ಹಾಸನ | ಕಾಲುಜಾರಿ ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು
Update: 2026-08-23 12:49 IST
ಹಾಸನ: ರೈಲನ್ನು ಏರುವ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಹಳಿಗೆ ಬಿದ್ದ ವ್ಯಕ್ತಿ ರೈಲಿನಡಿಗೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಹೊಳೆನರಸೀಪುರ ರೈಲ್ವೆ ನಿಲ್ದಾಣದಲ್ಲಿ ಶನಿವಾರ ರಾತ್ರಿ ನಡೆದಿದೆ.
ಮೃತರನ್ನು ಹೊಳೆನರಸೀಪುರ ತಾಲೂಕಿನ ಕೆ.ಮುದ್ದನಹಳ್ಳಿ ಗ್ರಾಮದ ನಾಗರಾಜು(48) ಎಂದು ಗುರುತಿಸಲಾಗಿದೆ.
ಕಳೆದ ರಾತ್ರಿ ಬೆಂಗಳೂರಿಗೆ ಹೊರಟಿದ್ದ ನಾಗರಾಜು, ನಿಧಾನವಾಗಿ ಚಲಿಸುತ್ತಿದ್ದ ರೈಲನ್ನು ಏರುವ ಪ್ರಯತ್ನದಲ್ಲಿ ಆಕಸ್ಮಿಕವಾಗಿ ಕಾಲುಜಾರಿ ಹಳಿ ಮೇಲೆ ಬಿದ್ದಿದ್ದಾರೆ. ಈ ವೇಳೆ ಅವರ ಮೈಮೇಲೆ ರೈಲು ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.