ಕೆ.ಎಂ.ಶಿವಲಿಂಗೇಗೌಡ

ಮಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಪ್ರಜಾಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಇದೇ ಮೊದಲ ಬಾರಿಗೆ ನಡೆಯುತ್ತಿರುವುದು ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿದೆ ಎಂದು ಅಬಕಾರಿ ಸಚಿವ ಕೆ.ಎಂ.ಶಿವಲಿಂಗೇಗೌಡ ತಿಳಿಸಿದ್ದಾರೆ.

ಕರಾವಳಿ ಹಾಗೂ ಮಲೆನಾಡು ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗೆ ಸಮಗ್ರ ಕರಾವಳಿ–ಮಲೆನಾಡು ಪ್ರವಾಸೋದ್ಯಮ ನೀತಿ–2026 ರೂಪಿಸಲಾಗುತ್ತಿದೆ. ಮಂಗಳೂರು ರಾಜ್ಯದ ಪ್ರಮುಖ ಅಭಿವೃದ್ಧಿ ಕೇಂದ್ರವಾಗಿ ಹೊರಹೊಮ್ಮುವ ಸಾಮರ್ಥ್ಯ ಹೊಂದಿದ್ದು, ವಿಮಾನ, ರಸ್ತೆ, ರೈಲು ಹಾಗೂ ಸಮುದ್ರ ಸಂಪರ್ಕ, ಬಂದರು, ವಿಶ್ವವಿದ್ಯಾಲಯ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳ ಬಲಿಷ್ಠ ಮೂಲಸೌಕರ್ಯವನ್ನು ಇನ್ನಷ್ಟು ವಿಸ್ತರಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಅವರು ತಿಳಿಸಿದ್ದಾರೆ.

'LEAP ಸಿಟೀಸ್ ಇಂಡೆಕ್ಸ್ 2026'ರಲ್ಲಿ ಮಂಗಳೂರು ಅಗ್ರಸ್ಥಾನ ಪಡೆದ ನಗರವಾಗಿ ಹೊರಹೊಮ್ಮಿದೆ. ಮಂಗಳೂರು ಭಾರತದ ಅತ್ಯಂತ ಭರವಸೆಯುಳ್ಳ 'ನಾನ್-ಮೆಟ್ರೋ' (ಮೆಟ್ರೋ ಅಲ್ಲದ) ನಗರವಾಗಿದೆ. ನಾವು ಇದನ್ನು ಇನ್ನಷ್ಟು ಉತ್ತಮಪಡಿಸಬೇಕು ಮತ್ತು ಮಂಗಳೂರಿನಲ್ಲಿ ಹೊಸ 'ಮೆಟ್ರೋ ಸಿಟಿ'ಯನ್ನು ನಿರ್ಮಿಸಬೇಕು ಎಂಬ ಗುರಿಯಿದೆ ಎಂದು ಹೇಳಿದ್ದಾರೆ.

ಕರಾವಳಿ ಭಾಗದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಈ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಗತ್ಯ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ ಎಂದೂ ಅವರು ತಿಳಿಸಿದ್ದಾರೆ.

ಜೊತೆಗೆ ವಿಮಾನ ನಿಲ್ದಾಣ ವಿಸ್ತರಣೆ, ತುಳು ಭಾಷೆಯನ್ನು ಸಂವಿಧಾನದ ಎಂಟನೇ ಅನುಸೂಚಿಗೆ ಸೇರ್ಪಡೆಗೊಳಿಸುವ ಬೇಡಿಕೆ ಹಾಗೂ ಕೊಂಕಣ ರೈಲ್ವೆ ಸಂಪರ್ಕ ಸುಧಾರಣೆ ಸೇರಿದಂತೆ ಕರಾವಳಿ ಭಾಗದ ಪ್ರಮುಖ ವಿಷಯಗಳಿಗೆ ಕೇಂದ್ರ ಮಟ್ಟದಲ್ಲಿ ಅಗತ್ಯ ಗಮನ ಹರಿಸಬೇಕೆಂದು ಸಚಿವರು ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಗೆ ಮುನ್ನ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ರಾಜ್ಯದಲ್ಲಿ ಉತ್ತಮ ಮಳೆ, ಬೆಳೆ ಹಾಗೂ ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor