Dharwad | ಮೆಕ್ಕೆಜೋಳ ಖರೀದಿ ಭರವಸೆ: ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ರೈತರು
ಧಾರವಾಡ : ಕಳೆದ ಮೂರು ದಿನಗಳಿಂದ ನವಲಗುಂದ ಪಟ್ಟಣದಲ್ಲಿ ಸರಕಾರದ ಬೆಂಬಲ ಬೆಲೆ ಯೋಜನೆಯಲ್ಲಿ ಮೆಕ್ಕೆಜೋಳ ಖರೀದಿಗೆ ಅಗ್ರಹಿಸಿ ರೈತರು ನಡೆಸುತ್ತಿದ್ದ ಧರಣಿ, ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಸೋಮವಾರ ಶಾಸಕ ಎನ್.ಎಚ್.ಕೋನರಡ್ಡಿ ಹಾಗೂ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಭೇಟಿ ನೀಡಿ ರೈತರೊಂದಿಗೆ ಚರ್ಚಿಸಿದರು.
ಸರಕಾರದಿಂದ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿಸಲು ಸರಕಾರ ಮಟ್ಟದಲ್ಲಿ ಚರ್ಚಿಸಿ, ಕ್ರಮವಹಿಸಲಾಗುತ್ತಿದೆ. ಸ್ವಲ್ಪ ದಿನಗಳ ಕಾಲಾವಕಾಶ ನೀಡಿ, ಉಪವಾಸ ಸತ್ಯಾಗ್ರಹ, ಧರಣಿ ಹಿಂಪಡೆಯುವಂತೆ ಶಾಸಕರು ಮತ್ತು ಜಿಲ್ಲಾಧಿಕಾರಿ ಮಾಡಿದ ಮನವಿ ಪರಗಣಿಸಿ, ರೈತರು ಎಳನೀರು ಸೇವಿಸುವ ಮೂಲಕ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿ, ಧರಣಿ ಹಿಂಪಡೆದರು.
ಈ ಸಂದರ್ಭದಲ್ಲಿ ಶಾಸಕ ಎನ್.ಎಚ್.ಕೋನರಡ್ಡಿ ಮಾತನಾಡಿ, ಸರಕಾರದ ಮಟ್ಟದಲ್ಲಿ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಗೋವಿನ ಜೋಳದ ಖರೀದಿ ಬಗ್ಗೆ ಮಾತನಾಡಿದ್ದೇನೆ. ಕೇಂದ್ರ ಸರಕಾರ ಅನುಮತಿ ಕೊಡಲಿ ಬಿಡಲಿ ಗೋವಿನ ಜೋಳ ಖರೀದಿಗೆ ಸರಕಾರ ಬದ್ಧವಾಗಿದೆ. ಸಚಿವರಾದ ಎಚ್.ಕೆ.ಪಾಟೀಲ್ ಹಾಗೂ ಚಲವರಾಯಸ್ವಾಮಿ ಅವರನ್ನು ದಿಲ್ಲಿಗೆ ಕಳುಹಿಸಿ, ಗೊಂದಲಗಳನ್ನು ಸರಿಪಡಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ. ಶೀಘ್ರದಲ್ಲೆ ಖರೀದಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾಧಿಕಾರಿ ದಿವ್ಯಾ ಪ್ರಭು ಮಾತನಾಡಿ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ..ಶಾಲನಿ ರಜನೀಶ್ ಹಾಗೂ ಹಿರಿಯ ಅಧಿಕಾರಿಗಳು, ಮೆಕ್ಕೆಜೋಳ ಖರೀದಿಗೆ ಅಗತ್ಯವಿರುವ ಕ್ರಮಕೈಗೊಳ್ಳಲು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಬೆಳೆ ಹಾನಿ ಸಮೀಕ್ಷೆ ಮಾಡಿ ನವಲಗುಂದ ತಾಲೂಕಿಗೆ ಆದ್ಯತೆ ಮೇರೆಗೆ ಪರಿಹಾರ ನೀಡಿದ್ದು, ಇನ್ನೊಂದು ಹಂತದಲ್ಲಿ ಪರಿಹಾರ ಸಿಗಲಿದೆ ಎಂದು ರೈತರಿಗೆ ತಿಳಿಸಿದರು.
ಧಾರವಾಡ ಜಿಲ್ಲೆಯಲ್ಲಿ 95 ಸಾವಿರ ಹೆಕ್ಟರ್ ಬೆಳೆ ನಷ್ಟವಾಗಿದೆ. ಜಿಲ್ಲಾಡಳಿತವು 2 ಸಾರಿ ಪಟ್ಟಿಯನ್ನು ಸಿದ್ಧಪಡಿಸಿದೆ. ಈಗಾಗಲೇ 65 ಕೋಟಿ ರೂ. ಮೊತ್ತವನ್ನು ರೈತರಿಗೆ ಜಮಾ ಮಾಡಲಾಗಿದೆ. ಇನ್ನೂ ಅನುದಾನ ಬರುವುದು ಇದೆ. ನಂತರ ಅದನ್ನು ಸಹ ತಕ್ಷಣವೇ ನೇರವಾಗಿ ರೈತರ ಖಾತೆಗೆ ಜಮಾ ಮಾಡುತ್ತೇವೆ ಎಂದು ಅವರು ಹೇಳಿದರು.
ಶಾಸಕರು ಹಾಗೂ ಜಿಲ್ಲಾಧಿಕಾರಿ ಮನವಿಗೆ ಸ್ಪಂದಿಸಿ ರೈತ ಸೇನಾ ರಾಜ್ಯಾಧ್ಯಕ್ಷ ಶಂಕರ ಅಂಬಲಿ ಮಾತನಾಡಿ, ನಿಮ್ಮ ಮೇಲೆ ನಂಬಿಕೆ ಇಟ್ಟು ಕಾಲವಕಾಶ ನೀಡುತ್ತೇವೆ. ಭರವಸೆ ಭರವಸೆಯಾದರೆ ಮತ್ತೆ ಹೋರಾಟ ಮಾಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಲೋಕನಾಥ ಹೆಬಸೂರು, ರಘುನಾಥ ನಡುವಿನಮನಿ, ರಾಮದುರ್ಗ ರೈತ ಹೋರಾಟಗಾರ ಶಂಕರಗೌಡ ಪಾಟೀಲ್, ಆನಂದ ಹವಳಕೋಡ, ದೇವೆಂದ್ರಪ್ಪ ಹಳ್ಳದ, ಜೀವನ್ ಪವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಂ.ಹೊನಕೇರಿ, ತಹಶೀಲ್ದಾರ್ ಸುಧೀರ್ ಸಾಹುಕಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.