ಸ್ವಾತಂತ್ರ್ಯ ಹೋರಾಟಗಾರರ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಬೇಕು: ಸಂತೋಷ್ ಲಾಡ್
ಧಾರವಾಡ : ನಮ್ಮ ದೇಶದ ಯುವಕರು, ಬುದ್ಧ, ಬಸವ ಅವರ ಹಾದಿಯಲ್ಲಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ಸಿಂಗ್, ರಾಜಗುರು, ಸುಖದೇವ, ಸುಭಾಷ್ ಚಂದ್ರ ಬೋಸ್ ಅವರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು.
ಗುರುವಾರ ಧಾರವಾಡ ಜಿಲ್ಲಾಡಳಿತವು ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವದ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಸಭಿಕರನ್ನುದ್ದೇಶಿಸಿ ಮಾತನಾಡಿದರು.
ಭಾರತವು ಜಿಡಿಪಿಯಲ್ಲಿ ಆರನೇ ಸ್ಥಾನದಲ್ಲಿ ಇದೆ. ಇವತ್ತು ಈ ದೇಶದಲ್ಲಿ ಶೇ.1ರಷ್ಟು ಮಂದಿ ಶೇ.40ರಷ್ಟು ಆಸ್ತಿ ಹೊಂದಿದ್ದಾರೆ. ಸುಮಾರು 9 ಕೋಟಿ ಜನರು ತೆರಿಗೆ ವ್ಯಾಪ್ತಿಯಲ್ಲಿ ಬರುತ್ತಾರೆ. ಆದರೆ 4.5 ಕೋಟಿ ಜನ ಮಾತ್ರ ತೆರಿಗೆಯನ್ನು ಪಾವತಿಸುತ್ತಿದ್ದಾರೆ. ಅರ್ಹ ತೆರಿಗೆದಾರರು ನಿಯಮಾನುಸಾರ ಪ್ರಾಮಾಣಿಕವಾಗಿ ತೆರಿಗೆ ಪಾವತಿಸಿದರೆ, ಅಭಿವೃದ್ಧಿ ಹೊಂದಲು ಸಹಕಾರಿಯಾಗುತ್ತದೆ ಎಂದು ಅವರು ಹೇಳಿದರು.
ಭಾರತವು ದೇಶವು ಅಭಿವೃದ್ಧಿ ಹೊಂದಲು ದೇಶದ ಏಕತೆ, ಸಂಸ್ಕೃ ತಿ, ವಿಶೇಷವಾಗಿ ಹಿಂದೂ, ಮುಸ್ಲಿಂ, ಸಿಖ್, ಕ್ರಿಶ್ಚಿಯನ್ ಹಾಗೂ ಇತರರು, ಎಲ್ಲರೂ ಒಂದೇ ಎಂದು ಸಹಬಾಳ್ವೆಯಿಂದ ಇದ್ದಾಗ ದೇಶದ ಏಕತೆಯ ಸಂಸ್ಕೃತಿಯನ್ನು ಕಾಪಾಡಲು ಸಹಾಯವಾಗುತ್ತದೆ ಎಂದು ಸಂತೋಷ್ ಲಾಡ್ ತಿಳಿಸಿದರು.
ಸ್ವಾತಂತ್ರ್ಯ ದಿನವು ಕೇವಲ ರಜಾದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ದೇಶದ ಸ್ವಾತಂತ್ರ್ಯ ಹೋರಾಟವು ವಿಶ್ವದ ಇತಿಹಾಸದಲ್ಲೇ ಅತ್ಯಂತ ಉತ್ತಮವಾದ ಚಳವಳಿಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದರು.
ಸ್ವಾತಂತ್ರ್ಯದ ಚಳವಳಿಯನ್ನು ರೂಪಿಸಿದ ನಮ್ಮ ಹಿರಿಯ ಹೋರಾಟಗಾರರಾದ ರಾಜಾರಾಮ್ ಮೋಹನ್ ರಾಯ್, ಝಾನ್ಸಿ ರಾಣಿ ಲಕ್ಷ್ಮಿಬಾಯಿ, ದಾದಾಬಾಯಿ ನವರೋಜಿ, ಬಾಲ ಗಂಗಾಧರ ತಿಲಕ್, ಲಾಲಾ ಲಜಪತ್ ರಾಯ್, ಗೋಪಾಲಕೃಷ್ಣ ಗೋಖಲೆ, ಮಹಾತ್ಮ ಗಾಂಧೀಜಿ, ಅಬುಲ್ ಕಲಾಂ ಆಝಾದ್, ಜವಾಹರಲಾಲ್ ನೆಹರು, ನೇತಾಜಿ ಸುಭಾಷ್ ಚಂದ್ರ ಭೋಸ್, ಅಂಬೇಡ್ಕರ್, ಭಗತ್ ಸಿಂಗ್ ಮೊದಲಾದ ಮಹನೀಯರನ್ನು ನೆನಪಿಸಿಕೊಳ್ಳೋಣ ಎಂದು ಸಂತೋಷ್ ಲಾಡ್ ತಿಳಿಸಿದರು.
ಧಾರವಾಡ ಜಿಲ್ಲೆಯ ಮೈಲಾರ ಮಹದೇವಪ್ಪ, ಆರ್.ಆರ್.ದಿವಾಕರ್, ಉಮಾಬಾಯಿ ಕುಂದಾಪುರ, ಎನ್.ಎಸ್.ಹರಡೀಕರ್, ಕೆ.ಎಫ್.ಪಾಟೀಲ್, ಗೋವಿಂದಾಚಾರ್ಯ ಅಗ್ನಿಹೋತ್ರಿ, ಡೆಪ್ಯೂಟಿ ಚನ್ನಬಸಪ್ಪ, ಸರ್.ಸಿದ್ದಪ್ಪ ಕಂಬಳಿ, ಅರಟಾಳ ರುದ್ರಗೌಡರು ಸ್ವಾತಂತ್ರ್ಯ ಹೋರಾಟದಲ್ಲಿ ಕೈ ಜೋಡಿಸಿದ್ದರು. ರಾಷ್ಟ್ರಧ್ವಜವನ್ನು ಧಾರವಾಡದ ಗರಗ ಹಾಗೂ ಹುಬ್ಬಳ್ಳಿಯ ಬೆಂಗೇರಿಯಲ್ಲಿ ಸಿದ್ಧಪಡಿಸಿ, ಇಡೀ ದೇಶಕ್ಕೆ ಒದಗಿಸಲಾಗುತ್ತಿದೆ. ವಿಜ್ಞಾನ, ತಂತ್ರಜ್ಞಾನ, ಕೃಷಿ, ಕೈಗಾರಿಕೆ, ಶಿಕ್ಷಣ, ಆರೋಗ್ಯ ಮತ್ತು ಮೂಲ ಸೌಕರ್ಯ ಕ್ಷೇತ್ರಗಳಲ್ಲಿ ದೇಶ ಹೆಚ್ಚಿನ ಸಾಧನೆ ಮಾಡಿದೆ. ಈ ಅಭಿವೃದ್ಧಿಯ ಪಯಣದಲ್ಲಿ ಕರ್ನಾಟಕ ಮತ್ತು ಧಾರವಾಡ ಜಿಲ್ಲೆಯ ಕೊಡುಗೆಯೂ ಉತ್ತಮವಾಗಿದೆ ಎಂದು ಅವರು ಹೇಳಿದರು.
ಶಾಸಕರಾದ ಎಫ್.ಎಚ್.ಜಕ್ಕಪ್ಪನವರ, ಜಿಲ್ಲಾಧಿಕಾರಿ ಸ್ನೇಹಲ್ ಆರ್., ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಜಿ.ಪಂ. ಸಿಇಓ ಪಾಟೀಲ್ ಭುವನೇಶ್ ದೇವಿದಾಸ್, ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಕೈಮಗ್ಗ ಅಭಿವೃಧ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಗರಿಮಾ ಪವಾರ್, ಪ್ರೊಬೆಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಉಪವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪುರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಗಳು, ಜನಪ್ರತಿನಿಧಿಗಳು, ಮುಖಂಡರು ವೇದಿಕೆಯಲ್ಲಿದ್ದರು.