ಬೀದರ್: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಭಾಲ್ಕಿ ನಗರದಲ್ಲಿರುವ ಸಾರ್ವಜನಿಕ ಗ್ರಂಥಾಲಯದ ಕಾರ್ಯಾವಧಿಯನ್ನು ವಿಸ್ತರಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಈ ಕುರಿತು ವಿದ್ಯಾರ್ಥಿಗಳು ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರಿಗೆ ಮನವಿ ಸಲ್ಲಿಸಿ ಒಂದು ವಾರ ಕಳೆದಿದ್ದರೂ, ಗ್ರಂಥಾಲಯದ ಆಡಳಿತದಿಂದ ಯಾವುದೇ ನಿರ್ಧಾರ ಕೈಗೊಳ್ಳದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.

ವಿವಿಧ ಸರ್ಕಾರಿ ಇಲಾಖೆಗಳ ನೇಮಕಾತಿ ಅಧಿಸೂಚನೆಗಳು ಪ್ರಕಟವಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳ ದಿನಾಂಕಗಳು ಸಮೀಪಿಸುತ್ತಿವೆ. ಹೆಚ್ಚಿನ ಸಮಯ ಅಧ್ಯಯನಕ್ಕೆ ಮೀಸಲಿಡಬೇಕಾದ ಪರಿಸ್ಥಿತಿಯಲ್ಲಿ ಗ್ರಂಥಾಲಯದ ಸೀಮಿತ ಕಾರ್ಯಾವಧಿಯಿಂದ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ವಯೋಮಿತಿ ಮೀರಬಹುದೆಂಬ ಆತಂಕದ ನಡುವೆ ಸರ್ಕಾರಿ ಉದ್ಯೋಗಕ್ಕಾಗಿ ಹಗಲಿರುಳು ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಗ್ರಂಥಾಲಯದ ಕಾರ್ಯಾವಧಿ ವಿಸ್ತರಣೆ ಅಗತ್ಯವಾಗಿದೆ ಎಂದು ಅವರು ಆಗ್ರಹಿಸಿದ್ದಾರೆ.

ಈ ಹಿಂದೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜಿಲ್ಲಾ ಗ್ರಂಥಾಲಯದ ಮೇಲ್ವಿಚಾರಕರು ಕಾರ್ಯಾವಧಿ ವಿಸ್ತರಿಸಿ ಸಹಕರಿಸಿದ್ದರು. ಇದೀಗವೂ ಅದೇ ರೀತಿಯ ವ್ಯವಸ್ಥೆ ಕಲ್ಪಿಸಿ, ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಅನುಕೂಲಕರ ವಾತಾವರಣ ಒದಗಿಸಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor