Bidar | ವಸತಿ ವ್ಯವಸ್ಥೆಗಾಗಿ ಅಲೆಮಾರಿಗಳಿಂದ ಸಂಸದ ಸಾಗರ್‌ ಖಂಡ್ರೆ ಅವರಿಗೆ ಮನವಿ

ಪೊಲೀಸರ ವರ್ತನೆ ವಿರುದ್ಧ ಆಕ್ರೋಶ, ಉಪವಾಸ ಸತ್ಯಾಗ್ರಹದ ಎಚ್ಚರಿಕೆ

Update: 2026-07-18 19:19 IST

ಬೀದರ್: ನಗರದ ನೌಬಾದ್‌ನ ಚೌಳಿಕಮಾನ ಸಮೀಪ ಕಳೆದ 20–30 ವರ್ಷಗಳಿಂದ ಗುಡಿಸಲುಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಸಮುದಾಯದ ಜನರು ತಮಗೆ ವಸತಿ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಸಂಸದ ಸಾಗರ್ ಖಂಡ್ರೆ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಶನಿವಾರ ನಡೆದ ದಿಶಾ ಸಭೆಗೆ ಆಗಮಿಸಿದ್ದ ಸಂಸದರಿಗೆ ಸಲ್ಲಿಸಿದ ಮನವಿಯಲ್ಲಿ, ಸರ್ಕಾರಿ ಜಮೀನಿನ ಕಾಲುವೆ ಬದಿಯಲ್ಲಿ ಸುಮಾರು 25 ವರ್ಷಗಳಿಂದ ವಾಸಿಸುತ್ತಿದ್ದು, ಸುತ್ತಮುತ್ತಲಿನ ಶ್ರೀಮಂತ ನಿವಾಸಿಗಳಿಂದ ನಿರಂತರ ಕಿರುಕುಳ ಎದುರಿಸುತ್ತಿದ್ದೇವೆ. ಬಾಗೆ ಕಾರಂಜಾ (ಬೆಚಿರಾಕ್) ಪ್ರದೇಶದ ಸರ್ಕಾರಿ ಜಮೀನಿನಲ್ಲಿ ತಾತ್ಕಾಲಿಕವಾಗಿ ನೆಲೆಸಲು ಜಿಲ್ಲಾಡಳಿತ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಮೂಲಭೂತ ಸೌಕರ್ಯಗಳ ಕೊರತೆಯಿಂದ ತೀವ್ರ ಸಂಕಷ್ಟ ಎದುರಾಗಿದ್ದು, ಮಹಿಳೆಯರು ಬಯಲು ಶೌಚಕ್ಕೆ ತೆರಳಿದಾಗ ಕಿರುಕುಳ ಹಾಗೂ ಹಲ್ಲೆ ನಡೆಯುತ್ತಿದೆ. ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿರುವ ನಮಗೆ ಮಾನವೀಯ ಬದುಕಿನ ಹಕ್ಕು ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಬಾಗೆ ಕಾರಂಜಾ ಪ್ರದೇಶದಲ್ಲಿರುವ ನಾಲ್ಕು ಎಕರೆ ಸರ್ಕಾರಿ ಜಮೀನನ್ನು ಸಮತಟ್ಟುಗೊಳಿಸಿ ತಾತ್ಕಾಲಿಕವಾಗಿ ಗುಡಿಸಲು ನಿರ್ಮಿಸಿಕೊಳ್ಳಲು ಅವಕಾಶ ನೀಡಬೇಕು. ಜೊತೆಗೆ ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಪೊಲೀಸ್ ವರ್ತನೆಗೆ ಆಕ್ರೋಶ :

ಮನವಿ ಸಲ್ಲಿಸಲು ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಕಾಯುತ್ತಿದ್ದ ಅಲೆಮಾರಿ ಸಮುದಾಯದ ಜನರನ್ನು ಹೊರಹೋಗುವಂತೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪುಜಾರಿ ಗದರಿಸಿ, ಲಾಠಿ ಚಾರ್ಜ್ ಮಾಡುವ ಮುನ್ನವೇ ತೆರಳುವಂತೆ ಎಚ್ಚರಿಕೆ ನೀಡಿ ಕೆಲವರನ್ನು ತಳ್ಳಿದ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ.

ನಂತರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸ್ಥಳಕ್ಕೆ ಆಗಮಿಸಿ ಅಲೆಮಾರಿ ಜನರ ಸಮಸ್ಯೆ ಆಲಿಸಿದರು. ಬಳಿಕ ಸಂಸದ ಸಾಗರ್ ಖಂಡ್ರೆ ಸಭೆಯಿಂದ ಹೊರಬಂದು ಮನವಿ ಸ್ವೀಕರಿಸಿ, ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಉಪವಾಸ ಸತ್ಯಾಗ್ರಹದ ಎಚ್ಚರಿಕೆ :

ತಕ್ಷಣವೇ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸದಿದ್ದರೆ ಜುಲೈ 20ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ವಿಶ್ವ ಕ್ರಾಂತಿ ದಿವ್ಯ ಪೀಠದ ಅಧ್ಯಕ್ಷ ಓಂಪ್ರಕಾಶ್ ರೊಟ್ಟೆ ಎಚ್ಚರಿಕೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News