ಗದಗ : ಬರ ಘೋಷಣೆ ಮಾಡದ ಸರಕಾರದ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ. ರೈತರ ಹೋರಾಟದ ವೇದಿಕೆಯಲ್ಲೇ ಮಾಜಿ ಸಚಿವ ಹಾಗೂ ಶಾಸಕ ಎಚ್.ಕೆ.ಪಾಟೀಲ್ ʼರಾಜೀನಾಮೆ ಬಾಂಬ್ʼ ಸಿಡಿಸಿದ ಘಟನೆ ಗದಗ ತಾಲೂಕಿನ ಮುಳಗುಂದ ಪಟ್ಟಣದಲ್ಲಿ ನಡೆದಿದೆ.

ಗದಗ ತಾಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡದ ಸರಕಾರದ ವಿರುದ್ಧ ರೈತರು ಇಂದು(ರವಿವಾರ) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಳಗುಂದ ಪಟ್ಟಣದಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿ, ರಸ್ತೆ ತಡೆದು ಸರಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಮುಳಗುಂದದ ಗಣೇಶ್ ಗುಡಿಯಿಂದ ಬಸಾಪುರ ಕ್ರಾಸ್‌ವರೆಗೆ ರೈತರ ಪ್ರತಿಭಟನಾ ಮೆರವಣಿಗೆ ನಡೆಸಿ, ಕಾರವಾರ–ಕೈಗಾ ಹಾಗೂ ಗದಗ–ಇಳಕಲ್ ರಾಜ್ಯ ಹೆದ್ದಾರಿ ತಡೆದು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಸರಕಾರದ ವಿರುದ್ಧ ಧಿಕ್ಕಾರ ಕೂಗಿದ ರೈತರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧವೂ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಇದೇ ವೇಳೆ ರೈತರ ಹೋರಾಟದ ಸ್ಥಳಕ್ಕೆ ಆಗಮಿಸಿದ ಶಾಸಕ ಎಚ್.ಕೆ.ಪಾಟೀಲ್, ʼಗದಗ ತಾಲೂಕಿನಲ್ಲಿ ಶೇಕಡಾ -49ರಷ್ಟು ಮಳೆ ಕೊರತೆಯಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಿ, ಗದಗದ ಬರ ಪರಿಸ್ಥಿತಿಯ ಬಗ್ಗೆ ಸರಕಾರಕ್ಕೆ ಸ್ಪಷ್ಟ ಮಾಹಿತಿ ನೀಡಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಕದಾಂಪುರದಿಂದ ಕುರ್ತಕೋಟಿವರೆಗೆ ಬೆಳೆ ವೀಕ್ಷಣೆ ಮಾಡಿದ್ದರು. ಇಷ್ಟೆಲ್ಲಾ ಆದರೂ ಗದಗ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡದಿರುವುದು ಏಕೆ?. ಯಾರು ಬರ ಘೋಷಣೆ ಮಾಡಲು ಅಡ್ಡಿಯಾಗಿದ್ದಾರೆ..? ಅನ್ಯಾಯ, ಮೋಸ ಸಹಿಸೋದಕ್ಕೆ ಸಾಧ್ಯವಿಲ್ಲ..! ಎಂದು ಹೇಳಿದ್ದಾರೆ.

ನಾನು ರೈತ ಕುಟುಂಬದಿಂದ ಬಂದವನು. ರೈತರ ಸಂಕಷ್ಟದ ಅರಿವಿದೆ ಎಂದು ಹೇಳಿದ ಎಚ್.ಕೆ. ಪಾಟೀಲ್, ಮೂರು ದಿನಗಳಲ್ಲಿ ಬರ ಘೋಷಣೆಗಾಗಿ ಸರಕಾರದ ಮಟ್ಟದಲ್ಲಿ ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ. ಅದು ಸಾಧ್ಯವಾಗದಿದ್ದರೆ ವಿಧಾನಸಭೆಯಲ್ಲಿ ಸರಕಾರಕ್ಕೆ ಅಕ್ಟೋಬರ್ 10ರ ವರೆಗೆ ಗಡುವು ನೀಡುತ್ತೇನೆ. ಅಕ್ಟೋಬರ್ 10ರೊಳಗೆ ಗದಗ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ರೈತರ ಎದುರೇ ಎಚ್.ಕೆ. ಪಾಟೀಲ್ ಘೋಷಿಸಿದ್ದಾರೆ.

ಉತ್ತರ ಕರ್ನಾಟಕದ 73 ತಾಲೂಕುಗಳ ಪೈಕಿ 27 ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಕೈಬಿಡಲಾಗಿದೆ. ಈ ಎಲ್ಲ ತಾಲೂಕುಗಳನ್ನೂ ಬರಪೀಡಿತ ಎಂದು ಘೋಷಿಸಬೇಕು ಎಂದು ಸ್ವಪಕ್ಷದ ಸರಕಾರವನ್ನು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor