ಚಾಮರಾಜನಗರ: ಯುವಕನ ಮೇಲೆ ಹುಲಿ ದಾಳಿ

Update: 2024-04-13 05:29 GMT

ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಗೆ ಹೊಂದಿಕೊಂಡಿರುವ ಹೊನ್ನೇಗೌಡನಹಳ್ಳಿ ಗ್ರಾಮದ ಶಂಬಪ್ಪ ಎಂಬ ರೈತನ ಜಮೀನಿನಲ್ಲಿ ಕಾಣಿಸಿಕೊಂಡ ಹುಲಿ ಯುವಕನ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಗಾಯಾಳು ಯುವಕನನ್ನು ಸ್ಥಳೀಯ ನಿವಾಸಿ ಮನು ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಕೆಲಸ ಮಾಡ್ತಿದ್ದ ಆತನ ಮೇಲೆ ಎರಗಿದ ಹುಲಿಯು ಕೈ ಮತ್ತು ಕುತ್ತಿಗೆಗೆ ಬಲವಾಗಿ ಗಾಯಗೊಳಿಸಿದೆ. ಜನರ ಕಿರುಚಾಟ ಕೇಳಿ ಮತ್ತೆ ಬಾಳೆತೋಟದಲ್ಲಿ ಮರೆಯಾದ ವ್ಯಾಘ್ರನ ಪತ್ತೆಗೆ ಡ್ರೋನ್ ಕ್ಯಾಮೆರಾ ಬಳಸಲಾಗಿದೆ. ಹುಲಿ ದಾಳಿಗೆ ತುತ್ತಾಗಿ ಗಾಯಗೊಂಡಿರುವ ಯುವಕನನ್ನ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯದ ಹೊನ್ನೇಗೌಡನಹಳ್ಳಿ ಗ್ರಾಮದ ರೈತರ ಜಮೀನಿನಲ್ಲಿ ಕಾಣಿಸಿಕೊಂಡ ಹುಲಿ ಆತಂಕ ಸೃಷ್ಟಿ ಮಾಡಿತ್ತು. ಹುಲಿಯನ್ನು ಕಂಡ ರೈತರು ಅರಣ್ಯ ಇಲಾಖೆಗೆ ಮಾಹಿತಿ ನೀಡುವ ವೇಳೆಗಾಗಲೇ ಒಂದು ಜಮೀನಿನಿಂದ ಮತ್ತೊಂದು ಜಮೀನಿಗೆ ಕಾಲ್ಕಿತ್ತಿತ್ತು.

 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News