Chikkaballapur | ಇಬ್ಬರು ಮಹಿಳೆಯರ ಹತ್ಯೆ: ಆರೋಪಿ ಶರಣಾಗತಿ
ಹತ್ಯೆಯಾದ ಮಹಿಳೆಯರು/ಆರೋಪಿ
ಚಿಕ್ಕಬಳ್ಳಾಪುರ : ಜಿಲ್ಲೆಯ ಚಿಂತಾಮಣಿ ನಗರದ ಜೆಜೆ ಕಾಲನಿಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ನಾದಿನಿಯನ್ನು ಹತ್ಯೆ ಮಾಡಿರುವ ಘಟನೆ ಸೋಮವಾರ ಮುಂಜಾನೆ ವರದಿಯಾಗಿದೆ.
ಏಜಾಝ್ (30) ಕೊಲೆ ಆರೋಪಿಯಾಗಿದ್ದು, ಪತ್ನಿ ಶಮಾ (25) ಹಾಗೂ ಆಕೆಯ ತಂಗಿ ರೇಷ್ಮಾ(18) ಮೃತಪಟ್ಟಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಶಂಕೆ ವ್ಯಕ್ತವಾಗಿದೆ.
ಕೆಲವು ತಿಂಗಳುಗಳಿಂದ ದಂಪತಿಯ ನಡುವೆ ಕೌಟುಂಬಿಕ ಕಲಹ ನಡೆಯುತ್ತಿತ್ತು. ರವಿವಾರ ರಾತ್ರಿ ಪತ್ನಿಯ ಮನೆಗೆ ಬಂದಿದ್ದ ಏಜಾಝ್ನೊಂದಿಗೆ ಮತ್ತೆ ಜಗಳವಾಗಿದೆ ಎನ್ನಲಾಗಿದೆ. ಸೋಮವಾರ ಮುಂಜಾನೆ ಅದು ವಿಕೋಪಕ್ಕೆ ತಿರುಗಿದ ವೇಳೆ ಇಬ್ಬರ ಮೇಲೂ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.
ಘಟನೆಯ ಬಳಿಕ ಆರೋಪಿ ತನ್ನ ಮೂವರು ಮಕ್ಕಳನ್ನು ಕರೆದುಕೊಂಡು ಕೋಲಾರಕ್ಕೆ ತೆರಳಿ, ಮಕ್ಕಳನ್ನು ಮನೆಯಲ್ಲಿ ಬಿಟ್ಟು ಗಲ್ಪೇಟೆ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಸಹಿತ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.