×
Ad

Bidar | ತೋಟಗಾರಿಕೆ ಕ್ಷೇತ್ರವು ರೈತರ ಆದಾಯ ದ್ವಿಗುಣ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದೆ : ದೇವಿಕಾ ಆರ್‌.

‘ಸಸ್ಯ ಸಂತೆ’ಗೆ ಚಾಲನೆ

Update: 2026-07-01 17:05 IST

ಬೀದರ್: ಕೃಷಿಯು ದೇಶದ ಆರ್ಥಿಕತೆಯ ಬೆನ್ನೆಲುಬಾಗಿದ್ದು, ತೋಟಗಾರಿಕೆ ಕ್ಷೇತ್ರವು ರೈತರ ಆದಾಯವನ್ನು ದ್ವಿಗುಣಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಕೃಷಿ ಜಂಟಿ ನಿರ್ದೇಶಕಿ ದೇವಿಕಾ ಆರ್. ಹೇಳಿದರು.

ನಗರದ ತೋಟಗಾರಿಕೆ ಮಹಾವಿದ್ಯಾಲಯದ ಮುಖ್ಯದ್ವಾರದ ಮುಂಭಾಗದಲ್ಲಿ ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್ ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ ಹಾಗೂ ತೋಟಗಾರಿಕೆ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಬುಧವಾರ ಆಯೋಜಿಸಿದ್ದ ಒಂದು ವಾರದ ‘ಸಸ್ಯ ಸಂತೆ’ ಹಾಗೂ ‘ತೋಟಗಾರಿಕೆ ಮುಂಗಾರು ಅಭಿಯಾನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮುಂಗಾರು ಹಂಗಾಮು ಕೃಷಿ ಮತ್ತು ತೋಟಗಾರಿಕೆ ಚಟುವಟಿಕೆಗಳಿಗೆ ಅತ್ಯಂತ ಮಹತ್ವದ್ದಾಗಿದ್ದು, ವೈಜ್ಞಾನಿಕ ಕೃಷಿ ವಿಧಾನಗಳು ಹಾಗೂ ಸಮರ್ಪಕ ಸಸ್ಯ ಸಂರಕ್ಷಣಾ ಕ್ರಮಗಳನ್ನು ಅನುಸರಿಸಿದರೆ ಉತ್ತಮ ಇಳುವರಿ ಪಡೆಯಲು ಸಾಧ್ಯ ಎಂದು ಹೇಳಿದರು.

ಸಸ್ಯ ಸಂತೆಯಲ್ಲಿ ಉತ್ತಮ ಗುಣಮಟ್ಟದ ಸಸಿಗಳು, ಸಾವಯವ ಪರಿಕರಗಳು, ಅಲಂಕಾರಿಕ ಹಾಗೂ ಔಷಧೀಯ ಸಸಿಗಳು ಮತ್ತು ಮೌಲ್ಯವರ್ಧಿತ ಉತ್ಪನ್ನಗಳನ್ನು ರೈತರಿಗೆ ಕಡಿಮೆ ದರದಲ್ಲಿ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಮಹಾವಿದ್ಯಾಲಯದ ಪ್ರಭಾರ ಡೀನ್ ಡಾ. ಮಹಮ್ಮದ್ ಫಾರೂಕ್ ಮಾತನಾಡಿ, ಉತ್ತಮ ಗುಣಮಟ್ಟದ ಸಸಿಗಳ ನೆಡುವಿಕೆ, ಹನಿ ನೀರಾವರಿ, ಮಳೆ ನೀರು ಸಂಗ್ರಹಣೆ, ಮಣ್ಣಿನ ಆರೋಗ್ಯ ಕಾಪಾಡುವಿಕೆ ಹಾಗೂ ಹವಾಮಾನಕ್ಕೆ ಹೊಂದಿಕೊಳ್ಳುವ ಕೃಷಿ ಪದ್ಧತಿಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸುವುದೇ ಮುಂಗಾರು ಅಭಿಯಾನದ ಉದ್ದೇಶವಾಗಿದೆ ಎಂದರು.

ತೋಟಗಾರಿಕೆ ಮಹಾವಿದ್ಯಾಲಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಕೃಷಿ ವಿಜ್ಞಾನ ಕೇಂದ್ರಗಳು ಹಾಗೂ ರೈತರು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಸುಸ್ಥಿರ ಕೃಷಿ ಮತ್ತು ಉತ್ತಮ ಆದಾಯದ ಗುರಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ತೋಟಗಾರಿಕಾ ವಿಸ್ತರಣಾ ಶಿಕ್ಷಣ ಕೇಂದ್ರದ ಮುಖ್ಯಸ್ಥ ಡಾ. ವಿಜಯಮಹಾಂತೇಶ್ ಮಾತನಾಡಿ, ರೈತರು ಸಸ್ಯ ಸಂತೆಗೆ ಭೇಟಿ ನೀಡಿ ತಾಂತ್ರಿಕ ಮಾಹಿತಿ ಹಾಗೂ ವಿವಿಧ ಕೃಷಿ ಪರಿಕರಗಳ ಪ್ರಯೋಜನ ಪಡೆದು ತೋಟಗಾರಿಕೆ ಬೆಳೆಗಳಲ್ಲಿ ಉತ್ತಮ ಉತ್ಪಾದನೆ ಸಾಧಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ರೈತರು, ಮಹಾವಿದ್ಯಾಲಯದ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಭಾಗವಹಿಸಿದ್ದರು. ಡಾ. ಹರೀಶ ಟಿ. ಸ್ವಾಗತಿಸಿದರು. ಡಾ. ಜಾನ್ಹವಿ ಡಿ.ಆರ್. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News