Hassan | ಹಿಟ್ ಆಂಡ್ ರನ್: ಬೈಕ್ ಸವಾರರಿಬ್ಬರು ಮೃತ್ಯು
ಹಾಸನ: ಮೇ,21: ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಳಗಲಿ ಗ್ರಾಮದ ಬಳಿ ಬುಧವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಮೃತರನ್ನು ಗಂಡಸಿ ಹೋಬಳಿಯ ಕಾಲೇನಹಳ್ಳಿ ಗ್ರಾಮದ ನಿವಾಸಿಗಳಾದ ಪ್ರದೀಪ್ (22) ಮತ್ತು ಅರುಣ್ (21) ಎಂದು ಗುರುತಿಸಲಾಗಿದೆ.
ಇವರಿಬ್ಬರು ಬುಧವಾರ ರಾತ್ರಿ ಬೆಳಗಲಿ ಗ್ರಾಮದಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೈಕಿನಲ್ಲಿ ತಮ್ಮ ಊರಿಗೆ ಮರಳುತ್ತಿದ್ದರು. ಈ ವೇಳೆ ಸೇತುವೆ ಸಮೀಪ ಯಾವುದೋ ಅಪರಿಚಿತ ವಾಹನ ಅವರ ಬೈಕಿಗೆ ವೇಗವಾಗಿ ಢಿಕ್ಕಿ ಹೊಡೆದಿದೆ.
ಢಿಕ್ಕಿಯ ತೀವ್ರತೆಗೆ ಇಬ್ಬರೂ ಯುವಕರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ನಂತರ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಇದು ಹಿಟ್ ಅಂಡ್ ರನ್ ಪ್ರಕರಣವೆಂದು ಶಂಕಿಸಲಾಗಿದೆ.
ಈ ಕುರಿತು ನುಗ್ಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.