ಹನೂರು | ಸಾರಿಗೆ ಬಸ್-ಬೈಕ್ ನಡುವೆ ಢಿಕ್ಕಿ: ಸವಾರರಿಬ್ಬರು ಮೃತ್ಯು
ಚಾಮರಾಜನಗರ : ಕೆಎಸ್ಆರ್ಟಿಸಿ ಬಸ್-ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟದ ತಾಳಬೆಟ್ಟದ ಬಳಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರಬೆಟ್ಟಕ್ಕೆ ಪಲ್ಸರ್ ಬೈಕ್ನಲ್ಲಿ ಬೆಂಗಳೂರಿನ ಪ್ರದೀಪ್ , ನೆಲಮಂಗಲದ ಭಾವೀಶ್ ತೆರಳುತ್ತಿದ್ದರು. ಈ ವೇಳೆ ತಾಳಬೆಟ್ಟ ಬಳಿ ಮಹದೇಶ್ವರಬೆಟ್ಟದಿಂದ ಬರುತ್ತಿದ್ದ ಕೆಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ನ ಹಿಂಬದಿ ಕುಳಿತಿದ್ದ ಪ್ರದೀಪ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ತೀವ್ರ ರಕ್ತಸ್ರಾವವಾಗಿದ್ದ ಭಾವೀಶ್ ಎಂಬಾತನನ್ನು ಆಂಬ್ಯುಲೆನ್ಸ್ನಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಈ ಸಂಬಂಧ ಚಾಮರಾಜನಗರ ಜಿಲ್ಲೆಯ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.