Bidar | ಕೃಷ್ಣಮೃಗ ಬೇಟೆ ಪ್ರಕರಣ : ಆರು ಮಂದಿಯ ಬಂಧನ

ರೈಫಲ್‌ ಬಂದೂಕು ಸೇರಿ ಎರಡು ವಾಹನ ವಶ

Update: 2026-08-19 18:57 IST

ಬೀದರ್: ಹೊನ್ನಿಕೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದ ಸಮೀಪದ ಚೊಂಡಿ–ಮಮದಾಪುರ ಗ್ರಾಮದ ಹುಲ್ಲುಗಾವಲಿನಲ್ಲಿ ಕೃಷ್ಣಮೃಗ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಆರು ಮಂದಿಯನ್ನು ಬಂಧಿಸಿದೆ. ಆರೋಪಿಗಳಿಂದ ಎರಡು ನಾಲ್ಕುಚಕ್ರ ವಾಹನಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ರೈಫಲ್‌ ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ.

ಆ.17ರಂದು ಕೃಷ್ಣಮೃಗವನ್ನು ಬೇಟೆಯಾಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಜೊಂಡಿ ತಾಂಡಾ ಹಾಗೂ ಮಮದಾಪುರ ತಾಂಡಾದ ಗ್ರಾಮಸ್ಥರು ಮೂವರು ಆರೋಪಿಗಳನ್ನು ಹಿಂಬಾಲಿಸಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಬಳಿಕ ಅವರನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿತ್ತು.

ಘಟನೆಯ ಬಳಿಕ ಪರಾರಿಯಾಗಿದ್ದ ಇನ್ನೂ ಮೂವರು ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ಮಾರ್ಗದರ್ಶನದಲ್ಲಿ ಕಲಬುರಗಿ ಪೊಲೀಸರು, ಕಲಬುರಗಿ ವಿಭಾಗದ ಅರಣ್ಯ ಅಧಿಕಾರಿಗಳು ಹಾಗೂ ತೆಲಂಗಾಣ ಅರಣ್ಯ ಇಲಾಖೆ ಅಧಿಕಾರಿಗಳ ಸಹಕಾರದೊಂದಿಗೆ ಆ.18ರಂದು ಮೂವರನ್ನೂ ಬಂಧಿಸಲಾಗಿದೆ ಎಂದು ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮೀತ್ ಕುಮಾರ್ ಪಾಟೀಲ್ ತಿಳಿಸಿದ್ದಾರೆ.

ಬಸವಕಲ್ಯಾಣ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮುನೀರ್ ಅಹ್ಮದ್ ನೇತೃತ್ವದಲ್ಲಿ ಬಸವಕಲ್ಯಾಣ ಆರ್‌ಎಫ್‌ಒ ಶಿವಕುಮಾರ್ ರಾಠೋಡ್, ಹುಮನಾಬಾದ್ ಆರ್‌ಎಫ್‌ಒ ಪವನಕುಮಾರ್ ಧೂಳೆ ಹಾಗೂ ಭಾಲ್ಕಿ ಡಿಆರ್‌ಎಫ್‌ಒ ಶಾಂತಕುಮಾರ್ ಅವರ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.

ತೆಲಂಗಾಣ ಮೂಲದವರೂ ಭಾಗಿ :

ಪ್ರಾಥಮಿಕ ತನಿಖೆಯ ಪ್ರಕಾರ, ಪ್ರಕರಣದಲ್ಲಿ ಕಲಬುರಗಿ ಜಿಲ್ಲೆಯ ಜಂಬಗಿ ತಾಲೂಕಿನ ಮೂವರು ಸ್ಥಳೀಯರು ಹಾಗೂ ತೆಲಂಗಾಣದ ಹೈದರಾಬಾದ್ ಮೂಲದ ಮೂವರು ವ್ಯಕ್ತಿಗಳು ಭಾಗಿಯಾಗಿದ್ದಾರೆ ಎನ್ನಲಾಗಿದೆ. ವನ್ಯಜೀವಿ ಬೇಟೆಗೆ ಅತ್ಯಾಧುನಿಕ ಲಾಂಗ್‌ರೇಂಜ್ ರೈಫಲ್‌ಗಳನ್ನು ಬಳಸುತ್ತಿರುವ ಬಗ್ಗೆ ಮಾಹಿತಿ ದೊರೆತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ.

ಆರೋಪಿಗಳ ವಿರುದ್ಧ WLOR-02/2026-27 ಪ್ರಕರಣ ದಾಖಲಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಬೀದರ್ ಆರ್‌ಎಫ್‌ಒ ಪ್ರವೀಣಕುಮಾರ್ ತನಿಖೆ ಮುಂದುವರಿಸಿದ್ದಾರೆ.

ಕೃಷ್ಣಮೃಗ ಬೇಟೆ ಕಾನೂನುಬಾಹಿರ :

ಕೃಷ್ಣಮೃಗವು ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972ರ ಶೆಡ್ಯೂಲ್–1 ಅಡಿಯಲ್ಲಿ ಸಂರಕ್ಷಿತ ವನ್ಯಜೀವಿಯಾಗಿದೆ. ಅದರ ಬೇಟೆ ಅಥವಾ ಹತ್ಯೆ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ತಿಳಿಸಿದೆ.

ವನ್ಯಜೀವಿ ಬೇಟೆ ಅಥವಾ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಕೂಡಲೇ ಸಮೀಪದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News