×
Ad

ವಸತಿ ಶಾಲೆ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ : ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಕೊಪ್ಪದಲ್ಲಿ ಧರಣಿ

Update: 2025-07-07 23:31 IST

ಚಿಕ್ಕಮಗಳೂರು : ಕೊಪ್ಪ ಪಟ್ಟಣದ ವಸತಿ ಶಾಲೆಯಲ್ಲಿ ಇತ್ತೀಚೆಗೆ ನಡೆದ 6ನೇ ತರಗತಿ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಹಾಗೂ ವಸತಿ ಶಾಲೆಯ ಪ್ರಾಂಶುಪಾಲರು, ಸಿಬ್ಬಂದಿ, ಶಿಕ್ಷಕರನ್ನು ಕೂಡಲೇ ಅಮಾನತು ಮಾಡಬೇಕೆಂದು ಆಗ್ರಹಿಸಿ ಸೋಮವಾರ ವಿವಿಧ ಪ್ರಗತಿಪರ, ಕನ್ನಡ, ದಲಿತ, ಆದಿವಾಸಿ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಸಾರ್ವಜನಿಕರು, ವಸತಿ ಶಾಲೆಯ ಪೋಷಕರು ಪಟ್ಟಣದಲ್ಲಿ ಬೃಹತ್ ಧರಣಿ ನಡೆಸಿದರು.

ಪಟ್ಟಣ ಟೌನ್‌ಹಾಲ್‌ನಿಂದ ಬಸ್ ನಿಲ್ದಾಣದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಮುಖಂಡರು, ಸಾರ್ವಜನಿಕರು ಕೊಪ್ಪ ಬಾಳಗಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿದ್ದರೂ ಸಂಬಂಧಿಸಿದ ಜನಪ್ರತಿನಿಧಿಗಳು, ಅಧಿಕಾರಿಗಳು, ಸರಕಾರ ಮೌನಕ್ಕೆ ಶರಣಾಗಿದೆ ಎಂದು ಆರೋಪಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಈ ವೇಳೆ ಮಾತನಾಡಿದ ವಿವಿಧ ಸಂಘಟನೆಗಳ ಮುಖಂಡರು, ಮೊರಾರ್ಜಿ ದೇಸಾಯಿ ವಸತಿ ಶಾಲೆ ಈ ಭಾಗದ ಬಡ ಮಕ್ಕಳ ಶಿಕ್ಷಣಕ್ಕೆ ಪೂರಕವಾಗಿದೆ. ಆದರೆ, ಸಂಬಂಧಿಸಿದ ಇಲಾಖಾಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಈ ವಸತಿ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ಈ ವಸತಿ ಶಾಲೆಯಲ್ಲಿ ಹೆಣ್ಣು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದರೂ ಪುರುಷ ಪ್ರಾಂಶುಪಾಲರು, ಸಿಬ್ಬಂದಿ, ಶಿಕ್ಷಕರನ್ನು ನೇಮಿಸಲಾಗಿದೆ. ಈ ವಸತಿ ಶಾಲೆಯಲ್ಲಿನ ಸಿಬ್ಬಂದಿ ಸರಿಯಾಗಿ ಕೆಲಸ ಮಾಡದ ಪರಿಣಾಮ ಬಡ ಮಕ್ಕಳಿಗೆ ಸುರಕ್ಷತೆ, ಭದ್ರತೆ ಇಲ್ಲದಂತಾಗಿದೆ ಎಂದು ಆರೋಪಿಸಿದರು.

2023ರಲ್ಲಿ ಇದೇ ವಸತಿ ಶಾಲೆಯಲ್ಲಿ ಅಮೂಲ್ಯಾ ಎಂಬ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಘಟನೆ ಬಳಿಕ ಪ್ರತಿಭಟನೆ ನಡೆಸಿದ ನಂತರ ಕೊಂಚ ಶಾಲೆಯಲ್ಲಿ ಸುಧಾರಣೆಯಾಗಿತ್ತು. ಆದರೆ, ಮತ್ತೆ ಇಂತಹ ಘಟನೆ ಮರುಕಳಿಸಿದೆ. ಜೂ.28ರಂದು ಕೊಪ್ಪ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆಗೆ ವಸತಿ ಶಾಲೆಯಲ್ಲಿನ ಅವ್ಯವಸ್ಥೆ ಮತ್ತು ಇದನ್ನು ಸರಿಪಡಿಸದ ಶಾಲೆಯ ಪ್ರಾಂಶುಪಾಲರೇ ನೇರ ಹೊಣೆಯಾಗಿದ್ದಾರೆ. ಈ ಪ್ರಾಂಶುಪಾಲರು ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ಆಡಳಿತ ನಡೆಸುತ್ತಿದ್ದಾರೆ. ಪೋಷಕರ ಸಭೆ ನಡೆಸದೆ ಮನಬಂದಂತೆ ಶಾಲೆ ನಡೆಸುತ್ತಿದ್ದಾರೆ ಎಂದು ದೂರಿದರು.

ವಸತಿ ಶಾಲೆಯಲ್ಲಿ ಶಿಕ್ಷಕರು ಹೇಗೆ ಪಾಠ ಮಾಡುತ್ತಿದ್ದಾರೆ?, ಸಿಬ್ಬಂದಿ ಹೇಗೆ ಕೆಲಸ ಮಾಡುತ್ತಿದ್ದಾರೆ? ಎಂಬುದು ಯಾರಿಗೂ ತಿಳಿಯುತ್ತಿಲ್ಲ. ಮಕ್ಕಳ ಪೋಷಕರನ್ನೂ ವಸತಿ ಶಾಲೆ, ಹಾಸ್ಟೆಲ್ ಒಳಗೆ ಬಿಡದೆ ವಸತಿ ಶಾಲೆಯಲ್ಲಿ ಏನು ನಡೆಯುತ್ತಿದೆ ಎಂಬುದು ಹೊರ ಜಗತ್ತಿಗೆ ತಿಳಿಯದಂತಾಗಿದೆ ಎಂದು ಆರೋಪಿಸಿದ ಮುಖಂಡರು, ವಸತಿ ಶಾಲೆಯಲ್ಲಿ ಸಿಸಿ ಕ್ಯಾಮರಾ ಕೆಟ್ಟು ಹಲವಾರು ದಿನಗಳು ಕಳೆದಿದ್ದರೂ ಇದುವರೆಗೂ ಸರಿಪಡಿಸಿಲ್ಲ. ಈ ವಸತಿ ಶಾಲೆಯಿಂದ ವರ್ಗಾವಣೆಗೊಂಡಿದ್ದ ಪ್ರಾಂಶುಪಾಲರನ್ನು ಮತ್ತೆ ಇದೇ ವಸತಿ ಶಾಲೆಗೆ ಕರೆಸಿಕೊಂಡಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿನಿಗೆ ಕೆಲ ಸಿಬ್ಬಂದಿ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿ ಬಂದಿದೆ. ಇದರಿಂದ ನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ವಸತಿ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು ಹಾಗೂ ಎಲ್ಲ ಸಿಬ್ಬಂದಿಯನ್ನು ಕೂಡಲೇ ಅಮಾನತು ಮಾಡಬೇಕು. ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಕೊಪ್ಪ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಎಲ್ಲ ವಸತಿ ಶಾಲೆಗಳಲ್ಲಿರುವ ಅವ್ಯವಸ್ಥೆಯನ್ನು ಕೂಡಲೇ ಸರಿಪಡಿಸಬೇಕು. ಹೆಣ್ಣು ಮಕ್ಕಳೇ ವ್ಯಾಸಂಗ ಮಾಡುತ್ತಿರುವ ವಸತಿ ಶಾಲೆಗೆ ಮಹಿಳಾ ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿಯನ್ನೇ ನೇಮಿಸಬೇಕು. ತಾಲೂಕಿನಲ್ಲಿ ಮೇಗುಂದಾ ಹೋಬಳಿಯಲ್ಲಿ ಅಂಬೇಡ್ಕರ್ ವಸತಿ ಶಾಲೆ ಮಂಜೂರಾಗಿದ್ದು, ಶೀಘ್ರ ಕಟ್ಟಡದ ಕಾಮಗಾರಿ ನಡೆಸಿ ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಸರಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ವೇಳೆ ಸ್ಥಳಕ್ಕೆ ಬಂದ ಶಾಸಕ ರಾಜೇಗೌಡ ಅವರಿಗೆ ಮುಖಂಡರು ಮನವಿ ಸಲ್ಲಿಸಿದರು.

ಧರಣಿಯಲ್ಲಿ ಜನಶಕ್ತಿ ವೇದಿಕೆ ರಾಜ್ಯ ಸಂಚಾಲಕ ಕೆ.ಎಲ್.ಅಶೋಕ್, ಕೆ.ಜೆ.ಸುರೇಶ್, ವಕೀಲ ಸುಧೀರ್‌ಕುಮಾರ್ ಮುರೋಳಿ, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜಿತ್, ಅನಂತ್, ಸುದೀಪ್, ವಿಜಯೇಂದ್ರ, ಜೀವಿತ್, ಪ್ರದೀಪ್, ಶ್ರಮಿಕ ಶಕ್ತಿ ಸಂಘಟನೆಯ ಸರೋಜಾ, ಮಹಿಳಾ ಮುನ್ನಡೆ ಸಂಘಟನೆಯ ರಾಧಾ ಹಾಗಲಗಂಚಿ, ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಮಂಜುನಾಥ್, ದಸಂಸ ತಾಲೂಕು ಅಧ್ಯಕ್ಷ ಆನಂದ್, ಕರವೇ ತಾಲೂಕು ಅಧ್ಯಕ್ಷೆ ಸುಧಾ, ಆನಂದ್, ಕರವೇ ಸುಧಾ ಹಾಗೂ ಶಮಿತಾ ಸಂಬಂಧಿಕರು ಭಾಗವಹಿಸಿದ್ದರು.

ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಸಂಬಂಧ ಕೂಡಲೇ ನಿವೃತ್ತ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕು. ವಸತಿ ಶಾಲೆಯ ಪ್ರಾಂಶುಪಾಲರೂ ಸೇರಿದಂತೆ ಎಲ್ಲ ಸಿಬ್ಬಂದಿಯನ್ನು ಕೂಡಲೇ ಅಮಾನತು ಮಾಡಬೇಕು. ಬಾಲಕಿಯನ್ನು ಕಳೆದುಕೊಂಡ ಪೋಷಕರಿಗೆ ಸೂಕ್ತ ಪರಿಹಾರ ನೀಡಬೇಕು. ಇಂತಹ ಘಟನೆಗಳು ಕೊಪ್ಪ ತಾಲೂಕು ಸೇರಿದಂತೆ ಯಾವುದೇ ವಸತಿ ಶಾಲೆಯಲ್ಲಿ ಮುಂದೆಂದೂ ನಡೆಯದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲ ವಸತಿ ಶಾಲೆಯಲ್ಲಿನ ಅವ್ಯವಸ್ಥೆಗಳನ್ನು ಕೂಡಲೇ ಸರಿಪಡಿಸಬೇಕು.

ಕೆ.ಎಲ್.ಅಶೋಕ್, ಜನಶಕ್ತಿ ವೇದಿಕೆ ರಾಜ್ಯ ಸಂಚಾಲಕ

ವಸತಿ ಶಾಲೆಯಲ್ಲಿ ನಡೆದ ಬಾಲಕಿ ಆತ್ಮಹತ್ಯೆ ಪ್ರಕರಣ ದುರದೃಷ್ಟಕರ ಸಂಗತಿ. ಬಾಲಕಿ ಸಾವಿಗೆ ಕಾರಣ ಏನೆಂದು ತಿಳಿಯಲು ತನಿಖೆ ಅತ್ಯಗತ್ಯ. ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬಾಲಕಿ ಸಾವಿಗೆ ಕಾರಣ ಏನೆಂದು ತಿಳಿಯದೆ ಯಾವುದೇ ನಿರ್ಧಾರ ತಳೆಯಲು ಸಾಧ್ಯವಿಲ್ಲ. ತನಿಖೆ ಬಳಿಕ ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸದೇ ಬಿಡುವುದಿಲ್ಲ. ವಸತಿ ಶಾಲೆಯಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಎಸಿ, ಡಿವೈಎಸ್ಪಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಶೀಘ್ರ ಕ್ರಮ ಕೈಗೊಳ್ಳಲು ಈಗಾಗಲೇ ಸೂಚಿಸಲಾಗಿದೆ. ಅಂಬೇಡ್ಕರ್ ವಸತಿ ಶಾಲೆ ತಾಲೂಕಿಗೆ ಮಂಜೂರಾಗಿದ್ದು, ಜಾಗದ ಸಮಸ್ಯೆಯಿಂದಾಗಿ ಕಾಮಗಾರಿ ವಿಳಂಬವಾಗಿದೆ. ಕೂಡಲೇ ಕಾವಗಾರಿ ನಡೆಸಲು ಆದ್ಯತೆ ನೀಡಲಾಗುವುದು. ಮನವಿಯಲ್ಲಿನ ಎಲ್ಲ ಬೇಡಿಕೆಗಳನ್ನು ಕೂಡಲೇ ಈಡೇರಿಸಲಾಗುವುದು.

ಟಿ.ಡಿ.ರಾಜೇಗೌಡ, ಶಾಸಕ


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News