ಚಿಕ್ಕಮಗಳೂರು : ಮೀಲಾದುನ್ನಬಿ ವೇಳೆ ಟಿಪ್ಪು ಸುಲ್ತಾನ್ ಬೃಹತ್ ಕಟೌಟ್ ವಿಡಿಯೋಗೆ ಪಾಕಿಸ್ತಾನ ಬೆಂಬಲಿತ ಹಾಡು ಜೋಡಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪಿಗಳ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸೋಮವಾರ ರಾಷ್ಟ್ರ ಸುರಕ್ಷಾ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬಸವನಹಳ್ಳಿ ಮುಖ್ಯರಸ್ತೆಯಿಂದ ಮೆರವಣಿಗೆ ಆರಂಭಿಸಿದ ಪ್ರತಿಭಟನಕಾರರು ಹನುಮಂತಪ್ಪ ವೃತ್ತ, ಎಂ.ಜಿ.ರಸ್ತೆ ಮೂಲಕ ಆಜಾದ್‍ಪಾರ್ಕ್ ವೃತ್ತ ತಲುಪಿದರು.

ನಗರದ ಓಂಕಾರೇಶ್ವರ ದೇವಸ್ಥಾನ ಬಳಿ ನಡೆದ ಬಹಿರಂಗ ಸಭೆಯಲ್ಲಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ದೇಶದ ಜನರಲ್ಲಿ ರಾಷ್ಟ್ರದ ಸುರಕ್ಷತೆ ಮತ್ತು ರಾಷ್ಟ್ರೀಯ ಏಕತೆ ಭಾವನೆ ಬಲಪಡಿಸಬೇಕಿದೆ. ಈ ಹಿನ್ನೆಲೆಯಲ್ಲಿ ವೈಯಕ್ತಿಕ ಮತ್ತು ರಾಜಕೀಯ ಭಿನ್ನಾಭಿಪ್ರಾಯ ಬದಿಗಿಟ್ಟು ಎಲ್ಲರೂ ಒಂದಾಗಬೇಕು ಎಂದು ಹೇಳಿದರು.

ದಕ್ಷಿಣ ಭಾರತದಿಂದ ಹೊರಹೊಮ್ಮುವ ರಾಷ್ಟ್ರೀಯ ಏಕತೆ ಸಂದೇಶ ಇಡೀ ದೇಶವನ್ನು ತಲುಪಬೇಕು. ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸುವ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಸಮಾನ ಅವಕಾಶ ಕಲ್ಪಿಸುವ ಪ್ರಯತ್ನ ನಡೆಯಬೇಕು. ಮುಸ್ಲಿಂ ಸಮುದಾಯವನ್ನು ಮತಬ್ಯಾಂಕ್‍ಗಾಗಿ ನೋಡಬಾರದು, ಯಾವುದೇ ಸಮುದಾಯದ ಸಾಮಾಜಿಕ ಸಮಸ್ಯೆಗಳನ್ನು ರಾಜಕೀಯ ಕಾರಣಗಳಿಂದ ಕಡೆಗಣಿಸಬಾರದು. ಕಾನೂನುಬದ್ಧ ಮತ್ತು ಪ್ರಜಾಸತಾತ್ಮಕವಾಗಿ ಪರಿಹಾರ ಕಂಡುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ರಾಷ್ಟ್ರ ಸುರಕ್ಷಾ ಸಮಿತಿ ಮುಖಂಡರಾದ ಆರ್.ಡಿ.ಮಹೇಂದ್ರ, ಸಂತೋಷ್ ಕೋಟ್ಯಾನ್, ಶ್ಯಾಮ್, ಸಚಿನ್, ರಂಜಿತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಬಿಜೆಪಿ ಮುಖಂಡರಾದ ದೀಪಕ್ ದೊಡ್ಡಯ್ಯ, ಎಂ.ಆರ್.ದೇವರಾಜ್ ಶೆಟ್ಟಿ, ಪುಷ್ಪರಾಜ್ ಜಯರಾಮ್ ಸೇರಿದಂತೆ ಇತರರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor