ಹಳೆಯ ವಿದ್ಯುತ್ ಕಂಬ, ತಂತಿ ಬದಲಾವಣೆಗೆ ಶಾಸಕ ಪ್ರಭು ಚವ್ಹಾಣ್ ಒತ್ತಾಯ
ಔರಾದ್: ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಬಹಳ ವರ್ಷಗಳಿಂದ ಬಳಕೆಯಲ್ಲಿರುವ ಹಳೆಯ ಹಾಗೂ ಶಿಥಿಲಗೊಂಡ ವಿದ್ಯುತ್ ಕಂಬಗಳು ಮತ್ತು ತಂತಿಗಳನ್ನು ಹಂತ ಹಂತವಾಗಿ ಬದಲಿಸಿ, ಹೊಸ ಕಂಬ ಹಾಗೂ ತಂತಿಗಳನ್ನು ಅಳವಡಿಸುವಂತೆ ಶಾಸಕ ಪ್ರಭು ಚವ್ಹಾಣ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬುಧವಾರ ವಿಧಾನಸಭೆ ಅಧಿವೇಶನದಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆ ಕೇಳಿದ ಅವರು, ಕ್ಷೇತ್ರದ ಹಲವು ಗ್ರಾಮಗಳಲ್ಲಿ ಹಳೆಯ ವಿದ್ಯುತ್ ಕಂಬಗಳು ಹಾಗೂ ತಂತಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಮಳೆ ಹಾಗೂ ಗಾಳಿ ಸಂದರ್ಭದಲ್ಲಿ ಇವುಗಳಿಂದ ಅಪಾಯದ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಶಿಥಿಲಗೊಂಡಿರುವ ವಿದ್ಯುತ್ ಮೂಲಸೌಕರ್ಯವನ್ನು ತುರ್ತಾಗಿ ಬದಲಿಸುವ ಅಗತ್ಯವಿದೆ ಎಂದು ಹೇಳಿದರು.
ಶಾಸಕರ ಪ್ರಶ್ನೆಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಲಿಖಿತ ಉತ್ತರ ನೀಡಿದ್ದು, ಕ್ಷೇತ್ರದಲ್ಲಿರುವ ಹಳೆಯ ವಿದ್ಯುತ್ ಕಂಬಗಳು ಹಾಗೂ ತಂತಿಗಳ ಸ್ಥಿತಿಗತಿಗಳ ಕುರಿತು ಮಾಹಿತಿ ನೀಡಿದ್ದಾರೆ.
ಆದರೆ ಸಚಿವರ ಲಿಖಿತ ಉತ್ತರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಪ್ರಭು ಚವ್ಹಾಣ್, ಸರ್ಕಾರ ನೀಡಿರುವ ಮಾಹಿತಿಗೂ ಕ್ಷೇತ್ರದಲ್ಲಿನ ವಾಸ್ತವ ಪರಿಸ್ಥಿತಿಗೂ ವ್ಯತ್ಯಾಸವಿದೆ ಎಂದು ಹೇಳಿದರು. ಹಲವು ಗ್ರಾಮಗಳಲ್ಲಿ ವಿದ್ಯುತ್ ತಂತಿಗಳು ಜೋತುಬಿದ್ದಿದ್ದು, ಸಾರ್ವಜನಿಕರಿಗೆ ಅಪಾಯ ಉಂಟುಮಾಡುವ ಸ್ಥಿತಿಯಲ್ಲಿವೆ. ವಿದ್ಯುತ್ ಅವಘಡಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಹಳೆಯ ಕಂಬ ಹಾಗೂ ತಂತಿಗಳನ್ನು ತುರ್ತಾಗಿ ಬದಲಿಸಿ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.