×
Ad

2024-25ನೇ ಸಾಲಿನ ಬಾಕಿ ಉಳಿದಿರುವ 291.92 ಕೋಟಿ ರೂ. ಬೆಳೆ ವಿಮೆ ಪರಿಹಾರ ಬಿಡುಗಡೆ: ಪ್ರಿಯಾಂಕ್ ಖರ್ಗೆ

Update: 2025-09-10 16:30 IST

ಪ್ರಿಯಾಂಕ್ ಖರ್ಗೆ

ಕಲಬುರಗಿ: 2024-25 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ 656.62 ಕೋಟಿ ರೂ. ಪರಿಹಾರ ಬಿಡುಗಡೆಯಾಗಿದ್ದು, ಅದರಲ್ಲಿ ಮೊದಲ ಕಂತಿನ ಪರಿಹಾರವಾಗಿ 364.70 ಕೋಟಿ ರೂ. ಈಗಾಗಲೇ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಿದೆ. ಬಾಕಿ ಉಳಿದಿದ್ದ 291.92 ಕೋಟಿ ರೂ. ಆರ್ಥಿಕ‌ ಇಲಾಖೆಯಿಂದ ಬಿಡುಗಡೆಯಾಗಿದ್ದು, ಮುಂದಿನ‌ ವಾರ ಬೆಳೆವಿಮೆ ಪರಿಹಾರ ರೈತರ ಬ್ಯಾಂಕ್ ಖಾತೆಗೆ ಜಮಾವಣೆಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ‌ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮದ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಯೋಜನೆಯಡಿ ತೊಗರಿ, ಹೆಸರು, ಉದ್ದು, ಹತ್ತಿ, ಸೋಯಾ, ಅವರೆ ಹಾಗೂ ಇತರೆ ಬೆಳೆಗಳಿಗೆ ಜಿಲ್ಲೆಯಲ್ಲಿ ಒಟ್ಟು 2.04 ಲಕ್ಷ ರೈತರು ಬೆಳೆ ವಿಮೆ ನೋಂದಣಿ ಮಾಡಿಸಿದ್ದಾರೆ. ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಶ್ರಮ ಹಾಗೂ ಸರ್ಕಾರದ ಕಾಳಜಿಯಿಂದಾಗಿ ರೈತರು ವಿಮೆ ಮಾಡಿಸಿದ್ದಾರೆ ಎಂದರು.

ಬೆಳೆ ವಿಮೆ ಮಾಡಿಸಿದ 2.04 ಲಕ್ಷ ರೈತರಿಗೆ ಒಟ್ಟು 656.62 ಕೋಟಿ ರೂ. ಬೆಳೆ ವಿಮೆ ಮಂಜೂರಾಗಿದ್ದು, ಇದರಲ್ಲಿ ಮೊದಲನೆಯ ಕಂತು ಒಟ್ಟು 364.70 ಕೋಟಿ ರೂ. ಈಗಾಗಲೇ ರೈತರ ಬ್ಯಾಂಕ್‌ ಖಾತೆಗೆ ನೇರ ನಗದು ವರ್ಗಾವಣೆ (DBT) ಮೂಲಕ ವರ್ಗಾವಣೆ ಮಾಡಲಾಗಿರುತ್ತದೆ. ಬಾಕಿ ಉಳಿದ 291.92 ಕೋಟಿ ರೂ. ವಿಮೆ ಪರಿಹಾರ ಇದೀಗ ಬಿಡುಗಡೆಯಾಗಿದ್ದು, ಮುಂದಿನ‌ ವಾರ ರೈತರ ಬ್ಯಾಂಕ್ ಖಾತೆಗೆ ಜಮೆ ಆಗಲಿದೆ ಎಂದರು.

ಯಾದಗಿರಿ, ಶಿವಮೊಗ್ಗ ಜಿಲ್ಲೆ ಸೇರಿದಂತೆ ಬೇರೆ ಜಿಲ್ಲೆಗಳಿಗೆ ಬೆಳೆ ವಿಮೆ‌ಪರಿಹಾರ ಸಿಕ್ಕಿಲ್ಲ. ಆದರೆ ಕಲಬುರಗಿ ಜಿಲ್ಲೆಗೆ 656 ಕೋಟಿ ರೂ. ಪರಿಹಾರ ಸಿಕ್ಕಿದೆ ಎಂದ ಸಚಿವರು, ಬೆಳೆ ವಿಮೆ ಮಾಡಿಸದ ರೈತರಿಗೂ ಕೂಡಾ ಪರಿಹಾರ ದೊರಕಿಸಿಕೊಡಲು ಪ್ರಸ್ತಾಪ ಮಾಡಲಾಗಿದೆ ಎಂದರು.

1.05 ಲಕ್ಷ ಹೆಕ್ಟೇರ್ ಬೆಳೆ ಹಾನಿ :

ಇತ್ತೀಚಿಗೆ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ 1.05 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ‌ ಹಾನಿಯಾಗಿದೆ. ತೊಗರಿ, ಉದ್ದು, ಹತ್ತಿ, ಬಾಳೆ ಸೇರಿದಂತೆ ಇತರೆ ಬೆಳೆ ಹಾನಿಯಾಗಿರುವುದು ಪ್ರಾಥಮಿಕ ಸಮೀಕ್ಷೆಯಲ್ಲಿ ಗೊತ್ತಾಗಿದೆ. ಹೋಬಳಿವಾರು ಸಮೀಕ್ಷೆ ನಡೆಸುವಂತೆ ನಿರ್ದೇಶನ ನೀಡಲಾಗಿದೆ. ಇನ್ನೂ ಹತ್ತು ದಿನದಲ್ಲಿ ತಾಲೂಕು, ಹೋಬಳಿ ಮಟ್ಟದಲ್ಲಿ ಸರಿಯಾದ ಮಾಹಿತಿ ಪಡೆದು ನಂತರ ಕಂದಾಯ ಇಲಾಖೆಯಿಂದ ಪರಿಹಾರ ಪೋರ್ಟಲ್‌ನಲ್ಲಿ ದಾಖಲು ಮಾಡಲಾಗುವುದು. ಹಾಗಾಗಿ ರೈತರು ಬೆಳೆ ಹಾನಿ ಬಗ್ಗೆ ಮಾಹಿತಿ ನೀಡುವಂತೆ ಸಚಿವರು ಕೋರಿದರು.

ಕೇಂದ್ರದಲ್ಲಿ ಎನ್ ಡಿ ಎ ಪಕ್ಷ ಅಧಿಕಾರಕ್ಕೆ ಬಂದ ನಂತರ‌ ಎನ್ ಡಿ ಆರ್ ಎಫ್ ನಿಯಮಾವಳಿಗಳ ಬಗ್ಗೆ ಬದಲಾವಣೆ ಮಾಡಲಾಗಿದೆ. ನೆರೆ ಪರಿಹಾರಕ್ಕೂ ಕೂಡಾ ಈಗ ಅದೇ ನಿಯಮಾವಳಿಗಳನ್ನು ಅನ್ವಯ ಮಾಡಲಾಗುತ್ತಿದೆ ಎಂದು ದೂರಿದರು.

ಜಿಲ್ಲೆಯಲ್ಲಿ ಭಾರೀ ಮಳೆ ಸುರಿದಿದೆ ಕೃಷಿ‌ ಸಚಿವರು ಬಂದಿಲ್ಲ, ನೀವೂ ಕೂಡಾ ಭೇಟಿ ನೀಡಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ತಾವು ಸರ್ಕಾರದ‌ ಮೇಲೆ ಹಾಗೂ ಖಾಸಗಿ ಕೆಲಸದ ಮೇಲೆ ವಿದೇಶಕ್ಕೆ ಹೋಗಿದ್ದು, ಅಲ್ಲಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ ಸೂಚನೆ ನೀಡಿದ್ದೇನೆ. ಕೃಷಿ ಸಚಿವರೂ ಕೂಡಾ ಜಿಲ್ಲೆಗೆ ಈ ಹಿಂದೆ ಬಂದು ಹೋಗಿದ್ದಾರೆ ಎಂದರು.

ಕಲ್ಯಾಣ ಕರ್ನಾಟಕ ಉತ್ಸವ ಉದ್ಘಾಟನೆಗೆ ಸೆ.17 ರಂದು ಸಿಎಂ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ. ಸೆ. 16 ರಂದೇ ಸಂಜೆ ಸಿಎಂ ಕಲಬುರಗಿಗೆ ಆಗಮಿಸಲಿದ್ದಾರೆ. ಧ್ವಜಾರೋಹಣ ನಂತರ ಸಮಾಜದ ಕಡೆಯಿಂದ ಖಾಸಗಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಯ ಬೇಡಿಕೆ‌ ಪರಿಶೀಲನೆ ಹಂತದಲ್ಲಿದೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕೆಕೆಆರ್ ಡಿಬಿ ಅಧ್ಯಕ್ಷ ಹಾಗೂ ಶಾಸಕ ಡಾ.ಅಜಯ್ ಸಿಂಗ್, ಕುಡಾ ಅಧ್ಯಕ್ಷ ಮಜರ್ ಅಲಂ‌ಖಾನ್, ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್, ಕೆಕೆಆರ್ ಡಿಬಿ ಕಾರ್ಯದರ್ಶಿ ನಳಿನ್ ಅತುಲ್, ಕಮಿಷನರ್ ಡಾ.ಶರಣಪ್ಪ ಢಗೆ, ಎಸ್ ಪಿ ಅಡ್ಡೂರು ಶ್ರೀನಿವಾಸಲು, ಎಸಿಡಿ ರಾಯಪ್ಪ ಹುಣಸಗಿ ಸೇರಿದಂತೆ ಹಲವರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News