×
Ad

ಜನಸ್ಪಂದನ ಕಾರ್ಯಕ್ರಮದಲ್ಲಿ ತಕ್ಷಣವೇ ಪರಿಹಾರ ಒದಗಿಸಲಾಗುವುದು : ಸಚಿವ ರಹೀಂ ಖಾನ್

Update: 2025-07-01 21:44 IST

ಬೀದರ್ : ಇದ್ದ ಸ್ಥಳದಲ್ಲಿಯೇ ಜನರ ಸಮಸ್ಯೆಗಳನ್ನು ಬಗೆಹರಿಸುವ ಕರ್ನಾಟಕ ಸರ್ಕಾರದ ಜನಪ್ರಿಯ ಕಾರ್ಯಕ್ರಮವೇ ಜನಸ್ಪಂದನ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದಲ್ಲಿ ತಕ್ಷಣವೇ ಪರಿಹಾರ ಒದಗಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ತಿಳಿಸಿದರು.

ಇಂದು ಜನವಾಡದ ನಾಡ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜನವಾಡ ಭಾಗದಲ್ಲಿ ಏನೇ ಸಮಸ್ಯೆಯಾಗಿರಲಿ, ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳು ಇಲ್ಲೆ ಇದ್ದು ನೇರವಾಗಿ ಭೇಟಿ ಮಾಡಿ ಸಮಸ್ಯೆ ಬಗೆಹರಿಸಲಿದ್ದಾರೆ. ಜನವಾಡದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಆಸ್ಪತ್ರೆ ನಿರ್ಮಾಣವಾಗಲಿದೆ. ಹಾಗೆಯೇ ಈ ಭಾಗದಲ್ಲಿ ಅನೇಕ ರಸ್ತೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿವೆ ಎಂದರು.

ಎ ಮತ್ತು ಬಿ ಖಾತಾಗಳ ಸೇವೆಗಳು ಪಂಚಾಯತ್‌ ಮಟ್ಟದಲ್ಲಿ ಕೂಡ ಶೀಘ್ರದಲ್ಲೇ ಆರಂಭವಾಗಲಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ಫಲಾನುಭವಿಗಳಿಗೆ ನೇರವಾಗಿ ಸೌಲಭ್ಯ ಒದಗಿಸುವ ಪಂಚ ಗ್ಯಾರಂಟಿಗಳು ಜನರ ಜೀವನ ಮಟ್ಟ ಸುಧಾರಿಸುತ್ತಿವೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ಈ ಕಾರ್ಯಕ್ರಮವು ಜನರಿಗೆ ಅತ್ಯಂತ ಉಪಯುಕ್ತವಾಗಿದ್ದು, ಜನರು ನೇರವಾಗಿ ಸ್ಥಳದಲ್ಲಿಯೇ ಪರಿಹಾರ ಪಡೆದುಕೊಳ್ಳಬಹುದು ಎಂದು ಹೇಳಿದರು.

ಈ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು 253 ಅರ್ಜಿಗಳು ಪಡೆದುಕೊಂಡಿದ್ದು ಇದರಲ್ಲಿ ರಸ್ತೆ, ಮನೆ, ನೀರು, ಸಾರಿಗೆ, ವಿದ್ಯುತ್, ಜಮೀನು, ಒಳಚರಂಡಿ ಸ್ವಚ್ಛತೆ, ಪಿಂಚಣಿ, ರೇಷನ್ ಕಾರ್ಡ್, ಗಂಗಾ ಕಲ್ಯಾಣ ಯೋಜನೆಯಡಿ ಬೋರವೆಲ್, ದೈಹಿಕ ಅಂಗವಿಕಲತೆ ಪ್ರಮಾಣ ಪತ್ರ ಸಮಸ್ಯೆ, ಸಮಾಜ ಕಲ್ಯಾಣ ಇಲಾಖೆಯಲ್ಲಿನ ಸಿಬ್ಬಂದಿ ನೇಮಕ ಮತ್ತು ಜನವಾಡ ಮುಖ್ಯ ರಸ್ತೆಯಲ್ಲಿರುವ ಮದ್ಯದ ಅಂಗಡಿ ಸ್ಥಳಾಂತರಿಸುವ ಕುರಿತು ಅರ್ಜಿಗಳಿದ್ದು, ಹಲವು ಅರ್ಜಿಗಳನ್ನು ಸ್ಥಳದಲ್ಲಿಯೇ ಮತ್ತು ಇನ್ನೂಳಿದ ಅರ್ಜಿಯನ್ನು 7 ದಿನದ ಒಳಗಾಗಿ ಇತ್ಯರ್ಥಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಹಣಾಧಿಕಾರಿ ಗಿರೀಶ್ ಬದೋಲೆ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಧವಾ ಆದೇಶ ಪತ್ರ, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮಂಜೂರಾದ ಫಲಾನುಭವಿಗಳಿಗೆ ಮನೆಗಳ ಹಕ್ಕು ಪತ್ರ , ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಲು ಜಾಬ್ ಕಾರ್ಡ್ ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಅಪರ್ ಜಿಲ್ಲಾಧಿಕಾರಿ ಡಾ.ಈಶ್ವರ್ ಉಳ್ಳಾಗಡ್ಡಿ, ನಗರಸಭೆ ಅಧ್ಯಕ್ಷ ಮುಹಮ್ಮದ್ ಗೌಸ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಬೀದರ್ ಸಹಾಯಕ ಆಯುಕ್ತ ಮಹಮದ್ ಶಕೀಲ್, ಬೀದರ್ ತಹಸಿಲ್ದಾರ್ ಡಿ. ಮೆಹತ್, ತಾಲೂಕು ಪಂಚಾಯತ್ ನಿರ್ವಹಣಾಧಿಕಾರಿ ಮಾಣಿಕರಾವ್ ಪಾಟೀಲ್, ನಾಡ ತಹಶೀಲ್ದಾರ್ ಅಶೋಕ್ ರಾಜಗಿರಾ, ಜಿಲ್ಲಾಧಿಕಾರಿ ಕಚೇರಿ ಶಿರಸ್ತೇದಾರ್ ಕಿರಣ್ ಕುಮಾರ್ ಹಾಗೂ ಜನವಾಡ ಗ್ರಾಮ ಪಂಚಾಯತ್‌ ಅಧ್ಯಕ್ಷೆ ವೈಜಯಂತಿಬಾಯಿ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಜನವಾಡ ಹೊಬಳಿಯ ವಿವಿಧ ಗ್ರಾಮಸ್ಥರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News