×
Ad

ಬೀದರ್ | ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆಯನ್ನು ಬಹಳ ಎಚ್ಚರದಿಂದ ನಿರ್ವಹಿಸಬೇಕು : ಸಿಇಓ ಗಿರೀಶ್ ಬದೋಲೆ

Update: 2025-04-28 19:27 IST

ಬೀದರ್ : ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆಯನ್ನು ಬಹಳ ಎಚ್ಚರದಿಂದ ಹಾಗೂ ಜಾಗೃತಿಯಿಂದ ಹಾಗೂ ಯಾವುದೇ ತಪ್ಪು ಆಗದಂತೆ ಸಮೀಕ್ಷೆ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಗಿರೀಶ್ ಬದೋಲೆ ಅವರು ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗಿಕರಣದ ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೇನರ್‌ಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಭಾರತ ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಮೀಸಲಾತಿ ಸೌಲಭ್ಯಗಳು ಎಲ್ಲಾ ಸಮಾನ ಅವಕಾಶ ಕಲ್ಪಿಸಲು ಒಳ ಮೀಸಲಾತಿ ವರ್ಗಿಕರಣಕ್ಕೆ ಸ್ಪಷ್ಟವಾಗಿ ಮಾಹಿತಿ ಒದಗಿಸಲು ಆಯೋಗವು ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಈಗಾಗಲೇ ತರಬೇತಿ ನೀಡಲಾಗಿದ್ದು, ತಾಲ್ಲೂಕು ಮಟ್ಟದಲ್ಲಿ ನೀಡಲಾಗುವುದು ಹಾಗೂ ಗಣತಿದಾರರು ಕಡ್ಡಾಯವಾಗಿ ಶಿಕ್ಷಕರಾಗಿರಬೇಕು ಎಂದು ತಿಳಿಸಿದರು.

ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಸಂಪೂರ್ಣ ಮತ್ತು ಸ್ಪಷ್ಟವಾದ ಮಾಹಿತಿ ಪಡೆದುಕೊಳ್ಳಬೇಕು. ಹಾಗೆಯೇ ಅತ್ಯಂತ ಎಚ್ಚರಿಕೆಯಿಂದ ಸಮೀಕ್ಷೆ ನಡೆಸಬೇಕು. ಜಿಲ್ಲಾ ಮಟ್ಟದ ಮಾಸ್ಟರ್ ಟ್ರೇನರ್‌ಗಳು ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೇನರ್‌ಗಳಿಗೆ ಟ್ರೇನಿಂಗ್ ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ, ಉಪವಿಭಾಗಾಧಿಕಾರಿ ಎಂ.ಡಿ. ಶಕೀಲ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಸಿಂಧು ಹೆಚ್.ಎಸ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News