ಶೃಂಗೇರಿ : ಅಂಚೆ ಮತ ಮರು ಎಣಿಕೆ ಪ್ರಕರಣ; ವಿಚಾರಣೆ ಜುಲೈ 30ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್
ಟಿ.ಡಿ. ರಾಜೇಗೌಡ (ಒಳಚಿತ್ರದಲ್ಲಿ)
ಚಿಕ್ಕಮಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಯಥಾಸ್ಥಿತಿ ಮುಂದುವರಿಸಲು ಸೂಚನೆ ನೀಡಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಜುಲೈ 30ಕ್ಕೆ ಮುಂದೂಡಿಕೆ ಮಾಡಿದೆ.
2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಒಟ್ಟು 1,811 ಅಂಚೆ ಮತಗಳು ಚಲಾವಣೆಯಾಗಿದ್ದವು. ಅದರಲ್ಲಿ 279 ಮತಗಳನ್ನು ತಿರಸ್ಕರಿಸಲಾಗಿತ್ತು. ಅಂತಿಮ ಫಲಿತಾಂಶದಲ್ಲಿ ಟಿ.ಡಿ. ರಾಜೇಗೌಡ ಅವರು 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಈ ಫಲಿತಾಂಶವನ್ನು ಪ್ರಶ್ನಿಸಿದ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಪ್ರಿಲ್ 6ರಂದು ಮಹತ್ವದ ಆದೇಶ ನೀಡಿ, ತಿರಸ್ಕೃತಗೊಂಡ 279 ಅಂಚೆ ಮತಗಳನ್ನು ಮರು ಪರಿಶೀಲನೆ ಮಾಡಿ, ಬಳಿಕ ಎಲ್ಲಾ ಅಂಚೆ ಮತಗಳನ್ನು ಮರು ಎಣಿಕೆ ಮಾಡಿ ಹೊಸ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿತ್ತು.
ಇದರ ಬೆನ್ನಲ್ಲೇ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ಆಕ್ಷೇಪಣೆ ಸಲ್ಲಿಸಲು ಎರಡು ವಾರಗಳ ಕಾಲಾವಕಾಶ ನೀಡಲಾಗಿತ್ತು. ಏಪ್ರಿಲ್ 20ರಂದು ಆ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಮರು ಮತ ಎಣಿಕೆ ಪ್ರಕ್ರಿಯೆಗೆ ಮುಂದಾಗಿದ್ದರು. ಆ ಬಳಿಕ ಅಂಚೆ ಮತಗಳ ಮರು ಎಣಿಕೆ ನಡೆದು, ಅದರಲ್ಲಿ 52 ಮತಗಳಿಂದ ಡಿ.ಎನ್. ಜೀವರಾಜ್ ಜಯಗಳಿಸಿದ್ದರು. ಆದಾದ ಬಳಿಕ ಪ್ರಮಾಣ ವಚನ ಕೂಡ ಸ್ವೀಕರಿಸಿದ್ದರು. ನಂತರ ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆಯಲ್ಲಿ ಟಿ.ಡಿ. ರಾಜೇಗೌಡರ ಶಾಸಕತ್ವವನ್ನು ತಾತ್ಕಾಲಿಕವಾಗಿ ಪುನಃ ಸ್ಥಾಪಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ಬಳಿಕ ಮುಂದಿನ ವಿಚಾರಣೆಯನ್ನು ಜುಲೈ 23ಕ್ಕೆ (ಇವತ್ತಿಗೆ) ಕಾಯ್ದಿರಿಸಿತ್ತು. ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮತ್ತೆ ಜುಲೈ 30ಕ್ಕೆ ಮುಂದೂಡಿಕೆ ಮಾಡಿದೆ.