್ನಡ ಮಾಧ್ಯಮದ ಮೇಲಿನ ಆಸಕ್ತಿ ಹೆಚ್ಚಿಸಲು ಈ ಯೋಜನೆ ಪರಿಣಾಮಕಾರಿಯಾಗಿತ್ತು ಎಂದು ತಿಳಿಸಲಾಗಿದೆ.

ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಕೇರಳ, ತಮಿಳುನಾಡು ಹಾಗೂ ಗೋವಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಲಕ್ಷಾಂತರ ಕನ್ನಡಿಗರು ನೆಲೆಸಿದ್ದು, ಅವರ ಮಕ್ಕಳಿಗೆ ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಕರ್ನಾಟಕ ಸರಕಾರದಿಂದ ಸಮರ್ಪಕ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಲಾಗಿದೆ.

ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಜಿಲ್ಲೆಯ ನಾರಾಯಣಖೇಡ ತಾಲೂಕಿನ ಕಾರಾಮುಂಗಿ, ಶಿಖರಖಾನ್, ಗಡಿಗಾಂವ್, ಔಧತಪುರ್, ಎಸಗಿ, ಶಾಹಾಪುರ್, ಮೋರಗಿ, ಗೊಂದೆಗಾಂವ್, ರತ್ನಾಪುರ್ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಸುಮಾರು 485 ವಿದ್ಯಾರ್ಥಿಗಳು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈ ಕುರಿತು ಜಿಲ್ಲಾಡಳಿತ ಸರ್ಕಾರಕ್ಕೆ ವರದಿ ಸಲ್ಲಿಸಿ ವಿದ್ಯಾರ್ಥಿಗಳಿಗೆ ನೆರವು ಒದಗಿಸಬೇಕು ಎಂದು ಆಗ್ರಹಿಸಲಾಗಿದೆ.

ಡಾ. ಸರೋಜಿನಿ ಮಹಿಷಿ ಪರಿಷ್ಕೃತ ವರದಿ-2017, ಪ್ರೊ. ಬರಗೂರು ರಾಮಚಂದ್ರಪ್ಪ ಗಡಿನಾಡು ಅಧ್ಯಯನ ವರದಿ, ವಾಟಾಳ್ ನಾಗರಾಜ್ ಅವರ ಗಡಿಕನ್ನಡಿಗರ ಸಮಸ್ಯೆಗಳ ಅಧ್ಯಯನ ವರದಿ, ರಾಜ್ಯ ಸಾಂಸ್ಕೃತಿಕ ನೀತಿ ವರದಿ ಸೇರಿದಂತೆ ಹಲವು ಸಮಿತಿ ವರದಿಗಳನ್ನು ಸರ್ಕಾರ ತಕ್ಷಣ ಜಾರಿಗೆ ತರಬೇಕು ಎಂದು ಮನವಿ ಮಾಡಲಾಗಿದೆ.

ತೆಲಂಗಾಣದಲ್ಲಿ ಈ ಹಿಂದೆ ಇದ್ದ 140 ಕನ್ನಡ ಶಾಲೆಗಳ ಪೈಕಿ ಅನೇಕ ಶಾಲೆಗಳು ಮುಚ್ಚಲ್ಪಟ್ಟಿದ್ದು, 135 ಕನ್ನಡ ಶಿಕ್ಷಕರನ್ನು ಇಂಗ್ಲಿಷ್ ಶಿಕ್ಷಕರನ್ನಾಗಿ ಪರಿವರ್ತಿಸಲಾಗಿದೆ. ಹೈದರಾಬಾದ್‌ನಲ್ಲಿ ಸುಮಾರು 12 ಲಕ್ಷ ಕನ್ನಡಿಗರು ಹಾಗೂ 6 ಲಕ್ಷ ಮತದಾರರಿದ್ದರೂ ಕರ್ನಾಟಕ ಸರ್ಕಾರದಿಂದ ಸಮರ್ಪಕ ನೆರವು ಸಿಕ್ಕಿಲ್ಲ ಎಂದು ದೂರಲಾಗಿದೆ.

ಆರು ರಾಜ್ಯಗಳಲ್ಲಿ ಕರ್ನಾಟಕ ಸರ್ಕಾರದಿಂದ ಕನ್ನಡ ಭವನ ನಿರ್ಮಾಣಕ್ಕೆ ಅನುಮೋದನೆ ನೀಡಬೇಕು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೊರರಾಜ್ಯಗಳಿಂದ ನಾಮ ನಿರ್ದೇಶಿತ ಸದಸ್ಯರನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಲಾಗಿದೆ. ಸರ್ಕಾರ ಈ ಕುರಿತು ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಾಲಾಗಿದೆ.

ಈ ಸಂದರ್ಭದಲ್ಲಿ ಹೊರನಾಡು ಕನ್ನಡಿಗರ ಹೋರಾಟ ಸಮಿತಿಯ ಅಧ್ಯಕ್ಷ ಧರ್ಮೇಂದ್ರ ಪೂಜಾರಿ ಬಗ್ದೂರಿ, ಡಾ. ಜಗನ್ನಾಥ್ ಹೆಬ್ಬಾಳೆ, ಭೀಮರಾವ್ ಬೀದರಕರ್, ಡಾ. ರಾಜಕುಮಾರ್ ಹೆಬ್ಬಾಳೆ, ಕಾಶೀನಾಥ್ ಗಡ್ಡೆ ಕಾರಮುಂಗಿ, ರಾಜಕುಮಾರ್ ಮಡಕಿ ಸೇರಿದಂತೆ ಇತರರು ಉಪಸ್ಥಿತರಿದ್ದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News