Bidar | ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ: ಡಾ.ಗಿರೀಶ್ ಬದೋಲೆ

Update: 2026-08-01 19:32 IST

ಬೀದರ್‌: ಸಮಾಜದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ದುಶ್ಚಟಗಳನ್ನು ತೊರೆದು ಆರೋಗ್ಯಕರ ಹಾಗೂ ನೆಮ್ಮದಿಯ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ ಕರೆ ನೀಡಿದರು.

ನಗರದ ಪೂಜ್ಯ ಡಾ. ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ (ಬೆಂಗಳೂರು), ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಿಜಯ ಮಹಾಂತ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಧೂಮಪಾನ, ಮದ್ಯಪಾನ ಹಾಗೂ ಮಾದಕ ದ್ರವ್ಯಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯ ಮಾತ್ರವಲ್ಲ, ಕುಟುಂಬದ ನೆಮ್ಮದಿಯೂ ಹಾಳಾಗಿ ಆರ್ಥಿಕ ಸಂಕಷ್ಟ ಎದುರಾಗುತ್ತದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದು ಹಾಗೂ ಅಮಲಿನಲ್ಲಿ ಅಪರಾಧ ಕೃತ್ಯ ಎಸಗುವುದರಿಂದ ಸಾರ್ವಜನಿಕರ ಜೀವಕ್ಕೂ ಅಪಾಯ ಉಂಟಾಗುತ್ತದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

“ನಿಮ್ಮ ಆಸ್ತಿ-ಪಾಸ್ತಿ ಅಥವಾ ಹಣ ಬೇಡ, ನಿಮ್ಮಲ್ಲಿರುವ ದುಶ್ಚಟಗಳನ್ನು ನೀಡಿ, ಸುಖಮಯ ಜೀವನ ನಡೆಸಿ” ಎಂದು ಡಾ. ಮಹಾಂತ ಅಪ್ಪನವರು ನೀಡಿದ್ದ ಸಂದೇಶವನ್ನು ಸ್ಮರಿಸಿದ ಅವರು, ವಿದ್ಯಾರ್ಥಿಗಳು ತಮ್ಮ ಸ್ನೇಹಿತರು ಹಾಗೂ ಸಮಾಜದಲ್ಲಿ ಜಾಗೃತಿ ಮೂಡಿಸಿ ವ್ಯಸನಮುಕ್ತ ಸಮಾಜದ ರಾಯಭಾರಿಗಳಾಗಬೇಕು. ಮಹಾಂತ ಶಿವಯೋಗಿಗಳ ಕನಸಿನಂತೆ ಪ್ರತಿಯೊಂದು ಮನೆ ಮತ್ತು ಮನಸ್ಸು ವ್ಯಸನಮುಕ್ತವಾಗಬೇಕು ಎಂದು ಕರೆ ನೀಡಿದರು.

ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಮಾತನಾಡಿ, ಯುವಕರಲ್ಲಿ ಹೆಚ್ಚುತ್ತಿರುವ ದುಶ್ಚಟಗಳನ್ನು ನಿಯಂತ್ರಿಸಲು ಯುವಜನತೆ ಮುಂಚೂಣಿಗೆ ಬರಬೇಕು. ದುಶ್ಚಟಗಳಿಂದ ಬಳಲುತ್ತಿರುವವರಿಗೆ ಪ್ರೇರಣೆಯಾಗಬೇಕು. ಇಂದಿನ ಯುವಕರು ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಸುಸಂಸ್ಕೃತ ಹಾಗೂ ಆರ್ಥಿಕವಾಗಿ ಸಬಲ ನಾಗರಿಕರಾಗಿ ಬೆಳೆಯಬೇಕು ಎಂದು ಹೇಳಿದರು.

ಸರ್ಕಾರ ಶಾಲೆ, ಕಾಲೇಜು ಹಾಗೂ ಸರ್ಕಾರಿ ಕಟ್ಟಡಗಳ 100 ಮೀಟರ್ ವ್ಯಾಪ್ತಿಯನ್ನು ತಂಬಾಕು ಮತ್ತು ಇತರೆ ಮಾದಕ ವಸ್ತುಗಳ ಮಾರಾಟ ನಿಷೇಧಿತ ಪ್ರದೇಶವೆಂದು ಘೋಷಿಸಿರುವುದನ್ನು ಉಲ್ಲೇಖಿಸಿದ ಅವರು, ದುಶ್ಚಟಗಳಿಂದ ಬಳಲುವವರನ್ನು ಮುಕ್ತಗೊಳಿಸಲು ಸಮಾಜದ ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕು. ದೇಶದ ಭವಿಷ್ಯ ಯುವಕರ ಕೈಯಲ್ಲಿದ್ದು, ಅವರು ಸದೃಢರಾಗಿದ್ದರೆ ದೇಶವೂ ಆರ್ಥಿಕವಾಗಿ ಬಲಿಷ್ಠವಾಗಲಿದೆ ಎಂದು ಹೇಳಿದರು.

ಸಾಹಿತಿ ಹಾಗೂ ಜಿಲ್ಲಾ ಖಜಾನೆ ಇಲಾಖೆಯ ಸಹಾಯಕ ನಿರ್ದೇಶಕ ಮಾಣಿಕ್ ನೇಳಗೆ ಮಾತನಾಡಿ, ಮಾನವ ಸಮಾಜ ದಾರಿ ತಪ್ಪಿದಾಗ ಗೌತಮ ಬುದ್ಧ ಮತ್ತು ಬಸವಣ್ಣನವರಂತಹ ಮಹಾತ್ಮರು ಸಮಾಜಕ್ಕೆ ದಾರಿದೀಪರಾದಂತೆ, ಆಧುನಿಕ ಕಾಲದಲ್ಲಿ ದುಶ್ಚಟಗಳ ನಿರ್ಮೂಲನೆಗಾಗಿ ಡಾ. ಮಹಾಂತ ಅಪ್ಪನವರು ಅಪಾರ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.

1972ರ ಭೀಕರ ಬರಗಾಲದ ಸಂದರ್ಭದಲ್ಲಿ ಇಳಕಲ್ ಮಠದ ವತಿಯಿಂದ ಉಚಿತ ಗಂಜಿ ಕೇಂದ್ರಗಳನ್ನು ಆರಂಭಿಸಿ ಸಂಕಷ್ಟದಲ್ಲಿದ್ದ ಜನರಿಗೆ ನೆರವಾದ ಮಹಾಂತ ಅಪ್ಪನವರ ಮಾನವೀಯ ಸೇವೆಯನ್ನು ಅವರು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News