ಹನೂರು ಶೂಟೌಟ್ ಪ್ರಕರಣ; ಪೊಲೀಸ್ ಠಾಣೆ ಎದುರು ಮುಂದುವರಿದ ಪ್ರತಿಭಟನೆ
ಹನೂರು: ತಾಲೂಕಿನ ಶಾಗ್ಯ ಗ್ರಾಮದ ಸಮೀಪದ ಮರಿಮಂಗಲ ಬೀಟ್ನಲ್ಲಿ ಶನಿವಾರ ಮುಂಜಾನೆ ನಡೆದ ಗುಂಡಿನ ದಾಳಿಯಲ್ಲಿ ತೊಮಿಯರ್ ಪಾಳ್ಯದ ಮೂವರು ಮೃತಪಟ್ಟಿರುವ ಘಟನೆ ಬೆನ್ನಲ್ಲೇ ಮೃತರ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹನೂರು ಪೊಲೀಸ್ ಠಾಣೆ ಎದುರು ನೆಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ.
ಈ ವೇಳೆ ಶನಿವಾರ ರಾತ್ರಿ ಬಿಜೆಪಿ ಜಿಲ್ಲಾ ಒಬಿಸಿ ಘಟಕದ ಜಿಲ್ಲಾಧ್ಯಕ್ಷ ವೆಂಕಟೇಶ್ ಅವರು ಧರಣಿ ನಿರತರ ಜೊತೆ ರಸ್ತೆಯಲ್ಲಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು. ಈ ಘಟನೆಗೆ ಕಾರಣರಾದವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಮೃತರ ಕುಟುಂಬಗಳ ನೋವಿಗೆ ಸರ್ಕಾರ ಸ್ಪಂದಿಸಬೇಕು. ಅವರ ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಅವರು ಆಗ್ರಹಿಸಿದರು.
ಬೇಡಿಕೆ ಈಡೇರದಿದ್ದರೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನೇತೃತ್ವದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ವೆಂಕಟೇಶ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ರವಿವಾರ ಬೆಳಗ್ಗೆಯಿಂದಲೇ ಸಾರ್ವಜನಿಕರು ಪ್ರತಿಭಟನೆ ಮುಂದುವರೆಸಲು ಮುಂದಾಗಿದ್ದು, ಹನೂರು ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅರಣ್ಯಾಧಿಕಾರಿಗಳ ಕಛೇರಿಗೂ ಪೊಲೀಸ್ ಸರ್ಪಗಾವಲನ್ನು ಮುಂದುವರೆಸಲಾಗಿದೆ.
ಇಷ್ಟೆಲ್ಲಾ ಆದರೂ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಆಗಮಿಸಲಿಲ್ಲ ಎನ್ನಲಾಗುತ್ತಿದೆ.