ಡಿ.ದೇವರಾಜ ಅರಸು ಅವರು ತಂದ ಉಳುವನೇ ಭೂಮಿಯ ಒಡೆಯ ಕಾಯ್ದೆಯಿಂದ ಬಡ ಕುಟುಂಬಗಳಿಗೆ ಆಧಾರ : ಡಿಸಿ ಶಿಲ್ಪಾ ಶರ್ಮಾ
ಬೀದರ್ : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಡಳಿತಾವಧಿಯಲ್ಲಿ ಜಾರಿಗೆ ತಂದ ಉಳುವವನೇ ಭೂಮಿಯ ಒಡೆಯ ಕಾಯ್ದೆಯಿಂದ ಲಕ್ಷಾಂತರ ಬಡ ಕುಟುಂಬಗಳಿಗೆ ಆಧಾರವಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು.
ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಡಿ. ದೇವರಾಜ ಅರಸು ಅವರು ದೀನದಲಿತರ ಹಿಂದುಳಿದ ವರ್ಗಗಳ, ಬಡವರ ಪರವಾಗಿ ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ಇತಿಹಾಸದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ. ಅವರು ಇಂದಿನ ಯುವ ಪೀಳಿಗೆಗೆ ಪ್ರೇರಣಾ ಶಕ್ತಿಯಾಗಿದ್ದಾರೆ ಎಂದರು.
ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಮೂಲ ಸೌಕರ್ಯ ಒದಗಿಸಲು ಅವರು ಹೋರಾಡಿದಕ್ಕಾಗಿ ಇಂದಿನ ಹಿಂದುಳಿದ ವಿದ್ಯಾರ್ಥಿ ನಿಲಯಗಳಲ್ಲಿ ಸಕಲ ಸೌಲಭ್ಯ ಲಭ್ಯವಾಗುತ್ತಿವೆ. ಈ ವಸತಿ ನಿಲಯಗಳ ವಾತಾವರಣದಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿ ನಿಲಯದಲ್ಲಿ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಗುರಿ ಸಾಧಿಸಲು ಮುಂದಾಗಬೇಕು. ಸಮಸ್ಯೆಗಳು ಎದುರಿಸಿ ಗುರಿಯತ್ತ ಸಾಗಬೇಕು ಎಂದು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು.
ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್ ಅವರು ಮಾತನಾಡಿ, ಕರ್ನಾಟಕ ರಾಜ್ಯ ಕಂಡಂತ ಅಪರೂಪ ಮತ್ತು ಸಮಾಜಮುಖಿ ಆಡಳಿತ ನೀಡಿದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಕಲ್ಯಾಣ, ಸಾಮಾಜಿಕ ನ್ಯಾಯ ಹಾಗೂ ದೀನ ದಲಿತರ ಏಳಿಗೆಗಾಗಿ ಶ್ರಮಿಸಿದ್ದಾರೆ. ಸಮಾಜದ ಎಲ್ಲಾ ವರ್ಗಗಳ ನಡುವೆ ಸಮಾನತೆ ತಂದುಕೊಟ್ಟಿದ್ದಾರೆ ಎಂದು ಹೇಳಿದರು.
ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಅಪ್ಪುಗೆರೆ ಸೋಮಶೇಖರ್ ಅವರು ಉಪನ್ಯಾಸ ನೀಡಿ, ಹಿಂದುಳಿದ ವರ್ಗಗಳ ಹರಿಕಾರ ಎಂದೇ ಖ್ಯಾತರಾಗಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ್ ಅರಸ್ ಅವರ ಉಳುವವನಿಗೆ ಭೂಮಿ, ಹಾವನೂರು ಆಯೋಗದಂತಹ ಪ್ರಮುಖ ನಿರ್ಧಾರಗಳ ಪ್ರತಿಫಲ ಇಂದಿನ ಪೀಳಿಗೆಗೆ ಸಿಗುತ್ತಿದೆ. ಜೀತ ಪದ್ದತಿ ನಿರ್ಮೂಲನೆ ಕಾಯ್ದೆ ಜಾರಿಗೆ ತಂದು ಶೋಷಿತ ವರ್ಗಗಳನ್ನ ಉಳ್ಳವರ ಕೈಯಿಂದ ವಿಮೋಚನೆಗೊಳಿಸಿದರು ಎಂದು ನುಡಿದರು.
ಉಳುವವನೇ ಭೂಮಿ ಒಡೆಯ ಕಾನೂನಿನ ಅನಿಷ್ಠಾನದ ಮೂಲಕ ಗೇಣಿದಾದರರ ಹಿತ ರಕ್ಷಿಸಿದರು. ಶಿಕ್ಷಣ ಮತ್ತು ಉದ್ಯೋಗದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿಗಾಗಿ ಹಾವನೂರು ಆಯೋಗ ಜಾರಿಗೆ ತಂದು ಸಮಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದು, ಇಡೀ ದೇಶಕ್ಕೆ ಮಾದರಿಯಾಗಿದ್ದಾರೆ. ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯ ಎಂದು ಮರುನಾಮಕರಣ ಮಾಡಿ ಕನ್ನಡಿಗರ ಬಹುದಿನದ ಕನಸು ನನಸಾಗಿಸಿದರು. ಇಂದಿರಾ ಗಾಂಧಿ ಅವರ ಗರೀಬಿ ಹಠಾವೋ ಮತ್ತು 20 ಅಂಶಗಳ ಕಾರ್ಯಕ್ರಮಗಳು ಜಾರಿಗೆ ತರುವುದರ ಮೂಲಕ ಬಡವರ ಜೀವನಕ್ಕೆ ಆಶಾಕಿರಣರಾದರು. ವೃಕ್ಷ ಸಂರಕ್ಷಣಾ ಕಾಯ್ದೆ ತರುವುದರ ಮೂಲಕ ಪರಿಸರದ ರಕ್ಷಣೆ ಬಗ್ಗೆ ಅರಿವು ಮೂಡಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ್ ಕರಾಳೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಂಗೀತಾ ಬಿರಾದಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜೆ.ಎಂ ಕರಿಬಸಮ್ಮ, ಮುಖಂಡರಾದ ಅಶೋಕ್ ಶೇರಿಕರ್ ಹಾಗೂ ನೀಲಕಂಠ ಸೇರಿದಂತೆ ವಿದ್ಯಾರ್ಥಿಗಳು ಮತ್ತು ಅನೇಕ ಜನರು ಉಪಸ್ಥಿತರಿದ್ದರು.