ಬೀದರ್ | ಕನ್ನಡ ನಾಡು, ನುಡಿ ವಿಶೇಷ ಉಪನ್ಯಾಸ ಕಾರ್ಯಕ್ರಮ
ಬೀದರ್ : ಕನ್ನಡ ನಾಡು, ನುಡಿ, ಸಂಸ್ಕೃತಿ ಸೇರಿದಂತೆ ಎಲ್ಲವೂ ಸಮೃದ್ಧಿಯಾಗಿದೆ ಎಂದು ಹಿರಿಯ ಸಾಹಿತಿ ಪುಣ್ಯವತಿ ವಿಸಾಜಿ ಹೇಳಿದರು.
ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಬೆಂಗಳೂರಿನ ಕರ್ನಾಟಕ ಸಾಹಿತ್ಯ ಅಕಾಡೆಮಿ, ಚಕೋರ ಸಾಹಿತ್ಯ ವಿಚಾರ ವೇದಿಕೆ ಮತ್ತು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇದರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕನ್ನಡ ನಾಡು, ನುಡಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪುಣ್ಯವತಿ ವಿಸಾಜಿ, ಕನ್ನಡವನ್ನು ಹೆಚ್ಚಾಗಿ ಬಳಕೆ ಮಾಡಬೇಕು. ಭಾಷೆ ಬಳಕೆ ಮಾಡಿದಷ್ಟು ಬೆಳೆಯುತ್ತದೆ ಎಂದು ಹೇಳಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಟಿ.ಎಂ ಮಚ್ಚೆ ಅವರು ಮಾತನಾಡಿ, ಗಡಿ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನ ಮಾಡಬೇಕು. ಮಿಶ್ರ ಭಾಷೆಯಿಂದ ಕನ್ನಡವನ್ನು ಹೊರತರುವ ಪ್ರಯತ್ನ ಮಾಡಬೇಕು ಎಂದು ಹೇಳಿದರು.
ಶ್ರೀ ಸಿದ್ಧರೂಢ ಮಹಿಳಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ನಾಗಪ್ಪ ಜಾನಕನೂರ್ ಅವರು ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಕನ್ನಡ ನಾಡು ನುಡಿ ಉಳಿಯಬೇಕಾದರೆ ಕನ್ನಡವನ್ನು ಹೆಚ್ಚು ತಂತ್ರಜ್ಞಾನ ಕ್ಷೇತ್ರದಲ್ಲಿ ಬಳಸಬೇಕು. ಶೈಕ್ಷಣಿಕ, ಸಾಮಾಜಿಕ, ರಾಜಕೀಯ, ಆರ್ಥಿಕ ಕ್ಷೇತ್ರದಲ್ಲಿ ತನ್ನ ಛಾಪನ್ನು ಮೂಡಿಸುವ ಕಾರ್ಯದಲ್ಲಿ ತೊಡಗಬೇಕು ಎಂದು ಹೇಳಿದರು.
ಚಕೋರ ಸಾಹಿತ್ಯ ವಿಚಾರ ವೇದಿಕೆಯ ಜಿಲ್ಲಾ ಸಂಚಾಲಕಿ ಡಾ.ಮಕ್ತುಂಬಿ ಎಂ ಮಾತನಾಡಿ, ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಬೇಕು. ಪುಸ್ತಕಗಳನ್ನು ಮಕ್ಕಳಿಗೆ ಕೊಟ್ಟರೆ ಅವರು ಓದುವತ್ತ ಮನಸ್ಸು ಮಾಡುತ್ತಾರೆ. ಒಂದು ಸಲ ಓದುವ ಹವ್ಯಾಸ ಬೆಳೆಸಿಕೊಂಡರೆ ಅವರು ಓದುವುದನ್ನು ಮುಂದುವರೆಸಿಕೊಂಡು ಹೋಗುತ್ತಾರೆ ಎಂದು ಹೇಳಿದರು.
ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಮನೋಜಕುಮಾರ್ ಕುಲಕರ್ಣಿ ಮಾತನಾಡಿ, ಕನ್ನಡ ಅನ್ಯ ಭಾಷಿಕರಿಗೆ ಕಲಿಸುವುದು ಬಹಳ ಮುಖ್ಯ. ಕನ್ನಡಿಗರು ಕನ್ನಡವನ್ನೇ ಮಾತನಾಡುತ್ತಾರೆ. ಕನ್ನಡ ಜ್ಞಾನದ ಕೊರತೆ ಯಾರಿಗೆ ಇದೆಯೋ ಅವರು ಕನ್ನಡ ಕಲಿಯಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಶ್ರೀಕಾಂತ್ ಪಾಟೀಲ್, ಡಾ ಮನೋಹರ್, ಪ್ರೊ. ಶ್ರೀನಿವಾಸ್ ಹಾಗೂ ಪಾರ್ವತಿ ಮೇತ್ರೆ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.