Bidar | ನಿಸ್ಪಕ್ಷಪಾತ ಪತ್ರಿಕೋದ್ಯಮದಿಂದ ವೃತ್ತಿಗೂ ವ್ಯಕ್ತಿಗೂ ಗೌರವ: ಡಿಸಿ ಶಿಲ್ಪಾ ಶರ್ಮಾ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ
ಬೀದರ್: ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯಿಂದ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡರೆ ಸಮಾಜದಲ್ಲಿ ವೃತ್ತಿಗೂ ವ್ಯಕ್ತಿಗೂ ಗೌರವ ಹೆಚ್ಚುತ್ತದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ನಗರದ ಗುರುನಾನಕ್ ಸಮೀಪದ ಎಸ್ಆರ್ಎಸ್ ಫಂಕ್ಷನ್ ಹಾಲ್ನಲ್ಲಿ ಸೋಮವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾಗಿರುವ ಮಾಧ್ಯಮಗಳು ನಿಸ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ವಿಶ್ವಾಸಾರ್ಹ ಸುದ್ದಿ ಸಂಗ್ರಹಕ್ಕೆ ಆದ್ಯತೆ ನೀಡುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯ ವಿಶ್ವಾಸ ಗಳಿಸಬೇಕು ಎಂದು ಕರೆ ನೀಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ್ ತಗಡೂರು ಮಾತನಾಡಿ, ಪತ್ರಕರ್ತರು ಸಮಾಜದ ಸಮಸ್ಯೆಗಳನ್ನು ಗುರುತಿಸಿ ಪರಿಹಾರಕ್ಕೆ ದಾರಿ ತೋರಿಸುವ ಶಕ್ತಿಯಾಗಿದ್ದು, ಜನಪರ ಬರವಣಿಗೆಯೇ ಪತ್ರಿಕೋದ್ಯಮದ ಯಶಸ್ಸಿನ ಮಾನದಂಡ ಎಂದರು.
ಸಂಘದ ಜಿಲ್ಲಾಧ್ಯಕ್ಷ ಅನಂದ್ ದೇವಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಬೀದರ್ ಪತ್ರಿಕಾ ಭವನದ ನಿರ್ವಹಣೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ವಹಿಸಬೇಕು ಹಾಗೂ ಹಿಂದಿನ ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ್ ಜಾಬಶೆಟ್ಟಿ ಮಾತನಾಡಿದರು.
ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಸುಳ್ಳೊಳ್ಳಿ, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಅಪ್ಪಾರಾವ್ ಸೌದಿ, ರಾಷ್ಟ್ರೀಯ ಕಾರ್ಯಕಾರಿಣಿ ಮಂಡಳಿ ಸದಸ್ಯ ಬಸವರಾಜ್ ಪವಾರ್, ಸಂಘದ ಗೌರವ ಸಲಹೆಗಾರ ಗಂಧರ್ವ ಸೇನಾ, ಮಲ್ಲಿಕಾರ್ಜುನ್ ಬಿರಾದಾರ್, ಉಪಾಧ್ಯಕ್ಷ ಬಸವರಾಜ್ ಕಾಮಶೆಟ್ಟಿ, ಪ್ರಥ್ವಿರಾಜ.ಎಸ್, ಶ್ರೀಕಾಂತ್ ಬಿರಾದಾರ್, ಕಾರ್ಯದರ್ಶಿ ಸ್ವಾಮಿದಾಸ್ ನಾಗೂರೆ, ಸಂತೋಷ್ ಚಟ್ಟಿ, ಖಜಾಂಚಿ ಸುನಿಲಕುಮಾರ್ ಕುಲಕರ್ಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಸಂಘದ ಸದಸ್ಯ ಅಶೋಕಕುಮಾರ್ ಕರಂಜಿ ಸ್ವಾಗತಿಸಿದರು. ಕಾರ್ಯದರ್ಶಿ ಶಶಿಕಾಂತ್ ಶೆಂಬೆಳ್ಳಿ ನಿರೂಪಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಸ್ವಾಮಿ ವಂದಿಸಿದರು.