ಬಸವಕಲ್ಯಾಣದ ಸರ್ಕಾರಿ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕಕ್ಕೆ ಆಗ್ರಹ
ಬಸವಕಲ್ಯಾಣ: ಮಹಾರಾಷ್ಟ್ರ ಗಡಿ ಹೊಂದಿಕೊಂಡಿರುವ ಬಸವಕಲ್ಯಾಣ ನಗರದಲ್ಲಿ ಹಲವು ವಿದ್ಯಾರ್ಥಿಗಳು ಮರಾಠಿ ಮಾಧ್ಯಮದಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ ಸರ್ಕಾರಿ ಶಾಲೆಗಳಲ್ಲಿ ಮರಾಠಿ ಬೋಧಿಸುವ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಕೂಡಲೇ ಮರಾಠಿ ಶಿಕ್ಷಕರನ್ನು ನಿಯೋಜಿಸಬೇಕು ಎಂದು ಶಾಸಕ ಶರಣು ಸಲಗರ್ ಅವರು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.
ಮಂಗಳವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕ ಶರಣು ಸಲಗರ್, ಬಸವಕಲ್ಯಾಣದ ಸರ್ಕಾರಿ ಶಾಲೆಗಳಲ್ಲಿ ಮರಾಠಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಸಂಖ್ಯೆಯ ಮರಾಠಿ ಶಿಕ್ಷಕರನ್ನು ಶೀಘ್ರವಾಗಿ ನೇಮಿಸಬೇಕು ಎಂದು ಒತ್ತಾಯಿಸಿದರು.
ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಮಧು ಬಂಗಾರಪ್ಪ ಅವರು, ಕೂಡಲೇ ಅಗತ್ಯ ಶಿಕ್ಷಕರನ್ನು ನೇಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಧ್ಯಾನೇಶ್ವರ್ ಮೂಳೆ, ಸೂರ್ಯಕಾಂತ್ ಚಿಲ್ಲಾಬಟ್ಟೆ, ಅಶೋಕ್ ವಕಾರೆ, ರಾಜು ವಾಡೇಕರ್, ಸಂಜು ಮೂಲ್ಗೆ, ನವನಾಥ್ ಸಾಲುಂಕೇ ಹಾಗೂ ಪವನ್ ರಾಠೋಡ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.