Bidar | ವಾರ್ತಾಭಾರತಿ ವರದಿ ಫಲಶ್ರುತಿ : ನಾಗಮಾರಪಳ್ಳಿ ಆರೋಗ್ಯ ಉಪಕೇಂದ್ರದಲ್ಲಿ ಸ್ವಚ್ಛತಾ ಕಾರ್ಯ
ತಾಲೂಕು ಆರೋಗ್ಯಾಧಿಕಾರಿ ಭೇಟಿ; ಶೀಘ್ರದಲ್ಲೇ ಕುಡಿಯುವ ನೀರು ಹಾಗೂ ಅಗತ್ಯ ಸೌಲಭ್ಯ ಕಲ್ಪಿಸುವ ಭರವಸೆ
ಬೀದರ್ : ಔರಾದ್ ತಾಲೂಕಿನ ನಾಗಮಾರಪಳ್ಳಿ ಗ್ರಾಮದ ಆರೋಗ್ಯ ಉಪಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಕುರಿತು ವಾರ್ತಾಭಾರತಿಯಲ್ಲಿ ಪ್ರಕಟವಾದ ವಿಶೇಷ ವರದಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
ಜುಲೈ 3ರಂದು ವಾರ್ತಾಭಾರತಿಯಲ್ಲಿ “ನಾಗಮಾರಪಳ್ಳಿ ಆರೋಗ್ಯ ಉಪಕೇಂದ್ರದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ಸಾರ್ವಜನಿಕರ ಪರದಾಟ” ಎಂಬ ಶೀರ್ಷಿಕೆಯಲ್ಲಿ ಪ್ರಕಟವಾದ ವರದಿಯ ಬಳಿಕ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಆರೋಗ್ಯ ಉಪಕೇಂದ್ರದ ಸುತ್ತಮುತ್ತ ಬೆಳೆದಿದ್ದ ಹುಲ್ಲು-ಗಿಡಗಳನ್ನು ತೆರವುಗೊಳಿಸಿ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ. ಅಲ್ಲದೆ, ಉಪಕೇಂದ್ರಕ್ಕೆ ವಿದ್ಯುತ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.
ಇನ್ನೂ ಎರಡು-ಮೂರು ದಿನಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನೂ ಮಾಡಲಾಗುವುದು ಎಂದು ಗ್ರಾಮ ಪಂಚಾಯಿತಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.
ಇದೇ ವೇಳೆ ತಾಲೂಕು ಆರೋಗ್ಯಾಧಿಕಾರಿ ಡಾ. ಅನಿಲ್ ಏಕಲೂರೆ ಅವರು ಆರೋಗ್ಯ ಉಪಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪಕೇಂದ್ರದಲ್ಲಿ ಬೆಡ್ ಸೇರಿದಂತೆ ಅಗತ್ಯವಿರುವ ಎಲ್ಲ ಮೂಲಸೌಕರ್ಯಗಳನ್ನು ಹಂತ ಹಂತವಾಗಿ ಒದಗಿಸುವುದಾಗಿ ಅವರು ಭರವಸೆ ನೀಡಿದರು.