ಬೀದರ್ | ಜಿಲ್ಲಾ ಕಾಂಗ್ರೆಸ್ ನಲ್ಲಿ ಮುಂದುವರೆದ ಭಿನ್ನಮತ : ಡಿ.ಕೆ.ಶಿವಕುಮಾರ್ರನ್ನು ಭೇಟಿಯಾದ ಕೈ ನಾಯಕರು
ಬೀದರ್ : ಕಾಂಗ್ರೆಸ್ ಪಕ್ಷದ ಜಿಲ್ಲಾ ನಾಯಕರಲ್ಲಿ ಭಿನ್ನಮತ ಕಾಣಿಸಿಕೊಂಡಿದ್ದು, ಇಂದು ಮಾಜಿ ಸಚಿವ ರಾಜಶೇಖರ್ ಪಾಟೀಲ್ ಸೇರಿ ಹಲವರು ಕೈ ನಾಯಕರು ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಬಗ್ಗೆ ಚರ್ಚೆ ಮಾಡುವುದಕ್ಕಾಗಿ ಸಮಯ ಕೇಳಿದ್ದಾರೆ ಎಂದು ತಿಳಿದು ಬಂದಿದೆ.
ಜಿಲ್ಲಾ ನಾಯಕರು ಕೆಲ ದಿನಗಳ ಹಿಂದೆ ಜಿಲ್ಲೆಯಲ್ಲಿ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ. ಕಾರ್ಯಕರ್ತರಿಗೆ ಯಾವುದೇ ರೀತಿಯ ಸ್ಥಾನಮಾನ ಸಿಗುತ್ತಿಲ್ಲ ಎಂದು ಆರೋಪಿಸಿ ಬೆಂಗಳೂರಿನಲ್ಲಿ ಎರಡು ಬಾರಿ ಸಭೆ ನಡೆಸಿದ್ದರು. ಆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆಶಿವಕುಮಾರ್ ಅವರನ್ನು ಭೇಟಿಯಾದ ನಂತರ ಹೈ ಕಮಾಂಡ್ ಗಮನಕ್ಕೂ ಈ ವಿಷಯ ತರುತ್ತೇವೆ ಎಂದು ಕಾಂಗ್ರೆಸ್ ಭಿನ್ನಮತೀಯ ನಾಯಕರು ಹೇಳಿದ್ದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ರಾಜಶೇಖರ್ ಪಾಟೀಲ್, ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯಾಧ್ಯಕ್ಷ ಧನರಾಜ್ ತಾಳಂಪಳ್ಳಿ, ಅರವಿಂದ್ ಕುಮಾರ್ ಅರಳಿ, ಪಂಡಿತರಾವ್ ಚಿದ್ರಿ, ದತ್ತಾತ್ರೇಯ ಮೂಲಗೆ ಹಾಗೂ ಅಬ್ದುಲ್ ಮನ್ನಾನ್ ಸೇಠ್ ಸೇರಿದಂತೆ ಇತರ ನಾಯಕರು ಇದ್ದರು ಎಂದು ತಿಳಿದು ಬಂದಿದೆ.