Bidar | ಜು.26ರಂದು ‘ಚಿಮ್ಮಿದ ಬುಗ್ಗೆ’ ಕೃತಿ ಲೋಕಾರ್ಪಣೆ, ಕವಿಗೋಷ್ಠಿ
ಜನಪರ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಸಾಧಕರಿಗೆ ಸನ್ಮಾನ
ಬೀದರ್: ಜನಪರ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಜಿಲ್ಲೆಯ ಉದಯೋನ್ಮುಖ ಕವಿ ಹಾಗೂ ಲೇಖಕ ಅಶ್ವಜೀತ್ ದಂಡಿನ್ ಅವರ ‘ಚಿಮ್ಮಿದ ಬುಗ್ಗೆ’ ಕೃತಿ ಲೋಕಾರ್ಪಣೆ, ಕವಿಗೋಷ್ಠಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಗೌರವ ಸನ್ಮಾನ ಕಾರ್ಯಕ್ರಮ ಜು.26ರಂದು ಬೆಳಿಗ್ಗೆ 11 ಗಂಟೆಗೆ ನಗರದ ಗುರುನಾನಕ ಗೇಟ್ ಎದುರಿನ ಹೋಟೆಲ್ ಕೃಷ್ಣ ರೆಜೆನ್ಸಿಯಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಸಂಚಾಲಕ ಡಾ. ಸಂಜೀವಕುಮಾರ್ ಅತಿವಾಳೆ ತಿಳಿಸಿದ್ದಾರೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ್ ಚನ್ನಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಹಾಗೂ ಜನಪರ ಸಾಂಸ್ಕೃತಿಕ ವೇದಿಕೆಯ ಸಂಚಾಲಕ ಡಾ. ಸಂಜೀವಕುಮಾರ್ ಅತಿವಾಳೆ ಅಧ್ಯಕ್ಷತೆ ವಹಿಸಲಿದ್ದಾರೆ.
ಪ್ರೊ. ಮಯೂರ್ ಬಸವರಾಜ್ ಅವರು ‘ಚಿಮ್ಮಿದ ಬುಗ್ಗೆ’ ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದು, ಸಾಹಿತಿ ಪಾರ್ವತಿ ವಿ. ಸೋನಾರೆ ಕೃತಿ ಪರಿಚಯ ಮಾಡಿಕೊಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಮಾರ್ಗದಾತ ದಿನಪತ್ರಿಕೆಯ ಸಂಪಾದಕ ಡಾ. ಕಾಶಿನಾಥ್ ಚೆಲ್ವಾ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಎಂ.ಎಸ್. ಮನೋಹರ್, ಸರ್ಕಾರಿ ನೌಕರರ ಸಂಘದ ಜಿಲ್ಲಾ ಖಜಾಂಚಿ ದೇವಪ್ಪ ಚಾಂಬಳೆ ಮಾಳೆಗಾಂವ್ ಹಾಗೂ ಸಾಹಿತಿ ಡಾ. ಸುಬ್ಬಣ್ಣ ಕರಕನಳ್ಳಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಾರ್ಯಕ್ರಮದಲ್ಲಿ ವಿಜಯಪುರದ ಶಶಿರೇಖಾ ವಿರಕ್ತಮಠ್ ಹಾಗೂ ಕೃತಿಕಾರ ಅಶ್ವಜೀತ್ ದಂಡಿನ್ ಉಪಸ್ಥಿತರಿರಲಿದ್ದಾರೆ. ಇದೇ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಭಾಗಗಳ ಕವಿಗಳಿಂದ ಕವಿಗೋಷ್ಠಿ ನಡೆಯಲಿದ್ದು, ಕವಿಗೋಷ್ಠಿಯಲ್ಲಿ ಹಲವಾರು ಕವಿಗಳು ತಮ್ಮ ಸ್ವರಚಿತ ಕವನ ವಾಚನ ಮಾಡಲಿದ್ದಾರೆ. ಇದಲ್ಲದೆ, ಸಮಾಜ, ಸಾಹಿತ್ಯ, ಶಿಕ್ಷಣ, ಜಾನಪದ ಕಲೆ ಹಾಗೂ ಸಾರ್ವಜನಿಕ ಸೇವಾ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ವಿವಿಧ ಗಣ್ಯರನ್ನು ಗೌರವ ಸನ್ಮಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.