Bidar | ಸತ್ಯನಿಷ್ಠ ಪತ್ರಿಕೋದ್ಯಮದಿಂದ ಪ್ರಜಾಪ್ರಭುತ್ವ ಬಲಗೊಳ್ಳುತ್ತದೆ: ಗುರುನಾಥ್ ಅಕ್ಕಣ್ಣ

ಹುಲಸೂರಿನಲ್ಲಿ ಪತ್ರಿಕಾ ದಿನಾಚರಣೆ

Update: 2026-07-29 18:49 IST

ಹುಲಸೂರ್: ಪತ್ರಿಕೋದ್ಯಮವು ಕೇವಲ ಸುದ್ದಿಗಳನ್ನು ಪ್ರಕಟಿಸುವ ವೃತ್ತಿಯಲ್ಲ, ಸಮಾಜದ ಸಮಸ್ಯೆಗಳಿಗೆ ಧ್ವನಿಯಾಗಿ ಜನರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿಯುತ ಕ್ಷೇತ್ರವಾಗಿದೆ. ಪತ್ರಕರ್ತರು ಯಾವುದೇ ಒತ್ತಡಕ್ಕೆ ಒಳಗಾಗದೆ ವಾಸ್ತವಾಂಶಗಳನ್ನು ಅರಿತು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಿದಾಗ ಪ್ರಜಾಪ್ರಭುತ್ವ ಮತ್ತಷ್ಟು ಬಲಗೊಳ್ಳುತ್ತದೆ ಎಂದು ಗುರುನಾಥ್ ಅಕ್ಕಣ್ಣ ಹೇಳಿದರು.

ಪಟ್ಟಣದ ವೀರಭದ್ರೇಶ್ವರ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಹುಲಸೂರು ತಾಲೂಕು ಘಟಕದ ವತಿಯಿಂದ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಪತ್ರಕರ್ತರು ಅನೇಕ ಸವಾಲುಗಳ ನಡುವೆಯೂ ಸಾರ್ವಜನಿಕರ ಸಮಸ್ಯೆಗಳನ್ನು ಆಡಳಿತದ ಗಮನಕ್ಕೆ ತರುವ ಮಹತ್ವದ ಕಾರ್ಯ ಮಾಡುತ್ತಿದ್ದಾರೆ. ಸತ್ಯ, ಪ್ರಾಮಾಣಿಕತೆ ಮತ್ತು ಸಾಮಾಜಿಕ ಬದ್ಧತೆಯನ್ನು ಪತ್ರಿಕೋದ್ಯಮದ ಮೂಲಮಂತ್ರವನ್ನಾಗಿಸಿಕೊಂಡು ಕಾರ್ಯನಿರ್ವಹಿಸಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಯ ಸಮಸ್ಯೆಗಳಿಗೂ ಬೆಳಕು ಚೆಲ್ಲುವ ಜವಾಬ್ದಾರಿ ಪತ್ರಕರ್ತರ ಮೇಲಿದೆ ಎಂದು ಹೇಳಿದರು.

ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ್ದ ಹುಲಸೂರಿನ ಶಿವಾನಂದ ಸ್ವಾಮೀಜಿ ಮಾತನಾಡಿ, ಪತ್ರಿಕೆಗಳು ಸಮಾಜದ ಆಗುಹೋಗುಗಳನ್ನು ಜನರಿಗೆ ತಿಳಿಸುವುದರ ಜೊತೆಗೆ ಒಳ್ಳೆಯ ವಿಚಾರಗಳನ್ನು ಪ್ರೋತ್ಸಾಹಿಸುವ ಹಾಗೂ ತಪ್ಪುಗಳನ್ನು ತಿದ್ದುವ ಕೆಲಸ ಮಾಡುತ್ತಿವೆ. ಪತ್ರಕರ್ತರು ಸಮಾಜದ ಹಿತದೃಷ್ಟಿಯಿಂದ ವಸ್ತುನಿಷ್ಠವಾಗಿ ಕಾರ್ಯನಿರ್ವಹಿಸಿ ಮಾಧ್ಯಮ ಕ್ಷೇತ್ರದ ಘನತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಬೇಕು ಎಂದು ಕರೆ ನೀಡಿದರು.

ತಹಸೀಲ್ದಾರ್ ಶಿವಾನಂದ ಮೇತ್ರೆ ಮಾತನಾಡಿ, ಸರ್ಕಾರದ ಯೋಜನೆಗಳು ಹಾಗೂ ಜನಪರ ಕಾರ್ಯಕ್ರಮಗಳು ಅರ್ಹರಿಗೆ ತಲುಪುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ. ಗ್ರಾಮೀಣ ಪ್ರದೇಶಗಳ ಸಾರ್ವಜನಿಕರ ಸಮಸ್ಯೆಗಳನ್ನು ಆಡಳಿತದ ಗಮನಕ್ಕೆ ತರುವ ಮೂಲಕ ಪತ್ರಕರ್ತರು ಜನರು ಮತ್ತು ಸರ್ಕಾರದ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಸ್ತುನಿಷ್ಠ ವರದಿಗಾರಿಕೆಯಿಂದ ಸಮಸ್ಯೆಗಳ ಪರಿಹಾರಕ್ಕೆ ಸಹಕಾರಿಯಾಗಬೇಕು ಎಂದು ಹೇಳಿದರು.

ಡಾ. ಭೀಮಾಶಂಕರ್ ಬಿರಾದಾರ್ ಮಾತನಾಡಿ, ಪತ್ರಕರ್ತರು ಸಮಾಜದ ಕಣ್ಣುಗಳಿದ್ದಂತೆ. ಸಮಾಜದಲ್ಲಿ ನಡೆಯುವ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿ, ಪರಿಶೀಲಿತ ಮಾಹಿತಿಯನ್ನೇ ಜನರಿಗೆ ತಲುಪಿಸುವ ಮೂಲಕ ಪತ್ರಿಕೋದ್ಯಮದ ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳಬೇಕು ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಸ್ವಾಮಿ ಮಾತನಾಡಿ, ರಾಜ್ಯದಾದ್ಯಂತ ಪತ್ರಕರ್ತರ ಹಕ್ಕುಗಳು, ಗೌರವ ಮತ್ತು ಕಲ್ಯಾಣಕ್ಕಾಗಿ ಸಂಘ ನಿರಂತರವಾಗಿ ಹೋರಾಟ ನಡೆಸುತ್ತಿದೆ. ಗ್ರಾಮೀಣ ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುವುದು ಸಂಘದ ಪ್ರಮುಖ ಉದ್ದೇಶವಾಗಿದ್ದು, ಅವರಿಗೆ ಉಚಿತ ಬಸ್ ಪಾಸ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ನಿರಂತರ ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.

ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಮೆಂಟೇ ಪ್ರಸ್ತಾವಿಕವಾಗಿ ಮಾತನಾಡಿದರು. ಈ ವೇಳೆ ತಾಲೂಕಿನ ಪತ್ರಕರ್ತರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೀಪಾರಾಣಿ ಬೋಸ್ಲೆ, ಉಪಾಧ್ಯೆಕ್ಷೆ ಮೀರಾಬಾಯಿ ಗಾಯಕವಾಡ್, ಸಂಘದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸ್ವಾಮಿದಾಸ್ ನಾಗೂರೆ,‌ ಸಾಮಾಜಿಕ ಕಾರ್ಯಕರ್ತ ಅಬ್ರಹಾರ್‌ ಸೌದಾಗರ್, ಸಂತೋಷ ಚೆಟ್ಟಿ, ಸಹಾಯಕ ಕೃಷಿ ನಿರ್ದೇಶಕ ಗೌತಮ್ ವಾಗ್ಮಾರೆ, ಸಮಾಜ ಕಲ್ಯಾಣ ಅಧಿಕಾರಿ ದಿಲೀಪ್ ಉತ್ತಮ್, ಗ್ಯಾರಂಟಿ ಯೋಜನೆಗಳ ತಾಲ್ಲೂಕಾಧ್ಯಕ್ಷ ಸಿದ್ರಾಮ್ ಕಾಮಣ್ಣಾ, ಸರ್ಕಾರಿ ನೌಕರರ ಸಂಘದ ತಾಲ್ಲೂಕಾಧ್ಯಕ್ಷ ನಾಗರಾಜ್ ಹಾವಣ್ಣ, ಕೃಷಿ ಅಧಿಕಾರಿ ಆಕಾಶ್, ವೀರಭದ್ರೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕಾಶಿನಾಥ್ ಪಾರ್ಶೆಟ್ಟೆ, ಬಂಡೂರಾವ್ ಪಾಟೀಲ್ ಸೇರಿದಂತೆ ತಾಲ್ಲೂಕು ಘಟಕದ ಪತ್ರಕರ್ತರು, ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News