Bidar | ಅಪರಾಧಿ ಕೃತ್ಯಗಳಲ್ಲಿ ಭಾಗಿ : ಇಬ್ಬರು ಗಡಿಪಾರು
ಬೀದರ್ : ಅಪರಾಧ ಚಟುವಟಿಕೆಗಳಲ್ಲಿ ನಿರಂತರವಾಗಿ ಭಾಗಿಯಾಗಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುತ್ತಿದ್ದ ಇಬ್ಬರು ಎಂಒಬಿ ಶೀಟರ್ಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
ಗಾಂಧಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಇರಾನಿ ಕಾಲೋನಿಯ ನಿವಾಸಿಗಳಾದ ರಹೆಮತ್ ಹುಸೇನ್ (25) ಹಾಗೂ ಜಾವಿದ್ ಅಲಿ ಉರ್ಫ್ ಜಂಬೂ (38) ಅವರನ್ನು ಕ್ರಮವಾಗಿ ಉತ್ತರ ಕನ್ನಡ (ಕಾರವಾರ) ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಗಡಿಪಾರು ಮಾಡಲಾಗಿದೆ.
ರಹೆಮತ್ ಹುಸೇನ್ ವಿರುದ್ಧ ಮಾರಕಾಯುಧ ಹೊಂದಿ ಸುಲಿಗೆ, ಕಳ್ಳತನ, ಅಕ್ರಮ ಗಾಂಜಾ ಮಾರಾಟ ಮತ್ತು ಸಾಗಾಟ, ಸಾರ್ವಜನಿಕರಿಗೆ ಜೀವ ಬೆದರಿಕೆ ಸೇರಿದಂತೆ ಆರು ಪ್ರಕರಣಗಳು ದಾಖಲಾಗಿದ್ದರೂ ಅಪರಾಧ ಚಟುವಟಿಕೆ ಮುಂದುವರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಾವಿದ್ ಅಲಿ ವಿರುದ್ಧವೂ ಮಾರಕಾಯುಧ ಹೊಂದಿ ಸಾರ್ವಜನಿಕರೊಂದಿಗೆ ಜಗಳ, ಜೀವ ಬೆದರಿಕೆ ಹಾಗೂ ಅಕ್ರಮ ಗಾಂಜಾ ಮಾರಾಟ ಮತ್ತು ಸಾಗಾಟ ಸೇರಿದಂತೆ ಐದು ಪ್ರಕರಣಗಳು ದಾಖಲಾಗಿದ್ದು, ಕಾನೂನುಬಾಹಿರ ಚಟುವಟಿಕೆಗಳಿಂದ ದೂರವಾಗದ ಹಿನ್ನೆಲೆ ಗಡಿಪಾರು ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಇಂತಹ ಕಠಿಣ ಕ್ರಮ ಮುಂದುವರಿಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ. ಕಾನೂನುಬಾಹಿರ ಚಟುವಟಿಕೆಗಳಿಂದ ದೂರವಿದ್ದು, ತಮ್ಮ ಹಾಗೂ ಕುಟುಂಬದ ಭವಿಷ್ಯ ಹಾಳು ಮಾಡಿಕೊಳ್ಳಬಾರದು ಎಂದು ಸಾರ್ವಜನಿಕರಿಗೆ ಅವರು ಮನವಿ ಮಾಡಿದ್ದಾರೆ.