ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ : ಬಿಜೆಪಿ ಶಾಸಕ ಪ್ರಭು ಚೌವ್ಹಾಣ್ ವಿರುದ್ಧ ಎಸ್ಐಟಿಗೆ ದೂರು
ಉತ್ತರ ಪ್ರದೇಶ ಎಸ್ಐಟಿ ಅಧಿಕಾರಿಗಳಿಗೆ ಇ-ಮೇಲ್ ಮೂಲಕ ದೂರು ಸಲ್ಲಿಕೆ
ಶಾಸಕ ಪ್ರಭು ಚೌವ್ಹಾಣ್
ಬೀದರ್: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಸಂಗ್ರಹಿಸಲಾದ ದೇಣಿಗೆ ಮೊತ್ತದ ದುರುಪಯೋಗ ನಡೆದಿದೆ ಎಂಬ ಅನುಮಾನ ವ್ಯಕ್ತಪಡಿಸಿ, ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ದೀಪಕ್ ಪಾಟೀಲ್ ಅವರು ಉತ್ತರ ಪ್ರದೇಶದ ಎಸ್ಐಟಿ ಅಧಿಕಾರಿಗಳಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿದ್ದಾರೆ.
ದೂರಿನಲ್ಲಿ, ಆರೆಸ್ಸೆಸ್ನ ಪ್ರಮುಖ ಗೋಪಾಲ್ ಹಾಗೂ ಶಾಸಕ ಪ್ರಭು ಚವ್ಹಾಣ್ ಸೇರಿದಂತೆ ಕೆಲವರು ಈ ಹಿಂದೆ ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕಾಗಿ ಔರಾದ್ ತಾಲೂಕಿನ ಗುತ್ತಿಗೆದಾರರಿಂದ ದೊಡ್ಡ ಪ್ರಮಾಣದಲ್ಲಿ ದೇಣಿಗೆ ಸಂಗ್ರಹಿಸಿದ್ದರು ಎಂದು ಆರೋಪಿಸಲಾಗಿದೆ.
ಔರಾದ್ ತಾಲೂಕಿನ ಪ್ರತಿಯೊಬ್ಬ ಗುತ್ತಿಗೆದಾರರಿಂದ ಕನಿಷ್ಠ 5 ಲಕ್ಷ ರೂ. ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತದ ದೇಣಿಗೆಯನ್ನು ಸಂಗ್ರಹಿಸಲಾಗಿತ್ತು. ಆದರೆ, ಸಂಗ್ರಹಿಸಿದ ದೇಣಿಗೆ ಮೊತ್ತದ ಲೆಕ್ಕಪತ್ರಗಳು ಸಮರ್ಪಕವಾಗಿ ನಿರ್ವಹಿಸಲಾಗಿಲ್ಲ ಹಾಗೂ ಸುಳ್ಳು ಅಂಕಿ-ಅಂಶಗಳನ್ನು ತೋರಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕಾಗಿ ಸಂಗ್ರಹಿಸಲಾದ ದೇಣಿಗೆ ಹಣದ ಬಳಕೆಯ ಕುರಿತು ಸಮಗ್ರ ತನಿಖೆ ನಡೆಸಿ, ಯಾವುದೇ ಅಕ್ರಮ ಅಥವಾ ದುರುಪಯೋಗ ನಡೆದಿರುವುದು ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೀಪಕ್ ಪಾಟೀಲ್ ಆಗ್ರಹಿಸಿದ್ದಾರೆ.