Davangere | ಒಂದೇ ಕುಟುಂಬದ ನಾಲ್ವರು ನಾಪತ್ತೆ: ಮನೆಯಲ್ಲಿ ಡೆತ್‌ನೋಟ್ ಪತ್ತೆ

Update: 2026-08-20 17:44 IST

ದಾವಣಗೆರೆ: ನಗರದ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬನಶಂಕರಿ ಬಡಾವಣೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದು, ಮನೆಯಲ್ಲಿ ಡೆತ್‌ನೋಟ್ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಬನಶಂಕರಿ ಬಡಾವಣೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕಂಟ್ರಾಕ್ಟರ್ ರಮೇಶ್‌ಕುಮಾರ್ (38), ಅವರ ಪತ್ನಿ ಜಯಶೀಲ (36), ಮಕ್ಕಳಾದ ಹಿತೇಶ್ (9) ಹಾಗೂ ಪ್ರೇರಣಾ (3) ನಾಪತ್ತೆಯಾಗಿದ್ದಾರೆ.

ಆ.14ರಂದು ಬೆಳಿಗ್ಗೆ ಬೆಂಗಳೂರಿಗೆ ಹೋಗಿ ಬರುವುದಾಗಿ ತಿಳಿಸಿ ರಮೇಶ್‌ಕುಮಾರ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಮನೆಯಿಂದ ತೆರಳಿದ್ದರು. ಮೂರು ದಿನಗಳಾದರೂ ಮನೆಗೆ ಮರಳದ ಹಿನ್ನೆಲೆಯಲ್ಲಿ ಹಾಗೂ ಮೊಬೈಲ್‌ಗಳು ಸಂಪರ್ಕಕ್ಕೆ ಸಿಗದ ಕಾರಣ ರಮೇಶ್‌ಕುಮಾರ್ ಅವರ ತಾಯಿ ಲಲಿತಮ್ಮ (68) ಅವರು ಮತ್ತೊಂದು ಕೀಲಿಯಿಂದ ಮನೆಯ ಬಾಗಿಲು ತೆರೆದು ಪರಿಶೀಲಿಸಿದ್ದಾರೆ.

ಈ ವೇಳೆ ದಂಪತಿಯ ಮೊಬೈಲ್ ಫೋನ್‌ಗಳು ಹಾಗೂ ಕಾರು ಮನೆಯಲ್ಲೇ ಪತ್ತೆಯಾಗಿವೆ. ಅಲ್ಲದೆ, ಮನೆಯಲ್ಲಿ ಡೆತ್‌ನೋಟ್ ಕೂಡ ಸಿಕ್ಕಿದ್ದು, ಅದರಲ್ಲಿ ಸಾಲದ ಬಾಧೆಯಿಂದಾಗಿ ಸಾವಿನ ಮೊರೆ ಹೋಗುತ್ತಿರುವುದಾಗಿ ಬರೆಯಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಲಲಿತಮ್ಮ ನೀಡಿದ ಲಿಖಿತ ದೂರಿನ ಆಧಾರದ ಮೇಲೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 187/2026ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ನಾಪತ್ತೆಯಾಗಿರುವ ದಂಪತಿ ಹಾಗೂ ಇಬ್ಬರು ಮಕ್ಕಳ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ. ಡೆತ್‌ನೋಟ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕುಟುಂಬದ ನಾಪತ್ತೆಯ ಹಿಂದಿನ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News