ಅಧಿಕಾರಿಗಳು ವಿಶೇಷ ಚೇತನ ಮಕ್ಕಳಿಗೆ ಸರ್ಕಾರದ ಸೌಲಭ್ಯ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು: ಶಾಸಕ ಪ್ರಭು ಚೌವ್ಹಾಣ್
ಔರಾದ್ : ವಿಶೇಷ ಚೇತನರ ಹಿತಾಸಕ್ತಿಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ಎಲ್ಲ ಕಲ್ಯಾಣ ಯೋಜನೆಗಳ ಬಗ್ಗೆ ಹೆಚ್ಚಿನ ಪ್ರಚಾರ ನೀಡುವ ಮೂಲಕ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಲು ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಪ್ರಭು ಬಿ.ಚೌವ್ಹಾಣ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಆವರಣದಲ್ಲಿ, ಶಾಲಾ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಯೋಜನೆಯಡಿ ಸಮನ್ವಯ ಶಿಕ್ಷಣ ವಿಭಾಗದಿಂದ ಏರ್ಪಡಿಸಿದ್ದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುವ ವಿಕಲಚೇತನ ವಿದ್ಯಾರ್ಥಿಗಳಿಗೆ ಸಾಧನ ಸಲಕರಣೆ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿಕಲಚೇತನ ಮಕ್ಕಳಲ್ಲಿಯೂ ವಿಶೇಷ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಪಾಲಕರು ಮತ್ತು ಶಿಕ್ಷಕರಿಂದ ಆಗಬೇಕು. ಮಕ್ಕಳು ತಮ್ಮಲ್ಲಿನ ದೌರ್ಬಲ್ಯಗಳ ಬಗ್ಗೆ ತಲೆಕೆಡಿಸಿಕೊಳ್ಳದೇ ಸಾಧನೆಯತ್ತ ಹೆಚ್ಚಿನ ಗಮನ ಹರಿಸಬೇಕು. ಸರ್ಕಾರದಿಂದ ಇರುವ ಯೋಜನೆಗಳ ಬಗ್ಗೆ ತಿಳಿದುಕೊಂಡು ಸೌಲಭ್ಯ ಪಡೆಯಲು ಯತ್ನಿಸಬೇಕು ಎಂದರು.
ವಿಶೇಷ ಚೇತನ ಮಕ್ಕಳಿಗೆ ವಿಶೇಷ ಗಮನ ಹರಿಸಿ ಅವರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವುದು ನಮ್ಮೆಲ್ಲರ ಹೊಣೆಯಾಗಿದೆ. ಈ ದಿಶೆಯಲ್ಲಿ ನಾನು ಪ್ರಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ವಿಶೇಷ ಚೇತನರು ಯಾವುದೇ ರೀತಿಯ ಸಮಸ್ಯೆಯಿರಲಿ ನೇರವಾಗಿ ತಮ್ಮನ್ನು ಭೇಟಿಯಾಗಿ ಸಮಸ್ಯೆ ಪರಿಹರಿಸಿಕೊಳ್ಳಬಹುದು. ಪಾಲಕರು ಕೂಡ ತಮ್ಮ ವಿಕಲಚೇತನ ಮಕ್ಕಳಿಗೆ ತಾತ್ಸಾರದಿಂದ ಕಾಣದೇ ತಪ್ಪದೆ ಶಾಲೆಗೆ ಕಳುಹಿಸಬೇಕು. ವಿಶೇಷ ಗುರುತಿನ ಚೀಟಿ ಮಾಡಿಸಿಕೊಂಡು ಸರ್ಕಾರದ ಸೌಲಭ್ಯಗಳ ಲಾಭ ಪಡೆಯಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಮನ್ವಯ ಶಿಕ್ಷಣದ ಸಂಪನ್ಮೂಲ ವ್ಯಕ್ತಿ ಡಾ.ಶಾಲಿವಾನ್ ಉದಗಿರೆ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ್ ಪಾಟೀಲ್, ಸಹಾಯಕ ನಿರ್ದೇಶಕ ಶಿವಕುಮಾರ್ ಘಾಟೆ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜೆ ರಂಗೇಶ್, ಸಮನ್ವಯಾಧಿಕಾರಿ ಪ್ರಕಾಶ್ ರಾಥೋಡ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಓಂಪ್ರಕಾಶ್ ದಡ್ಡೆ, ಶಿವರಾಜ್ ಅಲ್ಮಾಜೆ, ಸಚಿನ್ ರಾಠೋಡ್, ಕೇರಬಾ ಪವಾರ್, ಗುಂಡಪ್ಪ ಮುಧಾಳೆ, ಸಂಜು ವಡೆಯರ್, ಪ್ರದೀಪ್ ಪವಾರ್, ಅಶೋಕ್ ಶಂಬೆಳ್ಳಿ, ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಶಿವಾನಂದ್ ಮೊಕ್ತೆದಾರ್, ರಮೇಶ್ ಡೊಂಬಾಳೆ, ಯಶವಂತರಾವ್ ಡೊಂಬಾಳೆ ಹಾಗೂ ಸಿ ಆರ್ ಪಿ, ಬಿ ಆರ್ ಪಿ, ಇಸಿಓ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.