ಬೀದರ್: ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಕಂಡುಬಂದ ಅಸ್ವಚ್ಛತೆ ಹಾಗೂ ಮೂಲಸೌಕರ್ಯಗಳ ಕೊರತೆ ಕುರಿತು ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಜಗನ್ನಾಥ ಹಲಮಡಗಿ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಬೀದರ್ ನಗರದ ಜನವಾಡ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಗುರುವಾರ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳು ವಾಸಿಸುವ ಕೊಠಡಿಗಳು, ಅಡುಗೆ ಕೋಣೆ, ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಈ ವೇಳೆ ಕೊಠಡಿಗಳಲ್ಲಿ ಅಸ್ವಚ್ಛತೆ, ಹರಿದ ಹಾಸಿಗೆಗಳು ಕಂಡುಬಂದಿದ್ದು, ಕಿಟಕಿಗಳ ಗಾಜು ಒಡೆದಿರುವುದನ್ನು ಮುಚ್ಚಲು ವಿದ್ಯಾರ್ಥಿಗಳ ಹಾಸಿಗೆಗಳನ್ನು ಬಳಸುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಬಾತ್‌ರೂಮ್ ಪಕ್ಕದಲ್ಲೇ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವುದು, ವಸತಿ ನಿಲಯದಲ್ಲಿ ಸೊಳ್ಳೆಗಳ ಕಾಟ ಹಾಗೂ ಅಡುಗೆ ಕೋಣೆಯಲ್ಲಿ ಸ್ವಚ್ಛತೆ ಕಾಪಾಡದಿರುವುದಕ್ಕೂ ಅವರು ಆಕ್ಷೇಪ ವ್ಯಕ್ತಪಡಿಸಿದರು.

ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಕನಿಷ್ಠ 15–20 ದಿನಗಳಿಗೊಮ್ಮೆ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರೆ ಇಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಈ ಅವ್ಯವಸ್ಥೆ ಉಂಟಾಗಿದೆ ಎಂದು ಜಗನ್ನಾಥ ಹಲಮಡಗಿ ಅಸಮಾಧಾನ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ತಮ್ಮ ತಂದೆ-ತಾಯಿಯನ್ನು ಬಿಟ್ಟು ಉತ್ತಮ ಶಿಕ್ಷಣ ಪಡೆಯುವ ಉದ್ದೇಶದಿಂದ ವಸತಿ ನಿಲಯಕ್ಕೆ ಬಂದಿರುತ್ತಾರೆ. ಅವರನ್ನು ಕೇವಲ ವಸತಿ ನಿಲಯದ ವಿದ್ಯಾರ್ಥಿಗಳೆಂದು ನೋಡದೆ ತಮ್ಮ ಮಕ್ಕಳಂತೆ ಕಾಣಬೇಕು. ಮಕ್ಕಳಿಗೆ ಮನೆಯಲ್ಲಿ ಸಿಗುವಂತಹ ಸ್ವಚ್ಛತೆ, ಸುರಕ್ಷತೆ, ಉತ್ತಮ ಆಹಾರ, ಶುದ್ಧ ಕುಡಿಯುವ ನೀರು ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಎಚ್ಚರಿಸಿದರು.

ವಸತಿ ನಿಲಯದಲ್ಲಿನ ಅವ್ಯವಸ್ಥೆಯ ಕುರಿತು ಜಿಲ್ಲಾಧಿಕಾರಿ ಹಾಗೂ ಮಕ್ಕಳ ಹಕ್ಕುಗಳ ಆಯೋಗಕ್ಕೆ ವರದಿ ಸಲ್ಲಿಸಲಾಗುವುದು. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು ಎಂದು ಜಗನ್ನಾಥ ಹಲಮಡಗಿ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor