Bidar | ಶೈಕ್ಷಣಿಕ ಸಾಹಿತ್ಯ ಸಮ್ಮೇಳನ ಎಲ್ಲೆಡೆ ನಡೆಯಲಿ : ಸಂದೀಪ್ ಬೂದಿಹಾಳ್

ತಾಲೂಕು ಪ್ರಥಮ ಶೈಕ್ಷಣಿಕ ಸಾಹಿತ್ಯ ಸಮ್ಮೇಳನ

Update: 2026-08-08 19:41 IST

ಬೀದರ್: ಶಿಕ್ಷಣ ಕ್ಷೇತ್ರದ ಕುರಿತು ಚಿಂತನ-ಮಂಥನ ನಡೆಸಲು ವೇದಿಕೆ ಕಲ್ಪಿಸುವ ಶೈಕ್ಷಣಿಕ ಕನ್ನಡ ಸಾಹಿತ್ಯ ಸಮ್ಮೇಳನಗಳು ರಾಜ್ಯದ ಎಲ್ಲೆಡೆ ನಡೆಯಬೇಕು ಎಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಸಂದೀಪ್ ಬೂದಿಹಾಳ ಹೇಳಿದರು.

ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಬೀದರ್ ಉತ್ತರ ಘಟಕದ ವತಿಯಿಂದ ಶನಿವಾರ ಆಯೋಜಿಸಿದ್ದ ಬೀದರ್ ತಾಲೂಕು ಪ್ರಥಮ ಶೈಕ್ಷಣಿಕ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ಶಿಕ್ಷಕ ವಿಜಯಕುಮಾರ್ ಪಾಟೀಲ ಯರನಳ್ಳಿ ಅವರ ಸರ್ವಾಧ್ಯಕ್ಷತೆಯಲ್ಲಿ ಪ್ರಥಮ ಶೈಕ್ಷಣಿಕ ಸಾಹಿತ್ಯ ಸಮ್ಮೇಳನ ಆಯೋಜಿಸಿರುವುದು ಮಾದರಿಯಾಗಿದೆ. ಇಂತಹ ಸಮ್ಮೇಳನಗಳು ಶಿಕ್ಷಣ ಕ್ಷೇತ್ರದ ಸಮಸ್ಯೆಗಳು, ಸವಾಲುಗಳು ಹಾಗೂ ಸುಧಾರಣೆಯ ಕುರಿತು ಚರ್ಚಿಸಲು ಉತ್ತಮ ವೇದಿಕೆಯಾಗಲಿವೆ ಎಂದರು.

ಕನ್ನಡ ಭಾಷೆಯು ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಒಳಗೊಂಡ ಶ್ರೀಮಂತ ಭಾಷೆಯಾಗಿದೆ. ಮಾತೃಭಾಷೆಯ ಮೂಲಕ ಮಕ್ಕಳಲ್ಲಿ ಜ್ಞಾನ ಹಾಗೂ ಸೃಜನಶೀಲತೆ ಬೆಳೆಸಲು ಸಾಧ್ಯ. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಕಾರ್ಯ ಹಿಂದಿಗಿಂತಲೂ ಈಗ ಹೆಚ್ಚಿನ ಪ್ರಮಾಣದಲ್ಲಿ ನಡೆಯಬೇಕಿದೆ ಎಂದು ಹೇಳಿದರು.

ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವೆ: ಶಾಸಕ

ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮಾತನಾಡಿ, ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯ ಸರ್ಕಾರ ಶಿಕ್ಷಕರ ಹಿತದೃಷ್ಟಿಯಿಂದ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಕನ್ನಡ ಶಾಲೆಗಳ ಉಳಿವಿಗೆ ವಿಶೇಷ ಕಾಳಜಿ ಅಗತ್ಯ :

ಬುಡಾ ಮಾಜಿ ಅಧ್ಯಕ್ಷ ಬಾಬುವಾಲಿ ಮಾತನಾಡಿ, ಕನ್ನಡ ಶಾಲೆಗಳ ಸ್ಥಿತಿ ಶೋಚನೀಯವಾಗಿದ್ದು, ಅವುಗಳ ಉಳಿವಿಗಾಗಿ ಸರ್ಕಾರ ವಿಶೇಷ ಕಾಳಜಿ ವಹಿಸಬೇಕು. ಕನ್ನಡ ಶಾಲೆಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕನ್ನಡ ಹೋರಾಟಗಾರರ ಬದುಕು ಪ್ರೇರಣೆ :

ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸೂರ್ಯಕಾಂತ್ ನಾಗಮಾರಪಳ್ಳಿ ಮಾತನಾಡಿ, ನಮ್ಮ ಸಾಧನೆಗಳೇ ನಮ್ಮ ಪರವಾಗಿ ಮಾತನಾಡಬೇಕು. ಸಮ್ಮೇಳನದ ಸರ್ವಾಧ್ಯಕ್ಷ ವಿಜಯಕುಮಾರ್ ಪಾಟೀಲ ಯರನಳ್ಳಿ ಅವರು ಕನ್ನಡ ಹೋರಾಟಗಾರರಾಗಿದ್ದು, ಅವರ ಹೋರಾಟದ ಬದುಕು ಎಲ್ಲರಿಗೂ ಪ್ರೇರಣೆಯಾಗಿದೆ ಎಂದರು.

ಬೆಂಗಳೂರಿನಲ್ಲಿ ಹೋರಾಟ ನಡೆಸಿ ಸಾವಿರಾರು ಕನ್ನಡ ಶಿಕ್ಷಕರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ವಿಜಯಕುಮಾರ್ ಪಾಟೀಲ ಅವರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷ ವಿಜಯಕುಮಾರ್ ಪಾಟೀಲ ಯರನಳ್ಳಿ, ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ್, ಡಾ. ಚನ್ನಬಸವ ಪಟ್ಟದ್ದೇವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜೈರಾಜ್ ಖಂಡ್ರೆ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಹೆಡಗಾಪುರದ ಶ್ರೀ, ಕನ್ನಡ ಸಾಹಿತ್ಯ ಪರಿಷತ್ ಬೀದರ್ ಉತ್ತರ ಘಟಕದ ಅಧ್ಯಕ್ಷ ಪರಮೇಶ್ವರ್ ಬಿರಾದಾರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಚನಶೆಟ್ಟಿ, ಜಿಲ್ಲಾ ಘಟಕದ ಖಜಾಂಚಿ ಶಿವಶಂಕರ್ ಟೋಕರೆ, ಪ್ರಮುಖರಾದ ಸೋಮಶೇಖರ್ ಬಿರಾದಾರ್, ಶಶಿಧರ್ ಹೊಸಳ್ಳಿ, ಚಂದ್ರಶೇಖರ್ ಪಾಟೀಲ್ ಕಲಬುರಗಿ, ರವೀಂದ್ರ ರೆಡ್ಡಿ ಮಾಲಿಪಾಟೀಲ್, ಶೇಕ್ ಮಹೆಬೂಬ್ ಪಟೇಲ್, ಡಾ. ಸಚಿನ್ ವಿ. ಪಾಟೀಲ್, ಸುಮಿತ್ ಮದನೂರೆ, ದಿಗಂಬರ್ ಮಡಿವಾಳ್, ಮಾರುತಿ ಬೌದ್ಧೆ ಮತ್ತಿತರರು ಇದ್ದರು. ಸಂತೋಷ್ ಮಂಗಳೂರೆ ಸ್ವಾಗತಿಸಿದರು. ಲಕ್ಷ್ಮಣ ಪೂಜಾರಿ ನಿರೂಪಿಸಿದರು. ಸಂಗಮೇಶ್ ನೇಳಗೆ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News