×
Ad

ಬೀದರ್‌ | ಶಾಸಕ ಪ್ರಭು ಚವ್ಹಾಣ್‌ ಗ್ರಾಮ ವಾಸ್ತವ್ಯ : ಮೂಲ ಸೌಕರ್ಯ ಪರಿಶೀಲನೆ

Update: 2026-06-22 18:46 IST

ಔರಾದ್ : ಪ್ರಧಾನಿ ನರೇಂದ್ರ ಮೋದಿಯವರು ದೇಶದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿಯಾಗಿ ಹೊಸ ದಾಖಲೆ ನಿರ್ಮಿಸಿರುವ ಹಿನ್ನೆಲೆಯಲ್ಲಿ ಶಾಸಕ ಪ್ರಭು ಚವ್ಹಾಣ ಅವರು ರಾಮುನಾಯಕ ತಾಂಡಾ ಬೋಂತಿಯಲ್ಲಿ ಶನಿವಾರ ಗ್ರಾಮ ವಾಸ್ತವ್ಯ ನಡೆಸಿ, ಅಲ್ಲಿನ ಮೂಲ ಸೌಕರ್ಯ ಪರಿಶೀಲಿಸಿದರು.

ಶನಿವಾರ ಸಾಯಂಕಾಲ ಗ್ರಾಮಕ್ಕೆ ಭೇಟಿ ನೀಡಿದ ಅವರು, ಮನೆಯೊಂದರ ಮುಂದೆ ಹೊರಸಿನ ಮೇಲೆ ಕುಳಿತು ಜನರ ಸಮಸ್ಯೆಗಳನ್ನು ಆಲಿಸಿದರು. ಸ್ಥಳೀಯರು ಒಬ್ಬೊಬ್ಬರಾಗಿ ಗ್ರಾಮದ ಸಮಸ್ಯೆಗಳು ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಕುರಿತು ಶಾಸಕರ ಗಮನಕ್ಕೆ ತಂದರು.

ಗ್ರಾಮದಲ್ಲಿನ ಕುಡಿಯುವ ನೀರಿನ ಪೂರೈಕೆ, ಶಾಲಾ ಶಿಕ್ಷಕರ ಮತ್ತು ಅಲ್ಲಿನ ಶಿಕ್ಷಣದ ಹಾಗೂ ಅಂಗನವಾಡಿ ಕೇಂದ್ರದ ಬಗ್ಗೆ ಹಲವು ಪ್ರಶ್ನೆಗಳನ್ನು ಕೇಳುವ ಮೂಲಕ ಗ್ರಾಮದಲ್ಲಿರುವ ಮೂಲ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದರು. ಗ್ರಾಮಸ್ಥರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ, ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಸ್ಮಶಾನಭೂಮಿ ಸಮಸ್ಯೆಗೆ ಸಂಬಂಧಿಸಿದಂತೆ ಗ್ರಾಮಸ್ಥರು ಜಮೀನು ನೀಡಲು ಒಪ್ಪಿಗೆ ಸೂಚಿಸಿರುವುದನ್ನು ಉಲ್ಲೇಖಿಸಿದ ಅವರು, ಅಗತ್ಯ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಸ್ಮಶಾನಭೂಮಿಗೆ ಭೂಮಿ ಮಂಜೂರು ಮಾಡುವ ಕುರಿತು ಕಂದಾಯ ಇಲಾಖೆಯು ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರರಿಗೆ ಸೂಚಿಸಿದರು.

ಈ ವೇಳೆ ತಾಂಡಾವನ್ನು ಕಂದಾಯ ಗ್ರಾಮವನ್ನಾಗಿ ಘೋಷಿಸುವಂತೆ ಸ್ಥಳೀಯರು ಮನವಿ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಶಾಸಕರು, ಕ್ಷೇತ್ರದ ಹಲವು ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವ ಕಾರ್ಯ ಈಗಾಗಲೇ ಪ್ರಗತಿಯಲ್ಲಿದ್ದು, ಮುಂದಿನ ದಿನಗಳಲ್ಲಿ ರಾಮುನಾಯಕ ತಾಂಡಾವನ್ನೂ ಕಂದಾಯ ಗ್ರಾಮವನ್ನಾಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ನಂತರ ಮಾತನಾಡಿದ ಅವರು, ಗ್ರಾಮದಲ್ಲಿ ರಸ್ತೆ, ಶಾಲೆ, ಅಂಗನವಾಡಿ, ಕುಡಿಯುವ ನೀರಿನ ಪೂರೈಕೆ ಸೇರಿದಂತೆ ವಿವಿಧ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ. ಗ್ರಾಮಸ್ಥರ ಬಹುತೇಕ ಬೇಡಿಕೆಗಳನ್ನು ಈಡೇರಿಸಲಾಗಿದ್ದು, ಸಮುದಾಯ ಭವನದ ಕಾಮಗಾರಿ ಈಗಾಗಲೇ ಕೈಗೊಳ್ಳಲಾಗಿದೆ. ಬಾಕಿ ಉಳಿದ ಕಾಮಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಮಹೇಶ್ ಪಾಟೀಲ್ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ್ ಪಾಟೀಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು, ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ನಂತರ ಶಾಸಕ ಪ್ರಭು ಚವ್ಹಾಣ ಅವರು ಗ್ರಾಮದ ಹಿರಿಯರಾದ ದೇವು ನಾಯಕ್ ಅವರ ಮನೆಯಲ್ಲಿ ವಾಸ್ತವ್ಯ ಮಾಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News