ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿ ವಿಡಿಯೋ ವೈರಲ್; ಸಮೀರ್ ವಿರುದ್ಧದ ಸರ್ಕಾರದ ಕ್ರಮ ಖಂಡನಾರ್ಹ: ಎಐಡಿಎಸ್ಓ
ಮಂಗಳೂರು: ಇತ್ತೀಚೆಗೆ ಸಮೀರ್ ಎಂಬಾತನು ಸಾಮಾಜಿಕ ಜಾಲತಾಣದಲ್ಲಿ ಈ ಹಿಂದೆ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋವನ್ನು ಹರಿಬಿಟ್ಟಿದ್ದು, ಈ ಕುರಿತಂತೆ ಕ್ರಮ ಕೈಗೊಳ್ಳಬೇಕೆಂಬ ರಾಜ್ಯ ಸರ್ಕಾರದ ನಡೆಗೆ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ಅಸಮಾಧಾನ ವ್ಯಕ್ತಪಡಿಸಿದೆ.
ಈಗಾಗಲೇ, ಈ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳ ಕೈವಾಡವಿದೆಯೆಂಬ ಸಂದೇಹವಿರುವ ಕಾರಣ ನಿಷ್ಪಕ್ಷಪಾತವಾದ ತನಿಖೆಯನ್ನು ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ನಿರ್ವಹಿಸಬೇಕಿತ್ತು. ಬದಲಾಗಿ, ಸತ್ಯವನ್ನು ಹೊರ ತರಲು ಪ್ರಯತ್ನ ಪಡುತ್ತಿರುವವರ ಧ್ವನಿಯನ್ನು ಹತ್ತಿಕ್ಕುವುದು ಅತ್ಯಂತ ಶೋಚನೀಯ. ಇದು ಪ್ರಜಾಪ್ರಭುತ್ವದ ಆಶಯಗಳಿಗೆ ತದ್ವಿರುದ್ಧವಾಗಿದೆ.
ಈ ಪ್ರಕರಣದಲ್ಲಿ ಕೂಡಲೇ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕೆಂದು ಎಂದು ಎಐಡಿಎಸ್ಓ ಆಗ್ರಹಿಸುತ್ತದೆ. ಜೊತೆಗೆ, ಧ್ವನಿ ಎತ್ತಿರುವವರ ಮೇಲೆ ದಾಳಿ ನಡೆಸುವುದನ್ನು ಖಂಡಿಸುತ್ತದೆ ಎಂದು ಎಐಡಿಎಸ್ಓ ಜಿಲ್ಲಾ ಸಂಚಾಲಕ ವಿನಯ್ ಚಂದ್ರ ಎಸ್ ವಿ ಪ್ರಕಟನೆಯಲ್ಲಿ ತಿಳಿಸಿದ್ಧಾರೆ.