Bidar | ಕಳ್ಳತನ ಪ್ರಕರಣ : 54 ಲಕ್ಷ 74 ಸಾವಿರದ ರೂ. ಮೌಲ್ಯದ ಸ್ವತ್ತು ಜಪ್ತಿ, ಇಬ್ಬರ ಬಂಧನ

Update: 2026-07-28 17:09 IST

ಬೀದರ್: ಹುಮನಾಬಾದ್ ಪಟ್ಟಣದಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿರುವ ಬೀದರ್ ಜಿಲ್ಲಾ ಪೊಲೀಸರು, ಚಿನ್ನ, ಬೆಳ್ಳಿ, ನಗದು ಹಾಗೂ ಕೃತ್ಯಕ್ಕೆ ಬಳಸಿದ ಕಾರು ಸೇರಿದಂತೆ ಒಟ್ಟು 54 ಲಕ್ಷ 74 ಸಾವಿರ ರೂ. ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡು ಇಬ್ಬರು ಅಂತರ್‌ರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ.

ಮಂಗಳವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಮನಾಬಾದ್ ಪಟ್ಟಣದ ಶಿವನಗರ ಕಾಲೋನಿಯಲ್ಲಿರುವ ಶಂಕರರಾವ್ ಅವರ ಮನೆಯ ಮೊದಲ ಮಹಡಿಯಲ್ಲಿ ಬಾಡಿಗೆಗೆ ನೀಡಿದ್ದ ಮೂರು ಮನೆಗಳು ಹಾಗೂ ಜಗನ್ನಾಥ್ ಪಾಟೀಲ್ ಅವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಬೀಗ ಮುರಿದು ಒಳನುಗ್ಗಿ ಚಿನ್ನ, ಬೆಳ್ಳಿ ಆಭರಣಗಳು ಮತ್ತು ನಗದು ಹಣವನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗಿತ್ತು ಎಂದು ತಿಳಿಸಿದರು.

ಪ್ರಕರಣದ ತನಿಖೆ ವೇಳೆ ಆರೋಪಿಗಳ ಬಗ್ಗೆ ಯಾವುದೇ ನೇರ ಸುಳಿವು ಲಭ್ಯವಾಗಿರಲಿಲ್ಲ. ಕಳ್ಳರು ಕೃತ್ಯದ ವೇಳೆ ಮಾಸ್ಕ್ ಧರಿಸಿದ್ದರಿಂದ ಸಿಸಿಟಿವಿ ದೃಶ್ಯಗಳಲ್ಲಿಯೂ ಸ್ಪಷ್ಟ ಗುರುತು ಸಿಗಲಿಲ್ಲ. ಒಂದೇ ಒಂದು ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದ್ದರೂ ಅದರ ಆಧಾರದ ಮೇಲೆ ಆರೋಪಿಗಳನ್ನು ಪತ್ತೆಹಚ್ಚುವುದು ಕಷ್ಟಕರವಾಗಿತ್ತು. ಆದರೂ ತಾಂತ್ರಿಕ ತನಿಖೆ ಹಾಗೂ ಮಾಹಿತಿ ಸಂಗ್ರಹದ ಮೂಲಕ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್‌ಪಿ ಹೇಳಿದರು.

ಬಂಧಿತ ಆರೋಪಿಗಳನ್ನು ವಿಜಯಪುರ ಮೂಲದ ಉಮೇಶ್ ಹಾಗೂ ಮಹಾರಾಷ್ಟ್ರದ ಸೋಲಾಪುರ ಮೂಲದ ಹುಸೇನಿ ಗಾಯಕ್ವಾಡ್ ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 42.75 ಲಕ್ಷ ರೂ. ಮೌಲ್ಯದ 28.5 ತೊಲೆ ಚಿನ್ನಾಭರಣ, 44 ಸಾವಿರ ರೂ. ಮೌಲ್ಯದ 22 ತೊಲೆ ಬೆಳ್ಳಿ, 5.80 ಲಕ್ಷ ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ 5.75 ಲಕ್ಷ ರೂ. ಮೌಲ್ಯದ ವಿಟಾರಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟಾರೆ 54.74 ಲಕ್ಷ ರೂ. ಮೌಲ್ಯದ ಸ್ವತ್ತು ಜಪ್ತಿ ಮಾಡಲಾಗಿದೆ.

ಬಂಧಿತ ಆರೋಪಿಗಳ ವಿರುದ್ಧ ವಿಜಯಪುರ, ಕೊಪ್ಪಳ, ಕಲಬುರಗಿ, ಮಹಾರಾಷ್ಟ್ರದ ಪೂಣೆ, ಸೋಲಾಪುರ ಹಾಗೂ ತೆಲಂಗಾಣದ ಮೆಹಬೂಬ್‌ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಇವರು ಅಂತರ್‌ರಾಜ್ಯ ಮಟ್ಟದಲ್ಲಿ ಕಳ್ಳತನ ನಡೆಸುತ್ತಿದ್ದ ಆರೋಪಿಗಳಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸ್‌ಪಿ ಪ್ರದೀಪ್ ಗುಂಟಿ ಮಾಹಿತಿ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News