×
Ad

Bidar | ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಕ್ಕೆ ಕ್ರಮ ಕೈಗೊಳ್ಳಿ: ಡಾ. ಅಬ್ದುಲ್ ಖದೀರ್

ಜನಾರೋಗ್ಯ ರಕ್ಷಣೆಗೆ ಸರ್ಕಾರ ಕಟ್ಟುನಿಟ್ಟಿನ ನಿರ್ಧಾರ ಕೈಗೊಳ್ಳಬೇಕು: ನಾಗರಿಕ ಸನ್ಮಾರ್ಗ ಸಮಿತಿ ಆಗ್ರಹ

Update: 2026-06-29 18:25 IST

ಬೀದರ್: ಕ್ಯಾನ್ಸರ್, ಶ್ವಾಸಕೋಶದ ಕಾಯಿಲೆ, ಹೃದಯ ಸಂಬಂಧಿ ಕಾಯಿಲೆಗಳು, ಪಾರ್ಶ್ವವಾಯು ಸೇರಿದಂತೆ ಅನೇಕ ದೀರ್ಘಕಾಲದ ಕಾಯಿಲೆಗಳಿಗೆ ಕಾರಣವಾಗುತ್ತಿರುವ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಬೀದರ್ ನಾಗರಿಕ ಸನ್ಮಾರ್ಗ ಸಮಿತಿಯ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಒತ್ತಾಯಿಸಿದರು.

ನಗರದಲ್ಲಿ ಸೋಮವಾರ ನಡೆದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಮಲು ಪದಾರ್ಥ ಸೇರಿಸಿರುವುದು ಪತ್ತೆಯಾದಲ್ಲಿ ಪಾನ್ ಮಸಾಲಾ, ಗುಟ್ಕಾ ಸೇರಿದಂತೆ ಇತರೆ ತಂಬಾಕು ಉತ್ಪನ್ನಗಳನ್ನು ನಿಷೇಧಿಸಲಾಗುವುದು ಎಂಬ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯನ್ನು ಸ್ವಾಗತಿಸಿದರು.

ಮುಖ್ಯಮಂತ್ರಿಯವರ ಈ ಹೇಳಿಕೆ ಜನಾರೋಗ್ಯ ರಕ್ಷಣೆಯ ವಿಷಯದಲ್ಲಿ ಸರ್ಕಾರದ ಬದ್ಧತೆ ಹಾಗೂ ಕಾಳಜಿಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು.

ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಸರ್ಕಾರ ಅಪಾರ ಪ್ರಮಾಣದ ಹಣ ವೆಚ್ಚ ಮಾಡುತ್ತಿದೆ. ಜೊತೆಗೆ, ರೋಗಕ್ಕೆ ತುತ್ತಾಗುತ್ತಿರುವ ಕುಟುಂಬಗಳೂ ಚಿಕಿತ್ಸೆಗೆ ಹೆಚ್ಚಿನ ಹಣ ಖರ್ಚು ಮಾಡುತ್ತಿವೆ. ಈ ವೆಚ್ಚಕ್ಕೆ ಹೋಲಿಸಿದರೆ ಗುಟ್ಕಾ, ಪಾನ್ ಮಸಾಲಾ ಮುಂತಾದ ಉತ್ಪನ್ನಗಳ ಮಾರಾಟದಿಂದ ಸರ್ಕಾರಕ್ಕೆ ದೊರೆಯುವ ತೆರಿಗೆ ಆದಾಯ ಅತ್ಯಂತ ಕಡಿಮೆ ಎಂಬುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಆಗ್ರಹಿಸಿದರು.

ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳು ತಂಬಾಕು ವಿರೋಧಿ ಜಾಗೃತಿ ಅಭಿಯಾನದಲ್ಲಿ ಕೈಜೋಡಿಸಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಮೂಲಕ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಸಮಿತಿಯ ಪ್ರಧಾನ ಕಾರ್ಯದರ್ಶಿ ಅಶೋಕ್ ವಡಗಾವೆ ಮಾತನಾಡಿ, ಜಾಗತಿಕ ಮಟ್ಟದಲ್ಲಿ ತಂಬಾಕು ಬಳಕೆ ಸಾರ್ವಜನಿಕ ಆರೋಗ್ಯಕ್ಕೆ ದೊಡ್ಡ ಬೆದರಿಕೆಯಾಗಿದ್ದು, ಇದು ಜೀವಹಾನಿಯ ಜೊತೆಗೆ ಭಾರೀ ಆರ್ಥಿಕ ಹೊರೆಗೂ ಕಾರಣವಾಗುತ್ತಿದೆ ಎಂದು ಹೇಳಿದರು.

ತಂಬಾಕು ಸೇವನೆಯಿಂದ ಉಂಟಾಗುವ ವಿವಿಧ ಕಾಯಿಲೆಗಳ ಚಿಕಿತ್ಸೆಗೆ ನೂರಾರು ಕೋಟಿ ರೂಪಾಯಿ ವೆಚ್ಚವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೀದರ್ ನಾಗರಿಕ ಸನ್ಮಾರ್ಗ ಸಮಿತಿಯು ಗುಟ್ಕಾ, ಪಾನ್ ಮಸಾಲಾ ಸೇವನೆಯ ವಿರುದ್ಧ ಜನಜಾಗೃತಿ ಅಭಿಯಾನ ನಡೆಸುತ್ತಿದ್ದು, ಗ್ರಾಮಗಳಿಗೆ ಭೇಟಿ ನೀಡಿ ವ್ಯಸನದಿಂದ ಉಂಟಾಗುವ ಆರೋಗ್ಯ ಹಾಗೂ ಆರ್ಥಿಕ ನಷ್ಟದ ಬಗ್ಗೆ ಅರಿವು ಮೂಡಿಸುತ್ತಿದೆ ಎಂದು ತಿಳಿಸಿದರು.

ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಡಾ. ರಾಜಶೇಖರ್ ಸೇಡಂಕರ್ ಮಾತನಾಡಿ, ವಿಶ್ವದಲ್ಲೇ ಅತಿ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ದಾಖಲಾಗುವ ರಾಷ್ಟ್ರಗಳಲ್ಲಿ ಭಾರತವೂ ಒಂದಾಗಿದೆ. ಗುಟ್ಕಾ, ಜರ್ದಾ, ಖೈನಿ ಹಾಗೂ ತಂಬಾಕು ಮಿಶ್ರಿತ ಪಾನ್ ಮಸಾಲಾ ಸೇವನೆಯೇ ಕ್ಯಾನ್ಸರ್ ಪ್ರಕರಣಗಳ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ವೃತ್ತಿಪರ ಸಿವಿಲ್ ಎಂಜಿಯರುಗಳ ಪರಿಷತ್ತಿನ ಸದಸ್ಯ ಹಾವಶೆಟ್ಟಿ ಪಾಟೀಲ್ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ್ ಚೆನಶೆಟ್ಟಿ ಸೇರಿದಂತೆ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News