ವಿಬಿ ಜಿ ರಾಮ್ ಜಿ ಕಾಯ್ದೆ ಬಗ್ಗೆ ಕಾಂಗ್ರೆಸ್ ತಪ್ಪು ಸಂದೇಶ ಕೊಡುತ್ತಿದೆ : ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ, ಫೆ.28: ಕೇಂದ್ರ ಸರಕಾರವು ಜಾರಿಗೆ ತಂದಿರುವ ‘ವಿಬಿ ಜಿ ರಾಮ್ ಜಿ ಕಾಯ್ದೆ’ ಬಗ್ಗೆ ದೇಶದ ಜನಕ್ಕೆ ಕಾಂಗ್ರೆಸ್ ತಪ್ಪು ಸಂದೇಶ ಕೊಡುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು.
ಶನಿವಾರ ಇಲ್ಲಿನ ಅರವಿಂದ ನಗರದಲ್ಲಿರವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ವಿಬಿ ಜಿ ರಾಮ್ ಜಿ' ಕುರಿತು ಮಾತನಾಡಿದ ಅವರು, ಈ ಹಿಂದೆ ಮನರೇಗಾದಲ್ಲಿ ಅನುದಾನ ಸೋರಿಕೆ ದೊಡ್ಡ ಪ್ರಮಾಣದಲ್ಲಿತ್ತು. ಭ್ರಷ್ಟಾಚಾರ ವ್ಯಾಪಕವಾಗಿತ್ತು. ಅಲ್ಲದೆ, ನಕಲಿ ಜಾಬ್ ಕಾರ್ಡ್ಗಳನ್ನು ಸೃಷ್ಟಿಸಲಾಗುತ್ತಿತ್ತು. ಇದೀಗ ಇದೆಲ್ಲದಕ್ಕೂ ಕಡಿವಾಣ ಬೀಳಲಿದೆ. ಆ ಕಾರಣಕ್ಕೆ ಕಾಂಗ್ರೆಸ್ ತಗಾದೆ ತೆಗೆಯುತ್ತಿದೆ ಎಂದು ದೂರಿದರು.
ಎನ್ಡಿಎ ಸರಕಾರ ಜಾರಿಗೆ ತಂದ ವಿಬಿ-ಜಿ ರಾಮ್ ಜಿ ಯೋಜನೆ ಮೂಲಕ ಗ್ರಾಮೀಣ ಭಾಗದ ಜನರಿಗೆ 125 ದಿನಗಳ ಉದ್ಯೋಗ ಖಾತರಿ ದೊರೆಯಲಿದೆ. ಕೃತಕಬುದ್ಧಿಮತ್ತೆ ಚಾಲಿತ ಮೇಲ್ವಿಚಾರಣೆ, ಬಯೋಮೆಟ್ರಿಕ್ ಹಾಜರಾತಿ ಮತ್ತು ಡಿಜಿಟಲ್ ಲೆಕ್ಕಪರಿಶೋಧನೆಗಳೊಂದಿಗೆ ಈಗ ಸಂಪೂರ್ಣ ಪ್ರಕ್ರಿಯೆ ಪಾರದರ್ಶಕವಾಗಲಿದೆ ಎಂದು ಪ್ರಹ್ಲಾದ್ ಜೋಶಿ ಹೇಳಿದರು.
ವಿಬಿ ಜಿ ರಾಮ್ ಜಿ ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಲಿದೆ. ಅಲ್ಲದೆ, ಗ್ರಾಮೀಣ ಭಾರತದ ಆರ್ಥಿಕತೆಗೆ ಹೊಸ ಶಕ್ತಿ ನೀಡಲಿದೆ ಮತ್ತು ವಿಕಸಿತ ಭಾರತ ನಿರ್ಮಾಣಕ್ಕೆ ಮಹತ್ವದ ಹೆಜ್ಜೆಯಾಗಲಿದೆ ಎಂದು ಅವರು ಪ್ರತಿಪಾದಿಸಿದರು.