×
Ad

ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Update: 2025-07-04 17:10 IST

ಬೀದರ್: ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸದ್ಯ ಹಿನ್ನಡೆಯಾಗಿರಬಹುದು, ಆದರೆ ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭವಿಷ್ಯ ನುಡಿದರು.

ಇಂದು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳವಾಗಿದ್ದಾರೆ. ಮಹಿಳೆಯರು, ಬಡವರ ಬಗ್ಗೆ ಯೋಚಿಸಿ ಕಾಂಗ್ರೆಸ್ ಪಕ್ಷ ಯೋಜನೆಗಳನ್ನು ರೂಪಿಸುತ್ತದೆ ಎಂದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಬೀದರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದೆ. ಕೇಂದ್ರ ಸರ್ಕಾರ ಬರೀ ಪೊಳ್ಳು ಭರವಸೆ ನೀಡುತ್ತಾ, ಜನ ಸಾಮಾನ್ಯರನ್ನು ವಂಚಿಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಜನರೇ ಅದಕ್ಕೆ ಪಾಠ ಕಲಿಸುತ್ತಾರೆ ಎಂದು ಅವರು ತಿಳಿಸಿದರು.

ಎಲ್ಲರ ಸಹಕಾರ ನಮ್ಮ ಪಕ್ಷದ ಮೇಲೆ ಇರಲಿ. ರಾಜ್ಯದ ಏಳು ಕೋಟಿ ಜನ ಸಂಖ್ಯೆಗೆ ನಾನು ಏಕೈಕ ಮಹಿಳಾ ಸಚಿವೆಯಾಗಿರುವೆ. ಸಾಮಾನ್ಯ ಕಾರ್ಯಕರ್ತೆಯಾಗಿದ್ದ ನನ್ನನ್ನು ಗುರುತಿಸಿ ಪಕ್ಷ ನನಗೆ ಟಿಕೆಟ್ ನೀಡಿತು. ಬ್ಲಾಕ್, ಜಿಲ್ಲಾ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಕೆಲಸ ಮಾಡಿರುವೆ. ಎರಡು ಬಾರಿ ಸೋತರೂ ಪಕ್ಷ ನನ್ನನ್ನು ಗುರುತಿಸಿತು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೊಡೆ, ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ಜಿಲ್ಲಾಧ್ಯಕ್ಷ ಬಸವರಾಜ್ ಜಾಬ್‌ಶೆಟ್ಟಿ, ಯುವ ಮುಖಂಡ ಅನಿಲ್ ಬೆಲ್ದಾರ್, ದತ್ತು ಮೂಲಗೆ, ಸಂಜಯ್ ಜಹಾಗೀರದಾರ್ ಹಾಗೂ ಶ್ರೀಕಾಂತ್ ಸ್ವಾಮಿ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿ, ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News