ಬೀದರ್: ಕೆಪಿಎಸ್ಸಿಯಲ್ಲಿ ನಡೆದಿರುವ ಹಗರಣದ ತನಿಖೆಯನ್ನು ಇನ್ನಷ್ಟು ಪಾರದರ್ಶಕವಾಗಿ ನಡೆಸಲು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಅರಿವು ಸೇವಾ ಸಂಸ್ಥೆಯ ಅಧ್ಯಕ್ಷ ಪ್ರಶಾಂತ್ ವಿಶ್ವಕರ್ಮ ಆಗ್ರಹಿಸಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತನಿಖೆ ಇನ್ನಷ್ಟು ಚುರುಕುಗೊಳ್ಳಲು ಸರ್ಕಾರ ಸರ್ವಪಕ್ಷ ಸಭೆ ಕರೆಯಬೇಕು ಎಂದು ಒತ್ತಾಯಿಸಿದರು.

2009ರಿಂದ ಕೆಪಿಎಸ್ಸಿಯಲ್ಲಿ ನಿರಂತರವಾಗಿ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತರಬೇಕಿದೆ. ಬ್ಯಾಂಕ್‌ಗಳ ಮಾದರಿಯಲ್ಲಿ ಪರೀಕ್ಷೆ ನಡೆಸಿ, ನೇರ ಸಂದರ್ಶನ ಪ್ರಕ್ರಿಯೆಯನ್ನು ಕೈಬಿಡಬೇಕು. ಒಎಂಆರ್ ಶೀಟ್ ಮೂಲಕ ಪರೀಕ್ಷೆ ಬರೆಯಿಸುವ ಹಳೆಯ ಪದ್ಧತಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ, ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಕೆಪಿಎಸ್ಸಿ ಪರೀಕ್ಷೆಗಳನ್ನು ನಡೆಸಬೇಕು ಎಂದು ಅವರು ಹೇಳಿದರು.

ಸಂಸ್ಥೆಯ ಗೌರವಾಧ್ಯಕ್ಷ ವಿನೋದ್ ಹೊನ್ನಾ ಮಾತನಾಡಿ, ಕೆಪಿಎಸ್ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಹಗರಣಗಳಿಂದ ವಿದ್ಯಾರ್ಥಿಗಳು ಆತಂಕ ಹಾಗೂ ನಿರಾಸೆಗೆ ಒಳಗಾಗಿದ್ದಾರೆ. ಇಂತಹ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬಿ, ಮತ್ತೆ ಧೈರ್ಯದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವಂತೆ ಮಾಡುವ ನಿಟ್ಟಿನಲ್ಲಿ ಸಂಸ್ಥೆಯಿಂದ ಜಿಲ್ಲೆಯಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ವಿದ್ಯಾರ್ಥಿಗಳಿಗೆ ಸಾಧ್ಯವಾದಷ್ಟು ಸಹಾಯ ಹಾಗೂ ಸಹಕಾರ ನೀಡುವುದರ ಜತೆಗೆ, ಆತಂಕಕ್ಕೊಳಗಾದ ಅವರ ಪಾಲಕರಿಗೂ ಸಾಂತ್ವನ ಮತ್ತು ಸಹಾನುಭೂತಿ ವ್ಯಕ್ತಪಡಿಸುವ ಕಾರ್ಯ ಮಾಡಲಾಗುವುದು. ಜಿಲ್ಲೆಯ ಸಮಾನ ಮನಸ್ಕರು ಈ ಕಾರ್ಯದಲ್ಲಿ ಕೈಜೋಡಿಸುವಂತೆ ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಪ್ರಕಾಶ್ ಗೋದಾ, ಸದಸ್ಯರಾದ ರಾಜಕುಮಾರ್ ಸ್ವಾಮಿ ಹಾಗೂ ಸಂಜುಕುಮಾರ್ ಪಾಂಚಾಳ್ ಅವರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor