ಮಾದಕ ವ್ಯಸನ, ಸೈಬರ್ ಕ್ರೈಮ್ ವಿರುದ್ಧ ಜನಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ
ಮಂಗಳೂರು, ಜ.28: ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ, ಮಂಗಳೂರು ನಗರ ಪೊಲೀಸ್ ಹಾಗೂ ರೋಶನಿ ನಿಲಯ ವಿದ್ಯಾಸಂಸ್ಥೆಗಳ ಸಹಯೋಗದಲ್ಲಿ ಸ್ಟೇಟ್ ಬ್ಯಾಂಕ್ನ ಕೇಂದ್ರ ಬಸ್ ನಿಲ್ದಾಣದ ಬಳಿ ಬುಧವಾರ ಮಾದಕ ದ್ರವ್ಯ ವ್ಯಸನ ಹಾಗೂ ಸೈಬರ್ ಕ್ರೈಮ್ ವಿರುದ್ಧ ಜನಜಾಗೃತಿ ಕಾರ್ಯಕ್ರಮ ನಡೆಯಿತು. ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ ಪಿ. ಉಮೇಶ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಮಾರಂಭದಲ್ಲಿ ಎಸಿಪಿ ರವೀಶ್ ನಾಯ್ಕ್ ಮಾತನಾಡಿ, ಮಾದಕ ದ್ರವ್ಯ ಬಳಕೆಯಿಂದ ಸಮಾಜದ ಮೇಲೆ ಬೀರುವ ದುಷ್ಪರಿಣಾಮಗಳ ಕುರಿತು ವಿವರಿಸಿದರು. ಮಾದಕ ದ್ರವ್ಯ ಸೇವನೆ ಒಂದು ಗಂಭೀರ ಪಿಡುಗಾಗಿದ್ದು, ಮಕ್ಕಳು ಅಥವಾ ಯುವಕರು ಈ ವ್ಯಸನಕ್ಕೆ ಒಳಗಾಗಿರುವ ಕುರಿತು ಪೊಲೀಸರ ಬಳಿ ಬಂದಲ್ಲಿ, ಅವರ ಮಾಹಿತಿಯನ್ನು ಗೌಪ್ಯವಾಗಿಟ್ಟುಕೊಂಡು ಚಿಕಿತ್ಸೆಗಾಗಿ ಸಹಾಯ ಮಾಡಲಾಗುತ್ತದೆ ಎಂದರು. ನಗರದಲ್ಲಿ ಮಾದಕ ಪದಾರ್ಥಗಳ ಪೂರೈಕೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಹೇಳಿದರು.
ಇದೇ ವೇಳೆ ಸೈಬರ್ ಕ್ರೈಮ್ ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗುತ್ತಿದೆ ಎಂದು ಎಚ್ಚರಿಸಿದ ಅವರು, ಸಾರ್ವಜನಿಕರು ಭಯಪಡದೆ ಧೈರ್ಯದಿಂದ ಎದುರಿಸಬೇಕು ಹಾಗೂ ಪೊಲೀಸರ ಸಹಾಯ ಪಡೆಯಬೇಕು ಎಂದು ಸಲಹೆ ನೀಡಿದರು. ಇದುವರೆಗೆ ಮಂಗಳೂರಿನಲ್ಲಿ ಸೈಬರ್ ಕ್ರೈಮ್ ಸಂಬಂಧ 6,500ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದರು.
ಲೋನ್ ಆ್ಯಪ್, ಗೇಮ್ ಆ್ಯಪ್ ಮೂಲಕ ಹಣ ವಂಚಿಸುವ ಜಾಲಗಳು, ಬ್ಲಾಕ್ಮೇಲ್, ಡಿಜಿಟಲ್ ಅರೆಸ್ಟ್, ಪೊಲೀಸ್ ವೇಷ ಧರಿಸಿ ಕರೆ ಮಾಡಿ ವಂಚಿಸುವ ಪ್ರಕರಣಗಳು ಹೆಚ್ಚಾಗಿವೆ. ಇದರಿಂದ ಅನೇಕ ಜನರ ಜೀವನಪೂರ್ತಿ ಉಳಿತಾಯ ನಷ್ಟವಾಗುತ್ತಿದೆ. ಈ ರೀತಿಯ ಸಮಸ್ಯೆ ಎದುರಾದರೆ 1930 ಸಂಖ್ಯೆಗೆ ಕರೆ ಮಾಡಿ ಪೊಲೀಸರ ಸಹಾಯ ಪಡೆಯಬಹುದು. ಇಂತಹ ಅನುಮಾನಾಸ್ಪದ ಕರೆಗಳ ಬಗ್ಗೆ ಆತ್ಮೀಯರೊಂದಿಗೆ ಚರ್ಚಿಸಿ ಎಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದರು.
ಎಸಿಪಿ ಪ್ರತಾಪ್ ಸಿಂಗ್ ಥೋರಟ್ ಅವರು ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ರೋಶನಿ ನಿಲಯ ಸಮಾಜಕಾರ್ಯ ಕಾಲೇಜಿನ ಉಪನ್ಯಾಸಕರಾದ ಸ್ಯಾಂಡ್ರೊ ಲೋಬೊ, ಸಾರಿಕಾ ಅಂಕಿತ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಅವರು ಜಾಗೃತಿ ಮಾಹಿತಿ ನೀಡಿದರು. ಬಳಿಕ ವಿದ್ಯಾರ್ಥಿಗಳು ಬೀದಿ ನಾಟಕದ ಮೂಲಕ ಜನಜಾಗೃತಿ ಮೂಡಿಸಿದರು.
ದಕ್ಷಿಣ ಕನ್ನಡ ಬಸ್ ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾದಕ ದ್ರವ್ಯ ವ್ಯಸನದ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರೋಶನಿ ನಿಲಯದ ವಿದ್ಯಾರ್ಥಿಗಳು ವಿವಿಧ ಕಡೆ ಬೀದಿ ನಾಟಕ ಕಾರ್ಯಕ್ರಮಗಳನ್ನು ನಡೆಸಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎಸಿಪಿ ಪ್ರತಾಪ್ ಸಿಂಗ್ ಥೋರಟ್, ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ದಕ್ಷಿಣ ಕನ್ನಡ ಬಸ್ ಮಾಲಕರ ಸಂಘದ ಪೂರ್ವಾಧ್ಯಕ್ಷ ಜಯರಾಮ ಶೇಖ್, ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್, ಜೊತೆ ಕಾರ್ಯದರ್ಶಿ ರಾಜೇಶ್ ಟಿ., ಕೋಶಾಧಿಕಾರಿ ಜೊಯೆಲ್ ದಿಲ್ರಾಜ್ ಫೆರ್ನಾಂಡೀಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್ ವಂದಿಸಿದರು.