ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಬಸವಕಲ್ಯಾಣದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

Update: 2026-07-24 21:31 IST

ಬಸವಕಲ್ಯಾಣ: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ನಡೆಯುತ್ತಿರುವ ಅನ್ಯಾಯವನ್ನು ಖಂಡಿಸಿ ವಿದ್ಯಾರ್ಥಿ ಮುಖಂಡ ಅರುಣ್ ಗಾಯಕ್ವಾಡ್ ಅವರ ನೇತೃತ್ವದಲ್ಲಿ ಶುಕ್ರವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಬಳಿಕ ತಹಶೀಲ್ದಾರ್ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಕೇಂದ್ರ ಸರ್ಕಾರ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ಅಲ್ಲದೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಮನವಿಯಲ್ಲಿ ದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟರು.

ಪ್ರತಿಭಟನೆಯಲ್ಲಿ ಶಂಕರ್ ಫುಲೆ, ಸಂದೀಪ್ ಮುಕಿಂದೆ, ದೇವಾನಂದ್ ತೊಳೆ, ಮಹಾಂತೇಶ್ ಗೌರಕರ್, ನಿತ್ಯಾನಂದ್ ಮಂಠಾಳಕರ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News