ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ಹೊಣೆಯನ್ನು ಕೇಂದ್ರ ಸರಕಾರ ಹೊತ್ತುಕೊಳ್ಳಲಿ: ಜಗದೇವ ಗುತ್ತೇದಾರ
ಕಲಬುರಗಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟಾಗಿದ್ದು, ಕೇಂದ್ರ ಸರಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಈ ಕುರಿತು ಹೊಣೆ ಹೊತ್ತು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಆಗ್ರಹಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪರೀಕ್ಷೆಗೆ ವಿದ್ಯಾರ್ಥಿಗಳು ವರ್ಷಪೂರ್ತಿ ಶ್ರಮಪಟ್ಟು ಸಿದ್ಧತೆ ನಡೆಸುತ್ತಾರೆ. ಆದರೆ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಅವರ ಪರಿಶ್ರಮ ವ್ಯರ್ಥವಾಗಿದ್ದು, ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಹೇಳಿದರು.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ ಹಲವು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿದ್ದರೂ, ಅವುಗಳನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಅವರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಕೂಡ ಸ್ಪಷ್ಟನೆ ನೀಡದೆ ಮೌನ ವಹಿಸಿರುವುದು ಖಂಡನೀಯ ಎಂದರು.
ಆರೆಸ್ಸೆಸ್ ನೋಂದಣಿ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಕೇಳಿರುವ ಪ್ರಶ್ನೆಗೆ ಸಂಘದ ನಾಯಕರು ಇದುವರೆಗೆ ಉತ್ತರ ನೀಡಿಲ್ಲ. ಅವರು ಎತ್ತಿರುವ ಪ್ರಶ್ನೆಗೆ ಸಮರ್ಪಕ ಉತ್ತರ ನೀಡಬೇಕು. ಈ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಪ್ರಿಯಾಂಕ್ ಖರ್ಗೆಯವರ ಬೆಂಬಲಕ್ಕೆ ನಿಲ್ಲಲಿದೆ ಎಂದು ಹೇಳಿದರು.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ನೀಟ್ ಪರೀಕ್ಷೆ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಉಂಟಾಗಿರುವ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. ಕೆಲವು ರಾಜ್ಯಗಳು ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ರಾಜ್ಯ ಮಟ್ಟದಲ್ಲೇ ನಡೆಸುವ ಬಗ್ಗೆ ಚಿಂತನೆ ನಡೆಸಿದೆ. ಇದಕ್ಕೆ ಕೇಂದ್ರ ಸರಕಾರ ಸ್ಪಂದಿಸಬೇಕು ಎಂದು ಅಭಿಪ್ರಾಯಪಟ್ಟರು.
ಕೆಪಿಸಿಸಿ ಉಪಾಧ್ಯಕ್ಷ ಸುಭಾಷ್ ರಾಠೋಡ ಮಾತನಾಡಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ವಿರುದ್ಧ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆಗೆ ಯಾರು ಹೊಣೆ ಎಂಬುದನ್ನು ಕೇಂದ್ರ ಸರಕಾರ ಸ್ಪಷ್ಟಪಡಿಸಬೇಕು. ಇಂತಹ ಘಟನೆಗಳಿಂದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗುತ್ತಿದ್ದು, ಹಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ವೈದ್ಯಕೀಯ ಪ್ರವೇಶ ಪರೀಕ್ಷೆಗಳ ವ್ಯವಸ್ಥೆಯಲ್ಲಿ ಆಮೂಲಾಗ್ರ ಸುಧಾರಣೆ ಅಗತ್ಯವಿದ್ದು, ಕೇಂದ್ರ ಸರ್ಕಾರವು ರಾಜ್ಯಗಳ ವೈದ್ಯಕೀಯ ಶಿಕ್ಷಣ ಸಚಿವರೊಂದಿಗೆ ಸಮಾಲೋಚನೆ ನಡೆಸಿ ಪಾರದರ್ಶಕ ಪರೀಕ್ಷಾ ವ್ಯವಸ್ಥೆ ರೂಪಿಸಬೇಕು ಎಂದು ಅವರು ಆಗ್ರಹಿಸಿದರು.
ದೇಶದಲ್ಲಿ ಕಾರ್ಯನಿರ್ವಹಿಸುವ ಎಲ್ಲ ಸಂಘ-ಸಂಸ್ಥೆಗಳಂತೆ ಆರೆಸ್ಸೆಸ್ ಕೂಡ ಕಾನೂನುಬದ್ಧವಾಗಿ ನೋಂದಣಿ ಮಾಡಿಸಿಕೊಳ್ಳಬೇಕು. ಪಾರದರ್ಶಕತೆ ಪ್ರಜಾಪ್ರಭುತ್ವದ ಮೂಲ ತತ್ವವಾಗಿದ್ದು, ಸಂಘಟನೆಗಳು ದೇಶದ ಹಿತಾಸಕ್ತಿಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು ಎಂದ ಅವರು, ಪೇಜಾವರ ಶ್ರೀಗಳೂ ಸಂಘದ ನೋಂದಣಿಯ ಮಾಡುವ ಕುರಿತು ಅಭಿಪ್ರಾಯ ಕೊಟ್ಟಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜಗೋಪಾಲರೆಡ್ಡಿ, ಭೀಮರಾವ ಟಿಟಿ, ಮೆಹಮೂದ್ ಪಟೇಲ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.