ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಸಲು ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹ

Update: 2026-08-10 23:10 IST

ಬೀದರ್: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ ರೈತರ ಎಲ್ಲ ರೀತಿಯ ಸಾಲ ಮನ್ನಾ ಮಾಡಬೇಕು. ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 50 ಸಾವಿರ ರೂ. ಪರಿಹಾರ ನೀಡಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಜಂಟಿ ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ಒತ್ತಾಯಿಸಲಾಗಿದೆ.

ಈ ಕುರಿತು ಬೀದರ್ ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿಗೆ ಸೋಮವಾರ ಸಲ್ಲಿಸಿರುವ ಮನವಿಯಲ್ಲಿ, ರೈತರು, ಕಾರ್ಮಿಕರು ಹಾಗೂ ಕೃಷಿ ಕೂಲಿಕಾರ್ಮಿಕರ ವಿವಿಧ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಬೇಕು ಎಂದು ಆಗ್ರಹಿಸಲಾಗಿದೆ.

ಬೀದರ್ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಅನೇಕ ಕಡೆ ಬೆಳೆಗಳು ಸರಿಯಾಗಿ ಬೆಳೆದಿಲ್ಲ. ರೈತರು ಬೀಜ, ರಸಗೊಬ್ಬರ, ಕೃಷಿ ಚಟುವಟಿಕೆಗಳಿಗೆ ಮಾಡಿದ ಖರ್ಚು ಕೂಡ ಮರಳಿ ಪಡೆಯಲಾಗದ ಸ್ಥಿತಿ ನಿರ್ಮಾಣವಾಗಿದೆ. ಟ್ರ್ಯಾಕ್ಟರ್ ಸೇರಿದಂತೆ ಕೃಷಿ ಯಂತ್ರೋಪಕರಣಗಳಿಗಾಗಿ ಸಾಲ ಪಡೆದ ರೈತರು ಸಾಲದ ಕಂತು ಪಾವತಿಸಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಲಾಗಿದೆ.

ಎಸ್‌ಬಿಐ ಸೇರಿದಂತೆ ವಿವಿಧ ಬ್ಯಾಂಕ್‌ಗಳು ರೈತರಿಗೆ ಸಾಲ ಮರುಪಾವತಿಸುವಂತೆ ಡಿಮ್ಯಾಂಡ್ ನೋಟಿಸ್ ಜಾರಿ ಮಾಡುತ್ತಿದ್ದು, ಸರ್ಫೇಸಿ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡುತ್ತಿರುವುದು ರೈತರ ಆತಂಕವನ್ನು ಹೆಚ್ಚಿಸಿದೆ. ಚೊಂಡಿ ಗ್ರಾಮದ ಮಾಣಿಕಪ್ಪ, ಕಂಟೆಪ್ಪ, ನೀಲಮ್ಮ ಮೇತ್ರೆ, ಜಗದೀಶ್ವರ್, ವೈಜಿನಾಥ್ ಚೊಂಡಿ ಹಾಗೂ ರಾಚಮ್ಮ ಸೇರಿದಂತೆ ರೈತರಿಗೆ ನೀಡಿರುವ ನೋಟಿಸ್‌ಗಳನ್ನು ಹಿಂಪಡೆಯಬೇಕು ಮತ್ತು ಅವರ ಸಾಲವನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಲಾಗಿದೆ.

ಬಗರ್‌ಹುಕುಂ ಸಾಗುವಳಿದಾರರಿಗೆ ‘ಸಿ’ ಫಾರಂ ನೀಡಬೇಕು. ಫಾರಂ ನಂ.57ರ ಅರ್ಜಿಗಳನ್ನು ಸ್ವೀಕರಿಸಲು ರಾಜ್ಯದ ಎಲ್ಲ ತಹಶೀಲ್ದಾರರಿಗೆ ಸರ್ಕಾರ ನಿರ್ದೇಶನ ನೀಡಬೇಕು. ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದು, ಕಾರ್ಮಿಕ ಕಾಯ್ದೆಗಳಿಗೆ ಮಾಡಿರುವ ತಿದ್ದುಪಡಿಗಳನ್ನು ಹಿಂಪಡೆಯಬೇಕು. ರಾಜ್ಯ ಸರ್ಕಾರ ಅಕುಶಲ ಕಾರ್ಮಿಕರಿಗೆ ತಿಂಗಳಿಗೆ 24 ಸಾವಿರ ರೂ. ಹಾಗೂ ಕುಶಲ ಕಾರ್ಮಿಕರಿಗೆ 32 ಸಾವಿರ ರೂ. ಕನಿಷ್ಠ ವೇತನ ನಿಗದಿಪಡಿಸಿದ್ದರೂ, ಕಾರ್ಖಾನೆ ಮಾಲೀಕರ ಒತ್ತಡದಿಂದ ಅದು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.

ಅಂಗನವಾಡಿ ಬಿಸಿಯೂಟ ಕಾರ್ಮಿಕರು ಹಾಗೂ ಆಶಾ ಕಾರ್ಯಕರ್ತೆಯರನ್ನು ಕ್ರಮಬದ್ಧಗೊಳಿಸಬೇಕು. ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯ ದುರುಪಯೋಗದ ಕುರಿತು ತನಿಖೆ ನಡೆಸಿ, ತಪ್ಪಿತಸ್ಥ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಅಧಿಕಾರಿಗಳ ವಿರುದ್ಧ ಅಪರಾಧಿಕ ಪ್ರಕರಣ ದಾಖಲಿಸಬೇಕು. ಸಂಧ್ಯಾ ಸುರಕ್ಷಾ ಯೋಜನೆ ಹಾಗೂ ಅಂಗವಿಕಲರ ಪಿಂಚಣಿ ಸೇರಿದಂತೆ ಬಾಕಿ ಇರುವ ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ಕೂಡಲೇ ಬಿಡುಗಡೆ ಮಾಡಬೇಕು. ಶಾಸಕರು ಮತ್ತು ಸಂಸದರ ವೇತನ ಹಾಗೂ ನಿವೃತ್ತಿ ವೇತನ ವ್ಯವಸ್ಥೆಯನ್ನು ರದ್ದುಪಡಿಸಬೇಕು. ಇಲ್ಲದಿದ್ದರೆ ಪ್ರತಿಯೊಬ್ಬ ರೈತ ಮತ್ತು ಕಾರ್ಮಿಕರಿಗೆ ತಿಂಗಳಿಗೆ 10 ಸಾವಿರ ರೂ. ಗೌರವಧನ ನೀಡುವಂತೆ ಹಾಗೂ ಮತದಾರರಿಗೆ ತಮ್ಮ ಪ್ರತಿನಿಧಿಗಳನ್ನು ಅವಧಿ ಪೂರ್ವವಾಗಿ ಹಿಂದಕ್ಕೆ ಕರೆಯುವ (ರೈಟ್‌ ಟು ರೀಕಾಲ್) ಅಧಿಕಾರ ನೀಡುವಂತೆ ಜನಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತರಬೇಕು ಎಂಬ ಬೇಡಿಕೆಗಳನ್ನು ಇಡಲಾಗಿದೆ.

ಈ ಸಂದರ್ಭದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಜಂಟಿ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಮುಖಂಡ ಶಿವರಾಜ್ ಪಾಟೀಲ್, ಕೋಂಡಿಬಾ ಪಾಂಡ್ರೆ, ಅರುಣ್ ಪಟೇಲ್, ಶಿವರಾಯ್ ಮುದಾಳೆ, ವೀರರೆಡ್ಡಿ ಪಾಟೀಲ್, ಜೈಶೀಲಕುಮಾರ್, ಬಾಬುರಾವ್ ಹೊನ್ನಾ, ನಜೀರ ಅಹ್ಮದ್, ವೀರಶೆಟ್ಟಿ ಒಟಂಬೆ, ರಾಜಕುಮಾರ್ ಬಗದಲ್, ಶೀಲಾ ಸಾಗರ್, ಶಫಿಯುದ್ದೀನ್, ಶಫಾಯತ್ ಅಲಿ, ಪ್ರಭು ತಗಣಿಕರ್, ಚಂದ್ರಕಲಾ, ಸುಜಾತಾ, ಕಲ್ಲಪ್ಪ, ವೈಜಿನಾಥ್, ರಾಚಮ್ಮ, ಬಸವರಾಜ್ ಪಟೀಲ್, ಬಂಡೆಮ್ಮಾ ಹಾಗೂ ಮೌಲಾನಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News